ಲೋಕಸಭೆ ಉಪ ಚುನಾವಣೆಯಲ್ಲೂ ಪಕ್ಷಾಂತರ!

ರಾಜರಾಜೇಶ್ವರಿ ನಗರದ ಮಾಜಿ ಬಿಜೆಪಿ ಶಾಸಕ ಎಂ.ಶ್ರೀನಿವಾಸ್ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ವಿರುದ್ಧ ಮುನಿಸಿಕೊಂಡಿದ್ದಾರೆ. ಲೋಕಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಅವರ ನಿರ್ಧಾರವನ್ನು ಖಂಡಿಸಿದ್ದಾರೆ.
ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶ್ರೀನಿವಾಸ್ ಬುಧವಾರ ಕಾಂಗ್ರೆಸ್ ಪಕ್ಷ ಸೇರುವುದಾಗಿ ಘೋಷಿಸಿದರು.
ಉಪ ಮುಖ್ಯಮಂತ್ರಿಯಾಗಿ ಅನುಭವ ಸಂಪಾದಿಸಿದ್ದ ಆರ್.ಅಶೋಕ್ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧಿಸಬೇಕಾಗಿತ್ತು. ಇಲ್ಲವೇ ಅಭ್ಯರ್ಥಿಗಳನ್ನು ನಿಲ್ಲಿಸಬೇಕಾಗಿತ್ತು. ಆದರೆ, ಅವರು ಪಕ್ಷದ ತತ್ವ ಮತ್ತು ಸಿದ್ದಾಂತಗಳನ್ನು ಗಾಳಿಗೆ ತೂರಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.
ಬುಧವಾರ ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಮತ್ತು ಎಂ.ಶ್ರೀನಿವಾಸ್ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ಕೆ.ಆರ್.ಪೇಟೆ ಕೃಷ್ಣ ಮತ್ತು ಕಲ್ಪನಾ ಸಿದ್ದರಾಜು ಗುರುವಾರ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ಕಲ್ಪನಾ ಸಿದ್ಧರಾಜು ಕಾಂಗ್ರೆಸ್ ಗೆ : ಮದ್ದೂರು ಕ್ಷೇತ್ರದ ಮಾಜಿ ಶಾಸಕಿ ಕಲ್ಪನಾ ಸಿದ್ಧರಾಜು ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಇವರು ಟಿಕೆಟ್ ಬಯಸಿದ್ದರು.
ಆದರೆ,ದೇವೇಗೌಡರ ಬೀಗರಾದ ಡಿ.ಸಿ.ತಮ್ಮಣ್ಣ ಅವರಿಗೆ ಟಿಕೆಟ್ ನೀಡಿದ್ದರಿಂದ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭಗೊಂಡಿದ್ದರು. ಸದ್ಯ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದು. ಗುರುವಾರ ಪಕ್ಷ ಸೇರಲಿದ್ದಾರೆ.
ಲೋಕಸಭೆ ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್, ಬಿಜೆಪಿ ತೊರೆದು ಕೆಲವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ರಹಸ್ಯವಾಗಿ ಆಪರೇಷನ್ ಕೈ ಕಾರ್ಯಚರಣೆ ಪ್ರಾರಂಭಿಸಿದೆಯೇ ಎಂಬ ಅನುಮಾನ ಉಂಟಾಗುತ್ತಿದೆ.
(67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ)












Click it and Unblock the Notifications