ಜೆಡಿಎಸ್, ಬಿಜೆಪಿ ಮೈತ್ರಿ ಬಗ್ಗೆ ಕಿಡಿಕಾರಿದ ನಾಯಕರು
ಬೆಂಗಳೂರು, ಆ.24 : ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತೂಢ ಕಾಂಗ್ರೆಸ್ ಪಕ್ಷ ಭಾರೀ ಜಯ ಸಾಧಿಸಿದೆ. ಜೆಡಿಎಸ್ ಭದ್ರಕೋಟೆಯಾದ ಎರಡೂ ಜಿಲ್ಲೆಗಳಲ್ಲಿ ಕಾಂಗ್ರೆಸ್ ತನ್ನ ಪಾರುಪತ್ಯ ಮೆರೆದಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅನಿತಾ ಕುಮಾರಸ್ವಾಮಿ ಅವರು ವಿರುದ್ಧ ಗೆಲುವು ಸಾಧಿಸುವ ಮೂಲಕ ಪ್ರತಿಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖಭಂಗ ಉಂಟು ಮಾಡಿದ್ದಾರೆ.
ತಂದೆಯ ಸಾವು ಮಂಡ್ಯದಲ್ಲಿ ಅನುಕಂಪದ ಮತಗಳಾಗಿ ಹರಿದು ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ನಟಿ ರಮ್ಯಾ, ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ವಿರುದ್ಧ ಜಯಗಳಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಪಕ್ಷಕ್ಕೆ ಯಾವುದೇ ಲಾಭವಾಗಿಲ್ಲ.
ಚುನಾವಣೆಯ ಗೆಲುವನ್ನು ರಾಜ್ಯ ಕಾಂಗ್ರೆಸ ಸರ್ಕಾರದ ಸಾಧನೆಗೆ ಜನರು ನೀಡಿದ ಬೆಂಬಲ ಎಂದು ವಿಶ್ಲೇಷಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜರ್ ಸಿಂಗ್, ನಟಿ ರಮ್ಯಾ ಮುಂತಾದವರು ಚುನಾವಣೆ ಫಲಿತಾಂಶದ ಬಗ್ಗೆ ನೀಡಿದ ಪ್ರತಿಕ್ರಿಯೆಗಳು ಹೀಗಿವೆ.

ಬಿಜೆಪಿ, ಜೆಡಿಎಸ್ ಮೈತ್ರಿಗೆ ಜನರ ಪಾಠ
ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿಗೆ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಒಳ್ಳೆಯ ಕೆಲಸಗಳಿಗೆ ಜನರು ಮತ ನೀಡಿದ್ದಾರೆ. ಪಕ್ಷದ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಸ್ಥಾನ ನೀಡುವುದು ಪಕ್ಷದ ಹೈ ಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ ಎಂದರು.

ದೇವೇಗೌಡರ ವರ್ಚಸ್ಸಿಗೆ ಧಕ್ಕೆ
ಲೋಕಸಭೆ ಉಪ ಚುನಾವಣೆ ಫಲಿತಾಂಶದಿಂದ ಮಾಜಿ ಪ್ರಧಾನಿ ದೇವೇಗೌಡರ ವರ್ಚಸ್ಸಿಗೆ ಧಕ್ಕೆ ಆಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಜೊತೆ ಮೈತ್ರಿಗೆ ದೇವೇಗೌಡರು ಒಪ್ಪಿಗೆ ನೀಡಬಾರದಿತ್ತು ಎಂದು ಅವರು ಹೇಳಿದ್ದಾರೆ. ಲೋಕಸಭೆ ಚುನಾವಣೆ ಮೇಲೆ ಈ ಫಲಿತಾಂಶ ಪ್ರಭಾವ ಬೀರುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಪಕ್ಷಕ್ಕೆ ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.

ಜನರ ವಿಶ್ವಾಸಕ್ಕೆ ಋಣಿ
ಮಂಡ್ಯ ಕ್ಷೇತ್ರದಲ್ಲಿ ಏನು ಕೆಲಸ ಮಾಡಬೇಕು ಎಂಬ ಯೋಜನೆ ತಯಾರಿಸಿದ್ದೇನೆ. ಜನರು ನನ್ನ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ. ಸಂಸತ್ ನಲ್ಲಿ ಮಂಡ್ಯದ ಸಮಸ್ಯೆ ಬಗ್ಗೆ ಮಾತನಾಡುತ್ತೇನೆ. ಮಂಡ್ಯದ ಜನರು ನನ್ನ ತಂದೆ-ತಾಯಿ ಮತ್ತು ಬಂಧುಗಳು. ಮುಂದೆ ಮಂಡ್ಯದಲ್ಲಿಯೇ ವಾಸಿಸುತ್ತೇನೆ ಎಂದು ನಟಿ ರಮ್ಯಾ ಗೆಲುವಿನ ಸಂತಸ ಹಂಚಿಕೊಂಡಿದ್ದಾರೆ.

ರಾಜ್ಯಕ್ಕೆ ಹೊಸ ಸಂದೇಶ
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್, ಉಪ ಚುನಾವಣೆ ಫಲಿತಾಂಶದ ಮೂಲಕ ರಾಜ್ಯ ಮತ್ತು ರಾಷ್ಟ್ರಕ್ಕೆ ಮತದಾರರು ಹೊಸ ಸಂದೇಶ ನೀಡಿದ್ದಾರೆ. ವಿರೋಧ ಪಕ್ಷಗಳ ಅಪವಿತ್ರ ಮೈತ್ರಿಯನ್ನು ಜನರು ತಿರಸ್ಕರಿಸಿದ್ದಾರೆ. ಕ್ಷೇತ್ರದ ಅಭಿವೃದ್ದಿಗೆ ಕೆಲಸ ಮಾಡುತ್ತೇನೆ ಎಂದು ಗೆಲುವಿನ ಸಂತಸ ಹಂಚಿಕೊಂಡಿದ್ದಾರೆ.

ಕಟ್ಟೇನೆ ಒಡೆದರೆ ನೀರು ಹೆಂಗೆ ತಡೀತೀರಿ
"ಕಟ್ಟೆನೆ ಒಡೆದರೆ ನೀರು ಹೆಂಗೆ ತಡೀತೀರಿ" ಎಂದು ತಮ್ಮ ಮಾತಿನ ಶೈಲಿಯಲ್ಲಿಯೇ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಲೋಕಸಭೆ ಉಪ ಚುನಾವಣೆ ಗೆಲುವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡವು. ಆದರೆ, ಜನರ ಮತ್ತು ದೇವರ ಆಶೀರ್ವಾದವಿರುವಾಗ ಯಾವ ಶಕ್ತಿಗಳು ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ. ಸಿಎಂ ಜನಪ್ರಿಯ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಆದ್ದರಿಂದ ಜನರು ಕಾಂಗ್ರೆಸ್ ಬೆಂಬಲಿಸಿದ್ದಾರೆ ಎಂದು ಇಬ್ರಾಹಿಂ ಹೇಳಿದ್ದಾರೆ.












Click it and Unblock the Notifications