ಕಾಂಗ್ರೆಸ್ ಪ್ರಚಾರಕ್ಕೆ ಹಿರಿಯ ನಾಯಕರ ಸಾರಥ್ಯ!

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಬುಧವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ ಬಳಿಕ ರಾಜರಾಜೇಶ್ವರಿ ನಗರ ಅಥವ ಆನೇಕಲ್ ನಲ್ಲಿ ಸಮಾವೇಶ ಏರ್ಪಡಿಸಿ, ಪ್ರಚಾರ ಕಾರ್ಯಕ್ಕೆ ಪಕ್ಷ ಚಾಲನೆ ನೀಡಲಿದೆ.
ಪಕ್ಷದ ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ ಉಪ ಚುನಾವಣಾ ಪ್ರಚಾರ ಕಾರ್ಯಕ್ಕಾಗಿ ಎಂಟು ದಿನಗಳನ್ನು ಮೀಸಲಿಟ್ಟಿದ್ದಾರೆ. ಈ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ.
ಎಸ್.ಎಂ.ಕೃಷ್ಣ ಪ್ರಚಾರ : ಎಐಸಿಸಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಸೋಮವಾರ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಿದ್ದಾರೆ.
ಈ ಸಮಯದಲ್ಲಿ ಎರಡೂ ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತೇನೆ ಎಂದು ಕೃಷ್ಣ ಸೆಲ್ವ ಕುಮಾರ್ ಅವರಿಗೆ ಭರವಸೆ ನೀಡಿದ್ದಾರೆ. ದಿಗ್ವಿಜಯ್ ಸಿಂಗ್ ಸಹ ಕೃಷ್ಣ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಉಪ ಚುನಾವಣೆಗೆ ಸರ್ಕಾರ : ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿಯೂ ಜಯಗಳಿಸಬೇಕು ಎಂದು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಎರಡೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಕ್ಷೇತ್ರಕ್ಕೆ ಒಬ್ಬರು ಸಚಿವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಶಾಸಕರು, ಸ್ಥಳೀಯ ಮುಖಂಡರು ಇತರ ಕಾಂಗ್ರೆಸ್ ನಾಯಕರಿಗೂ ಈಗಾಗಲೇ ವಿವಿಧ ಜವಾಬ್ದಾರಿಗಳನ್ನು ವಹಿಸಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜಯಗಳಿಸಿ ಜೆಡಿಎಸ್ ಪಕ್ಷಕ್ಕೆ ಸರಿಯಾದ ಪಾಠ ಕಲಿಸಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ.












Click it and Unblock the Notifications