ರಾಜ್ಯಸಭೆ ಉಪಚುನಾವಣೆ ಕಣದಲ್ಲಿ ಬಿ.ಕೆ.ಹರಿಪ್ರಸಾದ್

ಸೋಮವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹಾಗೂ ಪಕ್ಷದ ಪ್ರಮುಖರೊಂದಿಗೆ ತೆರಳಿ ವಿಧಾನಸಭೆ ಕಾರ್ಯದರ್ಶಿ ಓಂ ಪ್ರಕಾಶ್ ಅವರಿಗೆ ಹರಿಪ್ರಸಾದ್ ನಾಮಪತ್ರ ಸಲ್ಲಿಸಿದರು.
ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿತ್ತು. ಪ್ರತಿಪಕ್ಷ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಾಗಿ ಯಾರು ನಾಮಪತ್ರ ಸಲ್ಲಿಸದೆ ಇರುವುದರಿಂದ ಹರಿಪ್ರಸಾದ್ ಅವರು ಅವಿರೋಧವಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ 122 ಸದಸ್ಯಬಲ ಹೊಂದಿದ್ದು ಕಾಂಗ್ರೆಸ್ ಅಭ್ಯರ್ಥಿ ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸುವುದು ಖಾತ್ರಿಯಾಗಿದೆ. ಆದ್ದರಿಂದಲೇ ವಿರೋಧ ಪಕ್ಷಗಳು ಯಾವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ.
ಪಕ್ಷೇತರ ಅಭ್ಯರ್ಥಿಯಾಗಿ ತಮಿಳುನಾಡಿನ ಕೆ.ಪದ್ಮರಾಜ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ಅದರಲ್ಲಿ ಸೂಚಕರ ಸಹಿ ಇಲ್ಲ. ಆದ್ದರಿಂದ ಮಂಗಳವಾರ ನಾಮಪತ್ರ ಪರಿಶೀಲನೆ ವೇಳೆ ಪದ್ಮರಾಜ್ ನಾಮಪತ್ರ ತಿರಸ್ಕೃತಗೊಳ್ಳಲಿದೆ.
ಬಿ.ಕೆ.ಹರಿಪ್ರಸಾದ್ ವೊಬ್ಬರೇ ಕಣದಲ್ಲಿ ಉಳಿದರೆ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಪಕ್ಷೇತರರಾಗಿ ಬೇರೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಚುನಾವಣೆ ಅನಿವಾರ್ಯವಾದರೆ ಆ.29ರಂದು ಚುನಾವಣೆ ನಡೆಯಲಿದೆ. (ಚುನಾವಣಾ ವೇಳಾಪಟ್ಟಿ)
ಚುನಾವಣೆ ಏಕೆ : ರಾಜ್ಯಸಭಾ ಸದಸ್ಯರಾಗಿದ್ದ ಅನಿಲ್ ಲಾಡ್ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ರಾಜ್ಯಸಭಾ ಸ್ಥಾನಕ್ಕೆ ಮೇ 20 ರಂದು ರಾಜೀನಾಮೆ ನೀಡಿದ್ದರು. ಅವರ ಸದಸ್ಯತ್ವ ಅವಧಿ 2014ರ ಜೂನ್ 25ರವರೆಗೆ ಇತ್ತು. ಆದ್ದರಿಂದ ಉಪ ಚುನಾವಣೆ ನಡೆಯುತ್ತಿದೆ.












Click it and Unblock the Notifications