ಉಪ ಚುನಾವಣೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಮೌನ!
ಸ್ವತಃ ಪಕ್ಷದ ಅಧ್ಯಕ್ಷ ಬಿ.ಶ್ರೀರಾಮುಲು ಅವರು ಇಂತಹ ಹೇಳಿಕೆ ನೀಡಿದ್ದು, ಕೆಜೆಪಿ, ಬಿಜೆಪಿ ಮತ್ತು ಬಿಎಸ್ಆರ್ ಒಟ್ಟಾಗಿ ಕಾಂಗ್ರೆಸ್ ಎದುರಿಸುವ ಪ್ರಸ್ತಾಪವನ್ನು ಅವರು ತಳ್ಳಿ ಹಾಕಿದ್ದಾರೆ. ಎರಡು ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು ಮತ್ತು ಮಂಡ್ಯ ಭಾಗದಲ್ಲಿ ಪಕ್ಷದ ಪ್ರಾಬಲ್ಯ ಕಡಿಮೆ ಇದೆ. ಆದ್ದರಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ತಟಸ್ಥವಾಗಿರಲು ತೀರ್ಮಾನಿಸಿರುವುದು ಒಂದು ಕಡೆಯಾದರೆ, ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಶ್ರೀರಾಮುಲು, ಸಿದ್ಧತೆ ಪ್ರಾರಂಭಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 2.7 ರಷ್ಟು ಮತಗಳನ್ನು ಪಡೆದಿತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ 3,217 ಮತಗಳು ಮತ್ತು ಮಂಡ್ಯ ಜಿಲ್ಲೆಯಲ್ಲಿ 12,162 ಮತಗಳನ್ನು ಪಡೆದಿತ್ತು.
ಇದರಿಂದಾಗಿ ಜಿಲ್ಲೆಗಳಲ್ಲಿ ಪಕ್ಷದ ಅಸ್ತಿತ್ವ ಏನೆಂಬುದು ಶ್ರೀರಾಮುಲು ಅವರಿಗೆ ಮನವರಿಕೆಯಾಗಿದೆ. ಆದ್ದರಿಂದ ಎರಡು ಕ್ಷೇತ್ರಗಳ ಲೋಕಸಭೆ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸದೆ ತಟಸ್ಥವಾಗಿರಲು ನಿರ್ಧರಿಸಿದ್ದಾರೆ.
ಬಿಜೆಪಿ ಜೊತೆ ವಿಲೀನವಿಲ್ಲ : ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಪ್ರಸ್ತಾಪವಿಲ್ಲ ಎಂದು ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಸೇರಿದಂತೆ ಆರು ಸ್ಥಾನಗಳಲ್ಲಿ ಪಕ್ಷ ಜಯಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಎಸ್ಆರ್ ಉಪ ಚುನಾವಣಾ ಕಣದಿಂದ ಹಿಂದೆ ಸರಿದಿದೆ. ಇತರ ಪಕ್ಷಗಳು ಉಪ ಚುನಾವಣೆಗೆ ಅಭ್ಯರ್ಥಿಗಳ ಹುಡುಕಾಟದಲ್ಲಿ ತೊಡಗಿವೆ. ಎರಡು ದಿನಗಳಲ್ಲಿ ಉಪ ಚುನಾವಣೆ ಎದುರಿಸುವ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆ ಇದೆ.