ಕರ್ನಾಟಕದ ಜಿಲ್ಲಾ ಸುದ್ದಿಗಳ ತುಣುಕು ನೋಟ
ಬೆಂಗಳೂರು, ಆ.22 : ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಆತ್ಮಾವಲೋಕನ ಮಾಡಿಕೊಂಡು, ಲೋಕಸಭೆ ಚುನಾವಣೆಗೆ ಸಿದ್ಧವಾಗಲು ಪಕ್ಷದ ನಾಯಕರ ಸಭೆಯನ್ನು ಕರೆದಿವೆ.
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆ.29ರಂದು ಪಕ್ಷದ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ನೂತನ ರಾಜ್ಯಾಧ್ಯಕ್ಷ ಮತ್ತು ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ಚರ್ಚೆ ನಡೆಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭೆ ಉಪ ಚುನಾವಣೆಯ ಮೈತ್ರಿ ಮತ್ತು ವಿಧಾನಪರಿಷತ್ ಚುನಾವಣೆಯ ಸೋಲಿನ ಕುರಿತು ಚರ್ಚಿಸಲು ಬಿಜೆಪಿ ಆ.30ರಂದು ಪಕ್ಷದ ಕೋರ್ ಕಮಿಟಿ ಸಭೆ ಕರೆದಿದೆ. ಸಭೆಯಲ್ಲಿ ಮುಂದಿನ ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಸಲಾಗುವುದು ಎಂದು ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸೋಮವಾರ ಪಕ್ಷದ ಕೋರ್ ಕಮಿಟಿ ಸಭೆ ಬೆಂಗಳೂರಿನಲ್ಲಿ ನಡೆಯಬೇಕಾಗಿತ್ತು. ಆದರೆ, ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಸಭೆಯನ್ನು ಆ.30ಕ್ಕೆ ಮುಂದೂಡಲಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಸೇರಿದಂತೆ, ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

10 ಹೊಸ ನ್ಯಾಯಾಲಯ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ತುಮಕೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ತ್ವರಿತಗತಿ ನ್ಯಾಯಾಲಯ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕಾನೂನು ಮತ್ತು ಸಂದದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಗದಗ, ಪುತ್ತೂರು ಮತ್ತು ಅಥಣಿಯಲ್ಲಿ ಹೊಸದಾಗಿ 14 ಕೋಟಿ ವೆಚ್ಚದಲ್ಲಿ ಪಶುವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಹೇಳಿದರು.

