ಒಂದು ಸ್ಥಾನದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ?
ಬೆಂಗಳೂರು, ಆ.6 : ಲೋಕಸಭೆ ಉಪ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೃಷ್ಣಪ್ಪ ನಾಮಪತ್ರ ವಾಪಸ್ ಪಡೆದು, ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವ ಸಾಧ್ಯತೆ ಇದೆ.
ಉಭಯ ಪಕ್ಷಗಳ ನಡುವೆ ಹೊಂದಾಣಿಕೆ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದರೂ, ಉಭಯ ಪಕ್ಷಗಳ ನಡುವೆ ಮೈತ್ರಿಯ ಮಾತುಕತೆ ತೆರೆಮರೆಯಲ್ಲಿ ನಡೆಯುತ್ತಿತ್ತು. ಮಂಗಳವಾರ ಇದು ಅಂತಿಮ ಹಂತ ತಲುಪಿದ್ದು, ಒಂದು ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿಸಲು ಬಿಜೆಪಿ ತೀರ್ಮಾನಿಸಿದೆ.
ಬುಧವಾರ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಕೃಷ್ಣಪ್ಪ ನಾಮಪತ್ರ ಹಿಂಪಡೆದು, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ಸೂಚಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬುಧವಾರ ಬಿಜೆಪಿ ಅಭ್ಯರ್ಥಿ ಎಂ.ಕೃಷ್ಣಪ್ಪ ನಾಮಪತ್ರ ವಾಪಸ್ ಪಡೆದರೆ ಬಿಜೆಪಿ ಮತ್ತು ಜೆಡಿಎಸ್ ಜೊತೆಗಿನ ಮೈತ್ರಿ ಖಚಿತವಾದಂತಾಗುತ್ತದೆ. ಹಲವಾರು ದಿನಗಳಿಂದ ಉಭಯ ಪಕ್ಷಗಳ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿರುವುದು ಗುಟ್ಟಾಗಿ ಉಳಿದಿರಲಿಲ್ಲ. ಬುಧವಾರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಹಿಂಪಡೆದರೆ ಉಪ ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ.

ಮೈತ್ರಿ ಅನಿವಾರ್ಯವಾಗಿತ್ತು
ಎರಡೂ ಕ್ಷೇತ್ರಗಳ ಲೋಕಸಭೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಜೆಡಿಎಸ್ ಪಕ್ಷಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿರುವುದರಿಂದ, ಬಿಜೆಪಿ ಸಹಾಯ ಸಿಕ್ಕರೆ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಬಲ ದೊರಕುತ್ತದೆ ಎಂದು ಪಕ್ಷಗಳು ಮೈತ್ರಿಯ ನಿರ್ಧಾರ ಕೈಗೊಂಡಿರಬಹುದು.

ಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ
ಮೂರು ಕ್ಷೇತ್ರಗಳ ವಿಧಾನಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿತ್ತು. ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರೂ, ಜೆಡಿಎಸ್ ಪಕ್ಷದಿಂದ ಒಬ್ಬರು ನಾಮಪತ್ರ ಸಲ್ಲಿಸಿರಲಿಲ್ಲ. ಆಗಲೇ ಎರಡೂ ಪಕ್ಷಗಳ ನಡುವೆ ಮೈತ್ರಿ ಉಂಟಾಗಿದೆ ಎಂಬುದು ಸ್ಪಷ್ಟವಾಗಿತ್ತು.

