ಬಿ.ಎಸ್.ಯಡಿಯೂರಪ್ಪ ಅವರಿಂದ ಕೆಲವು ಸ್ಪಷ್ಟನೆಗಳು!

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಸೇರುವ ಅಥವ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಯಾವ ಆಲೋಚನೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ಲೋಕಸಭೆ ಚುನಾವಣೆಲ್ಲಿ ಇತರ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದರು.
ನಾನು ಬಿಜೆಪಿಗೆ ಮರಳುವಂತೆ ಸಂಸದ ಡಿ.ಬಿ.ಚಂದ್ರೇಗೌಡ ಮುಂತಾದ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ಅವರು ಆ ಪ್ರಯತ್ನಗಳನ್ನು ಕೈ ಬಿಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದರು. ತಾವು ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳುವುದಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಕೆಜೆಪಿ ಪಕ್ಷವನ್ನು ಬಲಪಡಿಸಲು ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಪ್ರತಿ ಜಿಲ್ಲೆಯಲ್ಲಿಯೂ ಪಕ್ಷವನ್ನು ಬಲ ಪಡಿಸುತ್ತೇನೆ. ಮುಂದಿನ ಲೋಕಸಭೆ ಚುನಾವಣೆಗೆ ರಾಜ್ಯದ 12 ಕ್ಷೇತ್ರಗಳಲ್ಲಿ ಕೆಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ, ಮಂಡ್ಯ ಲೋಕಸಭೆಯ ಉಪ ಚುನಾವಣೆಯಲ್ಲಿ ಕೆಜೆಪಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿಲ್ಲ. ಲೋಕಸಭೆ ಚುನಾವಣೆಗೆ ಪಕ್ಷ ಸಿದ್ಧತೆ ಆರಂಭಿಸಿದ್ದು, ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಪರಿಷತ್ ಚುನಾವಣೆಗೆ ಸ್ಪರ್ಧೆ : ಧಾರವಾಡ ಮತ್ತು ಮೈಸೂರು ಸ್ಥಳೀಯ ಸಂಸ್ಥೆಯಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕೆಜೆಪಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು. ಚಿತ್ರದುರ್ಗ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿಲ್ಲ ಎಂದರು. (ವಿಧಾನ ಪರಿಷತ್ ಚುನಾವಣಾ ಅಖಾಡಕ್ಕೆ ಕೆಜೆಪಿ?)
ಲೋಕಸಭೆ ಚುನಾವಣೆಯಲ್ಲಿ ಕೆಜೆಪಿ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಅನ್ಯ ಪಕ್ಷಗಳ ಜತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ. ಕೆಜೆಪಿ ಸಂಘಟನೆ ಹಾಗೂ ಜಿಲ್ಲಾಧ್ಯಕ್ಷರ ಪುನರ್ ಆಯ್ಕೆ ಕುರಿತು ಬೆಂಗಳೂರಿನಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು ಎಂದು ಹೇಳಿದರು.












Click it and Unblock the Notifications