ತೌಕ್ತೆ ಚಂಡಮಾರುತ: ಗುಜರಾತ್ಗೆ 1000 ಕೋಟಿ ರೂ, ನೆರವು ಘೋಷಿಸಿದ ಪ್ರಧಾನಿ ಮೋದಿ
ಅಹಮದಾಬಾದ್, ಮೇ 19: ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಗುಜರಾತ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಇಂದು ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಇದಾದ ಬಳಿಕ ಪ್ರಧಾನಿ ಮೋದಿ ರಾಜ್ಯದಲ್ಲಿ ತಕ್ಷಣವೇ ಪರಿಹಾರ ಕಾರ್ಯಗಳಿಗೆ ಅನುಕೂಲವಾಗಲು 1000 ಕೋಟಿ ರೂಪಾಯಿಯ ನೆರವನ್ನು ಘೋಷಣೆ ಮಾಡಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ತೌಕ್ತೆ ಚಂಡಮಾರುತದಿಂದ ಎಲ್ಲಾ ರಾಜ್ಯಗಳಲ್ಲಿ ಪ್ರಾಣವನ್ನು ಕಳೆದುಕೊಂಡವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ.

ಚಂಡಮಾರುತದ ಪ್ರಭಾವಕ್ಕೆ ಒಳಗಾಗಿ ಸಾಕಷ್ಟು ಹಾನಿಗೊಳಗಾದ ಗಿರ್ ಸೋಮನಾಥ್ ಜಿಲ್ಲೆಯ ಉನಾ, ಅಮ್ರೆಲಿ ಜಿಲ್ಲೆಯ ಜಾಫ್ರಾಬಾದ್ , ಭಾವನಗರ ಜಿಲ್ಲೆಯ ಮಾಹುವಾದಲ್ಲಿ ಮತ್ತು ದಿಯುನಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ಕೆಲ ಉನ್ನತ ಅಧಿಕಾರಿಗಳು ಪ್ರಧಾನಿ ಜೊತೆಗಿದ್ದರು.
ವೈಮಾನಿಕ ಸಮೀಕ್ಷೆಯ ನಂತರ ಅಹಮದಾಬಾದ್ನಲ್ಲಿ ಪರಾಮರ್ಶೆ ಸಭೆಯನ್ನು ನಡೆಸಿದ್ದಾರೆ. ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಳ್ಳುತ್ತಿರುವ ಪರಿಹಾರ ಮತ್ತು ಪುನರ್ವಸತಿ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ರಾಜ್ಯದಲ್ಲಿ ಎಷ್ಟು ಪ್ರಮಾಣದ ಹಾನಿಯಾಗಿದೆ ಎಂಬುದನ್ನು ನಿರ್ಣಯಿಸಲು ಕೇಂದ್ರವು ರಾಜ್ಯಕ್ಕೆ ಭೇಟಿ ನೀಡಲು ಸಚಿವರ ತಂಡವನ್ನು ನಿಯೋಜಿಸಲಿದ್ದು, ಅದರ ಆಧಾರದ ಮೇಲೆ ಹೆಚ್ಚಿನ ನೆರವು ನೀಡುವ ಭರವಸೆ ನೀಡಿದ್ದಾರೆ.
ಈ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವುದಾಗಿ ಪ್ರಧಾನಿ ಹೇಳಿದ್ದಾರೆ. ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯಗಳ ಮರು ಸ್ಥಾಪನೆ ಹಾಗೂ ಪುನರ್ನಿರ್ಮಾಣಕ್ಕೆ ಸಾಧ್ಯವಿರುವ ಸಂಪೂರ್ಣ ಸಹಕಾರವನ್ನು ನೀಡುವುದಾಗಿಯೂ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.












Click it and Unblock the Notifications