ಪ್ರವಾಸೋದ್ಯಮ ನೀತಿ ರಚನೆಗೆ ಪೈ ನೇತೃತ್ವ!

ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, 2014ರಲ್ಲಿ ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಇದರ ಅನ್ವಯ 319 ಪ್ರೇಕ್ಷಣೀಯ ಸ್ಥಳಗಳಲ್ಲಿ ಮೂಲಸೌಕರ್ಯ ಒದಗಿಸಿ, ಸ್ಥಳಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.
ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ಸಂಬಂಧಿಸಿದಂತೆ, ಉದ್ಯಮಿ ಮೋಹನ್ದಾಸ್ ಪೈ ಅವರ ಅಧ್ಯಕ್ಷತೆಯಲ್ಲಿ ದೂರದೃಷ್ಟಿ ಗುಂಪು (ವಿಷನ್ ಗ್ರೂಪ್) ರಚಿಸಲಾಗುತ್ತಿದೆ. ಪ್ರವಾಸಿ ಸ್ಥಳಗಳಲ್ಲಿ ಯಾತ್ರಿಕರಿಗೆ ಸೂಕ್ತ ಭದ್ರತೆ ಜತೆಗೆ ಸ್ನೇಹಮಯ ವಾತಾವರಣ ಸೃಷ್ಟಿಸಲು, ಗ್ರೀನ್ ಪೊಲೀಸ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದರು.
ಸಿನಿಮಾ ಚಿತ್ರೀಕರಣ ಕಷ್ಟ : ಐತಿಹಾಸಿಕ ಸ್ಥಳಗಳಲ್ಲಿ ಚಿತ್ರೀಕರಣಕ್ಕೆ ಪುರಾತತ್ವ ಇಲಾಖೆ, ರಾಜ್ಯ ಪ್ರವಾಸೋದ್ಯಮ ಇಲಾಖೆ ಅನುಮತಿ ಪಡೆಯುವಂತೆ ನಿಯಮ ರೂಪಿಸಬೇಕೆಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ಆರ್.ವಿ.ದೇಶಪಾಂಡೆ, ಚಿತ್ರೀಕರಣದ ವೇಳೆ ಐತಿಹಾಸಿಕ ಸ್ಥಳಗಳ ಸೌಂದರ್ಯಕ್ಕೆ ಧಕ್ಕೆ ಉಂಟಾದರೆ, ಅಲ್ಲಿನ ಸೌಲಭ್ಯಗಳು ಹಾಳಾದರೆ ಪ್ರವಾಸೋದ್ಯಮ ಇಲಾಖೆಯನ್ನು ಹೊಣೆ ಮಾಡಲಾಗುತ್ತಿದೆ.
ಆದರೆ, ಪುರಾತತ್ವ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ, ಐತಿಹಾಸಿಕ ಸ್ಥಳಗಳ ರಕ್ಷಣೆಯ ಜವಾಬ್ದಾರಿ ವಹಿಸಿಕೊಂಡಿವೆ. ಆದ್ದರಿಂದ ಸಿನಿಮಾ ಚಿತ್ರೀಕರಣ ಮಾಡುವವರು ಪುರಾತತ್ವ ಮತ್ತು ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಹಂಪಿಯಲ್ಲಿ ಅಗತ್ಯ ಸೌಕರ್ಯ : ಪ್ರಸಿದ್ಧ ಪ್ರವಾಸಿ ಕ್ಷೇತ್ರ ಹಂಪಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ದೇಶಪಾಂಡೆ ತಿಳಿಸಿದರು. ಪುರಾತತ್ವ ಇಲಾಖೆ ಹಂಪಿಯಲ್ಲಿ 8 ಮೊಬೈಲ್ ಶೌಚಾಲಯ ನಿರ್ಮಿಸಿದೆ.
ಪ್ರವಾಸಿಗರು ಅವುಗಳನ್ನು ಉಪಯೋಗಿಸುತ್ತಿಲ್ಲ. ಆದ್ದರಿಂದ ಪಾರಂಪರಿಕ ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಲು ಸಾಧ್ಯವಾಗುತ್ತಿಲ್ಲ. ಪರ್ಯಾಯ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗಿದ್ದು, ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.












Click it and Unblock the Notifications