ಸಂಭ್ರಮಾಚರಣೆ ಹೆಸರಲ್ಲಿ ದುಂದು ವೆಚ್ಚವಿಲ್ಲ : ಸಿಎಂ
ಬೆಂಗಳೂರು, ಆ.26 : ಸರ್ಕಾರ ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಯಾವುದೇ ಅದ್ದೂರಿ ಸಮಾರಂಭ ಏರ್ಪಡಿಸಿ, ಸರ್ಕಾರಿ ಹಣವನ್ನು ಪೋಲು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ಸಿಎಂ ತಮ್ಮ ನೂರು ದಿನಗಳ ಸಾಧನೆಯ ವರದಿಯನ್ನು ಬಿಡುಗಡೆ ಮಾಡಿದರು.
ಸೋಮವಾರ ವಿಧಾನಸೌಧದಲ್ಲಿ ಪ್ರತಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ, 19 ಹೊಸ ಕೈಗಾರಿಕೆಗಳಿಗೆ ಸರ್ಕಾರ ಅನುಮತಿ ನೀಡಿದೆ. ಇದರಿಂದ 64,000 ಕೋಟಿ ರೂ. ಬಂಡವಾಳ ಮತ್ತು 69 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಹೇಳಿದರು.

ಉಕ್ಕು, ಸಕ್ಕರೆ, ಆಟೋಮೊಬೈಲ್, ರಾಸಾಯನಿಕ ಸೇರಿದಂತೆ ವಿವಿಧ ವಲಯಗಳ ಕೈಗಾರಿಕೆಗಳನ್ನು ರಾಜ್ಯದಲ್ಲಿ ಸ್ಥಾಪನೆ ಮಾಡಲಾಗುವುದು. ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಆಸಕ್ತಿ ಹೊಂದಿರುವ ಕಂಪನಿಗಳಿಗೆ ಜಮೀನು ಮತ್ತು ಇತರೆ ಸೌಲಭ್ಯವನ್ನು ಸರ್ಕಾರ ಒದಗಿಸಲಿದೆ ಎಂದು ಭರವಸೆ ನೀಡಿದರು.
ಕೆಪಿಎಸ್ಸಿ ಪರೀಕ್ಷೆಯಲ್ಲಿ ಕೆಲವು ಬದಲಾವಣೆಗಳನ್ನು ತರಲು, ಪಿ.ಟಿ.ವೋಟಾ ಅವರು ನೀಡಿರುವ ವರದಿಯನ್ನು ಅನುಷ್ಠಾನಕ್ಕೆ ತರಲಾಗುವುದು. ಮೌಖಿಕ ಸಂದರ್ಶನದ ನಂತರ, ಲಿಖಿತ ಪರೀಕ್ಷೆ ಫಲಿತಾಂಶ ಪ್ರಕಟಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂದರು.
ಚುನಾವಣೆಯ ಸಮಯದಲ್ಲಿ ಪಕ್ಷ ನೀಡಿದ 120 ಆಶ್ವಾಸನೆಗಳಲ್ಲಿ 60 ಈಡೇರಿವೆ. ಅನ್ನ ಭಾಗ್ಯ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಇದಕ್ಕೆ4,200 ಕೋಟಿ ರೂ ನೀಡಲಾಗಿದೆ ಎಂದು ತಿಳಿಸಿದರು.
ಕ್ಷೀರಭಾಗ್ಯ ಯೋಜನೆಗಾಗಿ 818 ಕೋಟಿ ನೀಡಲಾಗಿದ್ದು, ಲೈಂಗಿಕ ಅಲ್ಪಸಂಖ್ಯಾತರಿಗೆ ಮೈತ್ರಿ ಎಂಬ ಯೋಜನೆಯ ಮೂಲಕ ತಿಂಗಳಿಗೆ 500 ರೂ. ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದು ಮಾಹಿತಿ ನೀಡಿದರು.
ಸರ್ಕಾರದ ಸಾಧನೆ ಅಳೆಯಲು ನೂರು ದಿನ ದೊಡ್ಡ ಸಮಯವಲ್ಲ. ನೂರು ದಿನದಲ್ಲಿ ಸರ್ಕಾರದ ಆದ್ಯತೆಗಳು ಯಾವ ದಿಕ್ಕಿನಲ್ಲಿ ಸಾಗುತ್ತಿವೆ ಎಂದು ಜನರಿಗೆ ತಿಳಿದಿದೆ ಎಂದು ಸಿದ್ದರಾಮಯ್ಯ ಹೇಳಿದರು. ಜನರಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಆದ್ದರಿಂದಲೇ ಉಪ ಚುನಾವಣೆಯಲ್ಲಿ ಜಯಗಳಿಸಿದ್ದೇವೆ ಎಂದು ಸಿಎಂ ಹೇಳಿದರು.
ಸರ್ಕಾರ ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಅದ್ದೂರಿ ಸಮಾರಂಭಗಳನ್ನು ಮಾಡಿ, ಸರ್ಕಾರದ ಹಣ ದುಂದು ವೆಚ್ಚಮಾಡುವುದಿಲ್ಲ. ಅಭಿವೃದ್ಧಿ ಕಾರ್ಯಗಳತ್ತ ಗಮನ ಕೇಂದ್ರೀಕರಿಸುತ್ತೇವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಪರೋಕ್ಷ ವಾಗ್ದಾಳಿ ನಡೆಸಿದರು.












Click it and Unblock the Notifications