ನೂರರ ಸಂಭ್ರಮಕ್ಕೆ ಬಂಪರ್ ಕೊಡುಗೆ ನೀಡಿದ ಸಿಎಂ!
ಬೆಂಗಳೂರು, ಆ.24 : ಶತದಿನದ ಸಂಭ್ರಮ ಆಚರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಭರಪೂರ ಕೊಡುಗೆಗಳನ್ನೇ ನೀಡಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಸಿಸಲು ಅನುಮೋದನೆ ನೀಡಿದೆ.
ರೈತರು, ಸರ್ಕಾರಿ ಉದ್ಯೋಗಾಕಾಂಕ್ಷಿಗಳು, ವೃತ್ತಿಪರ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ತೀರ್ಮಾನಗಳನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಜತೆಗೆ ಜೋಳ, ರಾಗಿ, ಗೋಧಿ ನೀಡಲು ಅನುಮತಿ ದೊರೆಯಲಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಳಕೆದಾರರ ಶುಲ್ಕ ಹೆಚ್ಚಿಸುವ ಮೂಲಕ ಸರ್ಕಾರ, ವಿಮಾನ ನಿಲ್ದಾಣದ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದೆ. ಮಹತ್ವದ ತೀರ್ಮಾನವೊಂದರಲ್ಲಿ ಬಿಜೆಪಿ ಜಾರಿಗೆ ತರಲು ಉದ್ದೇಶಿಸಿದ್ದ, ಗೋಹತ್ಯೆ ನಿಷೇಧ ಕಾಯ್ದೆ ಮತ್ತು ತಿದ್ದುಪಡಿ ವಿಧೇಯಕಗಳನ್ನು ವಾಪಸ್ ಪಡೆಯಲಾಗಿದೆ. ಸಚಿವ ಸಂಪುಟ ಸಭೆಯ ತೀರ್ಮಾನಗಳು ಹೀಗಿವೆ.

ಕೆಪಿಎಸ್ಸಿಗೆ ಯುಪಿಎಸ್ಸಿ ಮಾದರಿ ಪ್ರಕ್ರಿಯೆ
ಕೆಪಿಎಸ್ಸಿ ನೇಮಕಾತಿಯಲ್ಲಿ ಆಗುತ್ತಿರುವ ಅಕ್ರಮಗಳನ್ನು ತಡೆಗಟ್ಟಲು ಯುಪಿಎಸ್ಸಿ ಮಾದರಿಯಲ್ಲಿ ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸಂಪುಟ ಸಭೆ ಅನುಮೋದನೆ ನೀಡಿದೆ. ಇದರಂತೆ ಅಭ್ಯರ್ಥಿಗಳ ವ್ಯಕ್ತಿತ್ವ ಪರೀಕ್ಷೆ ಪೂರ್ಣಗೊಳ್ಳುವವರೆಗೆ ಅವರು ಪಡೆದ ಲಿಖಿತ ಪರೀಕ್ಷೆ ಅಂಕಗಳನ್ನು ಗೌಪ್ಯವಾಗಿಡಲಾಗುತ್ತದೆ.

