ಗಣೇಶ ಹಬ್ಬಕ್ಕೆ ಪೊಲೀಸ್ ಮಾರ್ಗಸೂಚಿಗಳೇನು?
ಬೆಂಗಳೂರು, ಸೆ.5 : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳುವುದರ ಜತೆಗೆ ಗಣೇಶಮೂರ್ತಿ ಪ್ರತಿಷ್ಠಾಪಿಸುವ ಆಯೋಜಕರು ಹಾಗೂ ಸಮಿತಿ ಸದಸ್ಯರು ಕೆಲವು ಸೂಚನೆಗಳನ್ನು ಪಾಲಿಸಬೇಕೆಂದು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಹೇಳಿದ್ದಾರೆ.
ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಮುಂಜಾಗ್ರತಾ ಕ್ರಮಗಳನ್ನು ಆಯೋಜಕರು ಕೈಗೊಳ್ಳಬೇಕು. ಗಣೇಶಮೂರ್ತಿ ಪ್ರತಿಷ್ಠಾಪನೆಗಾಗಿ ಜನರಿಂದ ಬಲವಂತವಾಗಿ ಹಣ ವಸೂಲಿ ಮಾಡಿ ತೊಂದರೆ ಕೊಟ್ಟರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಗಣೇಶಮೂರ್ತಿ ವಿಸರ್ಜನೆ ವೇಳೆ ಸೂಕ್ತ ಭದ್ರತೆ ಕೈಗೊಳ್ಳಲಾಗುವುದು. ನಗರದಲ್ಲಿ ಸುಗಮ ವಾಹನ ಸಂಚಾರಕ್ಕೂ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ. ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು ಎಂದು ಮನವಿ ಮಾಡಿದ್ದಾರೆ.
ಗಣಪತಿ ಪೆಂಡಾಲ್ ಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆವರೆಗೆ ಧ್ವನಿವರ್ಧಕಗಳನ್ನು ಬಳಸಬಾರದು. ಬಡಾವಣೆಗಳಲ್ಲಿ ಎಲ್ಲೆಂದರಲ್ಲಿ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಪೊಲೀಸರು ಸೂಚಿಸಿದ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ಸಲಹೆ ಮಾಡಿದ್ದಾರೆ. (ಪೊಲೀಸ್ ಆಯುಕ್ತರ ಆದೇಶಗಳು ಹೀಗಿವೆ)
ಪೊಲೀಸರ ಅನುಮತಿ ಕಡ್ಡಾಯ
ನಗರದಲ್ಲಿ ಗಣೇಶಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಮೊದಲು ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಅನುಮತಿ ಪಡೆಯಬೇಕು. ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು.
ಪೆಂಡಾಲ್ ಗೆ ಸಿಸಿಟಿವಿ
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿಯನ್ನು ಪ್ರತಿಷ್ಠಾಪಿಸುವವರು ಕಡ್ಡಾಯವಾಗಿ ಪೆಂಡಾಲ್ ಗೆ ಸಿಸಿಟಿವಿ ಆಳವಡಿಸಬೇಕು. ಸಿಸಿ ಕ್ಯಾಮೆರಾಗಳನ್ನು ಆಯೋಜಕರು ಅಳವಡಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
ಬೆಂಕಿಯ ಬಗ್ಗೆ ಮುಂಜಾಗ್ರತೆ
ಗಣಪತಿ ಪೆಂಡಾಲ್ ಗಳಲ್ಲಿ ಬೆಂಕಿ ನಂದಿಸುವ ಸಾಮಗ್ರಿಗಳನ್ನು ಹೊಂದಿರಬೇಕು. ಮಹಾನಗರ ಪಾಲಿಕೆ, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಚಾರ ಪೊಲೀಸರಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರಾಕ್ಷೇಪಣಾ ಪತ್ರ ಪಡೆಯಬೇಕು.
ಧ್ವನಿವರ್ಧಕ, ಪಟಾಕಿ ಬೇಡ
ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಧ್ವನಿವರ್ಧಕ ಉಪಯೋಗಿಸುವಾಗ ಸುತ್ತಮುತ್ತಲಿನ ಹಿರಿಯ ನಾಗರೀಕರು ಮತ್ತು ಮಕ್ಕಳಿಗೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯವಾಗುವಂತಹ ಸಿಡಿಮದ್ದುಗಳನ್ನು ಉಪಯೋಗಿಸಬಾರದು.
ಕಾರ್ಯಕ್ರಮಗಳ ಮಾಹಿತಿ ನೀಡಿ
ಗಣೇಶಮೂರ್ತಿ ಸ್ಥಾಪನೆ ಹಾಗೂ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಪಟ್ಟಂತೆ ಪೊಲೀಸ್ ಠಾಣೆಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಸೂಕ್ತ ಬಂದೋಬಸ್ತ್ ವ್ಯವಸ್ಥೆಗಾಗಿ ಸ್ಥಳೀಯ ಪೊಲೀಸರೊಂದಿಗೆ ಸಂಘಟಕರು ಸಹಕರಿಸಬೇಕು.
ವಿಳಾಸ ನೀಡುವುದು ಕಡ್ಡಾಯ
ಗಣೇಶ ಪ್ರತಿಷ್ಠಾಪನಾ ಮಂಡಳಿಯ ಸಂಘಟಕರು ತಮ್ಮ ಮಂಡಳಿಯ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಇತರ ಪದಾಧಿಕಾರಿಗಳ ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳನ್ನು ಸಂಬಂಧಿಸಿದ ಠಾಣಾಧಿಕಾರಿಗೆ ಕಡ್ಡಾಯವಾಗಿ ನೀಡಬೇಕು. ಸಹಕರಿಸಬೇಕು.
ವಿಸರ್ಜನೆ ಹೇಗೆ
ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಆಯೋಜಕರು ಸ್ವಯಂಸೇವಕರನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ, ಬ್ಯಾಡ್ಜ್, ಟೀ-ಶರ್ಟ್ ಅಥವಾ ಕ್ಯಾಪ್ಗಳನ್ನು ನೀಡಬೇಕು. ಮೆರವಣಿಗೆಗೆ ನೀಡಿರುವ ಮಾರ್ಗಗಳನ್ನು ಬದಲಾವಣೆ ಮಾಡಬಾರದು. ಸೂಕ್ತ ಎಚ್ಚರಿಕೆಯನ್ನು ಸಂಘಟಕರು ಕೈಗೊಳ್ಳಬೇಕು.
ಬೆಸ್ಕಾಂ ಮನವಿ
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸುವವರು ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡಬಾರದು ಎಂದು ಬೆಸ್ಕಾಂ ಮನವಿ ಮಾಡಿದೆ. ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದರೆ, ಟ್ರಾನ್ ಫಾರ್ಮಗಳಿಗೆ ಒತ್ತಡ ಹೆಚ್ಚಾಗಿ, ಬೆಂಕಿ ಅವಘಡ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಅನಧಿಕೃತ ಸಂಪರ್ಕಗಳ ಬಗ್ಗೆ ತಿಳಿದರೆ 080-2287333 ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಬೆಸ್ಕಾಂ ಮನವಿ ಮಾಡಿದೆ.