ಡಿ.ಕೆ.ಶಿವಕುಮಾರ್ ಗರಂ
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ.ಕೆ.ಸುರೇಶ್ ಅವರನ್ನು ಕಣಕ್ಕೆ ಇಳಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಬಿಜೆಪಿ-ಜೆಡಿಎಸ್ ದೋಸ್ತಿಯ ಬಗ್ಗೆ ಗರಂ ಆಗಿದ್ದಾರೆ. ಇದು ರಾಜ್ಯರಾಜಕಾರಣದ ದುರಂತ. ಜೆಡಿಎಸ್ ಸೋಲಿನ ಭಯದಿಂದ ಮೈತ್ರಿ ಮಾಡಿಕೊಂಡಿದೆ. ಜ್ಯಾತ್ಯಾತೀತ ನಿಲುವನ್ನು ಕೈಬಿಟ್ಟು ಕೋಮುವಾದಿ ಪಕ್ಷದೊಂದಿ ಕೈ ಜೋಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಮೈತ್ರಿ ಬಗ್ಗೆ ನಂಗೊತ್ತಿಲ್ಲ
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬಂದವನು ನಾನು ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ಮೈತ್ರಿ ಮಾತುಕತೆಯ ಬಗ್ಗೆ ನನಗೆ ಏನು ತಿಳಿದಿಲ್ಲ ಎಂದು ಹೇಳಿದ್ದಾರೆ.

ನನಗೆ ಮಾಹಿತಿಯೇ ಇಲ್ಲ
ನಮ್ಮ ಪಕ್ಷ ಮತ್ತು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ನಡೆದಿದೆ ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಎಂ.ಕೃಷ್ಣಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ನಾನು ಈ ಕುರಿತ ವರದಿ ನೋಡಿದ್ದೇನೆ. ನನಗೆ ಪಕ್ಷದ ಯಾವುದೇ ನಾಯಕರು ಈ ಕುರಿತು ಮಾಹಿತಿ ನೀಡಿಲ್ಲ, ನಾಮಪತ್ರವನ್ನು ಹಿಂಪಡೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೈತ್ರಿ ಮಾತುಕತೆ ನಡೆದಿತ್ತು : ಜೋಶಿ
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಂದ ಮೈತ್ರಿಯ ಪ್ರಸ್ತಾಪ ಬಂದಿದೆ. ಈ ಬಗ್ಗೆ ಪಕ್ಷದ ವರಿಷ್ಠ ನಾಯಕರು ತೀರ್ಮಾನಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಸೋಮವಾರ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ್ದರು. ಉಭಯ ಪಕ್ಷಗಳ ನಡುವೆ ಮೈತ್ರಿಯ ಮಾತುಕತೆ ನಡೆದಿತ್ತು ಎನ್ನುವುದು ಇದರಿಂದ ಸಾಬೀತಾಗುತ್ತದೆ. ಮಂಗಳವಾರ ಅದು ಅಂತಿಮ ಹಂತಕ್ಕೆ ಬಂದು, ಒಂದು ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿಸಲು ಬಿಜೆಪಿ ನಿರ್ಧರಿಸಿರಬಹುದು.

ಕಣದಲ್ಲಿರುವ ಅಭ್ಯರ್ಥಿಗಳು
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 20 ನಾಮಪತ್ರಗಳ ಪರಿಶೀಲನೆ ಸೋಮವಾರ ಪೂರ್ಣಗೊಂಡಿದ್ದು, 6 ನಾಮಪತ್ರಗಳು ತಿರಸ್ಕೃತಗೊಂಡಿವೆ. ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಬಿ.ನಾಗರಾಜು, ಮುನಿರಾಜು, 154ನೇ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಡಾ.ಕೆ.ಪದ್ಮರಾಜನ್ ನಾಮಪತ್ರವೂ ತಿರಸ್ಕೃತಗೊಂಡಿದೆ. ಬಿಜೆಪಿಯ ಎಂ.ಕೃಷ್ಣಪ್ಪ, ಜೆಡಿಎಸ್ ಪಕ್ಷದ ಅನಿತಾ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ ಡಿ.ಕೆ.ಸುರೇಶ್ ನಡುವೆ ನೇರಹಣಾಹಣಿ ನಿರೀಕ್ಷಿಸಲಾಗಿದೆ. ಎಂ.ಕೃಷ್ಣಪ್ಪ ನಾಮಪತ್ರ ವಾಪಸ್ ಪಡೆದರೆ, ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ನಡೆಯಲಿದೆ.












Click it and Unblock the Notifications