ವೃತ್ತಿ ಶಿಕ್ಷಣ ಸಂಸ್ಥೆಗಳಿಗೆ ಕಡಿವಾಣ
ರಾಜ್ಯದಲ್ಲಿ ವೃತ್ತಿಶಿಕ್ಷಣ ಸಂಸ್ಥೆಗಳಿಗೆ ಕಡಿವಾಣ ಹಾಕಲು 2014-15ನೇ ಸಾಲಿನಿಂದ ವೃತ್ತಿಪರ ಶಿಕ್ಷಣ ಸಂಸ್ಥೆಗಳ ನಿಯಂತ್ರಣ ಕಾಯ್ದೆ- 2006ನ್ನು ಜಾರಿಗೆ ತರಲಾಗುತ್ತದೆ. ವೃತ್ತಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರವೇಶ ಮೇಲ್ವಿಚಾರಣಾ ಸಮಿತಿ ಮತ್ತು ಶುಲ್ಕ ನಿಗದಿ ಸಮಿತಿಗಳನ್ನು ರಚಿಸಲಾಗುವುದು. ವಿದ್ಯಾರ್ಥಿಗಳ ಪ್ರವೇಶ ಮತ್ತು ಶುಲ್ಕ ನಿಗದಿ ಕುರಿತಂತೆ ಈ ಎರಡು ಸಮಿತಿಗಳು ನೀಡುವ ವರದಿಯೇ ಅಂತಿಮವಾಗಿರುತ್ತದೆ ಎಂಬ ನಿರ್ಧಾರಕ್ಕೆ ಸಂಪುಟ ಅನುಮೋದನೆ ನೀಡಿದೆ.

ಅನ್ನಭಾಗ್ಯಕ್ಕೆ ರಾಗಿ, ಜೋಳ, ಗೋದಿ ಸೇರ್ಪಡೆ
ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್ ತಿಂಗಳಿನಿಂದ ಜೋಳ, ರಾಗಿ, ಗೋದಿ ಜತೆಗೆ ಕುಚ್ಚಲಕ್ಕಿಯನ್ನೂ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. ಇವುಗಳನ್ನು ವಿತರಿಸಲು ಮಾನದಂಡ ನಿಗದಿ ಮಾಡಲಾಗಿದೆ. ಉತ್ತರ ಕರ್ನಾಟಕದ ಜನರು ನಮಗೆ ಅಕ್ಕಿ ಬೇಡ ಜೋಳ ಕೊಡಿ ಎಂದು ಹಲವು ದಿನಗಳಿಂದ ಬೇಡಿಕೆ ಇಟ್ಟಿದ್ದರು. ಅದಕ್ಕೆ ಸರ್ಕಾರ ಅಸ್ತು ಎಂದಿದೆ.

ಕೃಷಿಕರಿಗೆ ಆನ್ಲೈನ್ ಮಾರುಕಟ್ಟೆ
ಎಪಿಎಂಸಿಗಳಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವುದು ಹಾಗೂ ರೈತರಿಗೆ ಉತ್ತಮ ಮಾರುಕಟ್ಟೆ ಸೌಲಭ್ಯ ಮತ್ತು ಬೆಲೆ ಸಿಗುವಂತೆ ಮಾಡಲು ನೂತನ ಕೃಷಿ ಮಾರಾಟ ನೀತಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಮಾರುಕಟ್ಟೆ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನ ಬಳಕೆ ಮಾಡುವ ಮೂಲಕ, ಆನ್ಲೈನ್ ಮಾರುಕಟ್ಟೆ ವ್ಯವಸ್ಥೆ ರೂಪಿಸಲು ಸರ್ಕಾರ ಅನುಮೋದನೆ ನೀಡಿದೆ.

ಪ್ರಯಾಣಿಕರ ಜೇಬಿಗೆ ಕತ್ತರಿ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಳಕೆದಾರರ ಶುಲ್ಕ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದೆ. ಪ್ರಸ್ತುತ ಬಿಐಎಎಲ್ ಮೂಲಕ ತೆರಳುವ ದೇಶೀಯ ಪ್ರಯಾಣಿಕರಿಗೆ 231 ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ 952 ಬಳಕೆದಾರರ ಶುಲ್ಕ ವಿಧಿಸಲಾಗುತ್ತದೆ. ಇದನ್ನು ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ.

ಗೋ ಹತ್ಯೆ ನಿಷೇಧ ವಾಪಸ್
ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಮಸೂದೆ (ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ) ಮತ್ತು ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಗೋ ಸಂವರ್ಧನೆ ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆಯಲು ನಿರ್ಧರಿಸಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆ- 1964 ಮುಂದುವರಿಯಲಿದೆ.











Click it and Unblock the Notifications