ಕೆಂಗೇರಿ : ನಿರ್ಮಾಣ ಹಂತದ ಕಟ್ಟಡ ಕುಸಿತ, 3 ಸಾವು
ಬೆಂಗಳೂರು, ಆ.5 : ಕೆಂಗೇರಿಯ ಬಂಡೇಮಠ ಸಮೀಪ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳ ಅಡಿ ಹಲವಾರು ಕಾರ್ಮಿಕರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ಮೂವರ ಶವಗಳನ್ನು ಹೊರತೆಗೆಯಲಾಗಿದೆ.
ಸೋಮವಾರ ಬೆಳಗ್ಗೆ 11.10ರ ಸುಮಾರಿಗೆ ಕೆಂಗೇರಿ ಬಳಿಯ ಬಂಡೇಮಠ ಸಮೀಪದ ಕುಗಟ್ಟ ಬಳಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಲ್ಯಾಣ ಮಂಟಪದ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡ ನಿರ್ಮಾಣದಲ್ಲಿ 50ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇದುವರೆಗೂ ಮೂವರ ಶವಗಳನ್ನು ಹೊರತೆಗೆಯಲಾಗಿದ್ದು, 12 ಮಂದಿ ಘಟನೆಯಿಂದಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವನ್ನಪ್ಪಿದವರನ್ನು ಶಿವಣ್ಣ, ಸುಮಿತ್ ಮತ್ತು ಪಿಂಕೋ ಎಂದು ಗುರುತಿಸಲಾಗಿದೆ. 8 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
ಕೆಂಗೇರಿ ಪೊಲೀಸರು ಮತ್ತು ನಗರ ಪೊಲೀಸ್ ಕಮೀಷನ್ ರಾಘವೇಂದ್ರ ಔರಾದ್ಕರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಉತ್ತರ ಭಾರತ ಮತ್ತು ಉತ್ತರ ಕರ್ನಾಟಕ ಭಾಗದ ಕಾರ್ಮಿಕರು ಕೆಲಸ ನಿರ್ವಹಿಸುದ್ದರು ಎಂದು ಪೊಲೀಸರು ಹೇಳಿದ್ದಾರೆ.
ಗೃಹ ಸಚಿವರ ಭೇಟಿ : ಘಟನಾ ಸ್ಥಳಕ್ಕೆ ಗೃಹ ಸಚಿವ ಕೆ.ಜೆ.ಜಾರ್ಜ ಮತ್ತು ಬೆಂಗಳೂರು ಜಿಲ್ಲಾ ಉಸ್ತುವಾರಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಕಟ್ಟಡ ಮಾಲೀಕರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೆ.ಜೆ.ಜಾರ್ಜ್ ಭರವಸೆ ನೀಡಿದ್ದಾರೆ. ಕಟ್ಟಡದ ಮಾಲೀಕರು ಯಾರು ಎಂಬುದು ಇನ್ನೂ ತಿಳಿದು ಬಂದಿಲ್ಲ.












Click it and Unblock the Notifications