ಹೊಸ ತಾಲೂಕು ಘೋಷಣೆಯಿಲ್ಲ
ಹಿಂದಿನ ಬಿಜೆಪಿ ಸರ್ಕಾರ ಚುನಾವಣೆಯಲ್ಲಿ ಗೆಲವು ಸಾಧಿಸಲು ಹೊಸ ತಾಲೂಕುಗಳನ್ನು ರಚನೆ ಮಾಡುವುದಾಗಿ ಘೋಷಿಸಿತ್ತು. ಅಗತ್ಯ ಮೂಲಭೂತ ಸೌಲಭ್ಯ ಒದಗಿಸಿದೆ ಯಾವುದೇ ಹೊಸ ತಾಲೂಕುಗಳನ್ನು ರಚನೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಪಘಾತಕ್ಕೆ ಮೂವರು ಬಲಿ
ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡದ ಪರಿಣಾಮ ಮೂವರು ಸಾವನ್ನಪ್ಪಿ 22 ಮಂದಿ ಗಾಯಗೊಂಡಿರುವ ಘಟನೆ ನಿಪ್ಪಾಣಿ ಬಳಿ ನಡೆದಿದೆ. ಮೃತರನ್ನು ಬಾಬು ಸಾಹೇಬ್ (65), ಮನೀಶ್ ವಾಲೆ(60) ಮತ್ತು ಮಂಗೀಶ್ (24) ಎಂದು ಗುರುತಿಸಲಾಗಿದೆ. ಮೃತರೆಲ್ಲರು ಮಹಾರಾಷ್ಟ್ರ ಮೂಲದವರಾಗಿದ್ದು, ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ್ದರು. ಬಸವೇಶ್ವರ್ ಸರ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾಡದೊರೆಯ ಆಗಮನ ಯಾವಾಗ?
ಕಾಂಗ್ರೆಸ್ ಅಧಿಕಾರ ಪಡೆಯಲಿದ್ದು, ನಾನು ಮುಖ್ಯಮಂತ್ರಿಯಾದರೆ ಮೊದಲು ಚಾಮರಾಜನಗರಕ್ಕೆ ಭೇಟಿ ನೀಡುವ ಮೂಲಕ ಇಲ್ಲಿಗೆ ಅಂಟಿರುವ ಕಳಂಕವನ್ನು ತೊಡೆದು ಹಾಕುವೆ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸಿಲ್ಲ ಎಂಬುದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಜಿಲ್ಲೆಯ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸುವುದಾಗಿ ಹೇಳಿದ್ದ ಸಿದ್ದರಾಮಯ್ಯ ಅಧಿಕಾರಕ್ಕೆ ಏರಿ ನೂರು ದಿನ ಕಳೆದರೂ ಜಿಲ್ಲೆಗೆ ಆಗಮಿಸಿಲ್ಲ ಎಂದು ಚಾಮರಾಜನಗರದ ಜನರು ಆರೋಪಿಸುತ್ತಿದ್ದಾರೆ.

ಚಿತ್ರದುರ್ಗದಲ್ಲಿ ರಘು ಜಯಭೇರಿ
ಚಿತ್ರದುರ್ಗ ಕ್ಷೇತ್ರದ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಜಿ.ರಘು ಆಚಾರ್ ಜಯಗಳಿಸಿದ್ದಾರೆ. ಸೋಮವಾರ ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಮತ್ತು ಜಿ.ರಘು ಆಚಾರ್ ನಡುವೆ ತೀವ್ರ ಪೈಪೋಟಿ ಎದುರಾಗಿತ್ತು. ರಘು ಆಚಾರ್ 1,197 ಮತಗಳಿಂದ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ವಿರುದ್ದ ಜಯಸಾಧಿಸಿದ್ದಾರೆ. ನವೀನ್ 1694 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.

ಭೀಕರ ಅಪಘಾತ 5 ಸಾವು
ಲಾರಿ ಮತ್ತು ಟೆಂಪೋ ಟ್ರಾವೆಲರ್ ನಡುವೆ ಸಂಭವಿಸಿದ ಅಪಘಾತದಿಂದಾಗಿ, 5 ಜನರು ಸಾವನ್ನಪ್ಪಿರುವ ಘಟನೆ ಕೋಲಾರದ ನರಸಾಪುರ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದಬರುತ್ತಿದ್ದ ಟೆಂಪೋ ಟ್ರಾವೆಲರ್ ಲಾರಿಗೆ ಡಿಕ್ಕಿ ಹೊಡೆದಿದೆ. ಟ್ರಾವೆಲರ್ ನಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ವೇಮಗಲ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ನರ್ಸ್ ನೇಣಿಗೆ ಶರಣು
ಬೆಂಗಳೂರಿನ ಇಎಸ್ಐ ಆಸ್ಪತ್ರೆಯ ನರ್ಸ್ ವೊಬ್ಬರು ರಾಜಾಜಿನಗರದ ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತಪಟ್ಟವರನ್ನು ಚಿತ್ರದುರ್ಗ ಮೂಲದ ಬಿಂದು ಎಂದು ಗುರುತಿಸಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿರುವ ಬಿಂದು ಸೋಮವಾರ ಸಂಜೆ ನೇಣಿಗೆ ಶರಣಾಗಿದ್ದಾರೆ. ರಾಜಾಜಿನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.











Click it and Unblock the Notifications