ಮಹಿಳೆಯರ ಸುರಕ್ಷತೆಗೆ ಆಂಧ್ರ ಸರ್ಕಾರದ ದಿಟ್ಟ ಕ್ರಮ
ಅಮರಾವತಿ, ಡಿಸೆಂಬರ್ 11 : ಮಹಿಳೆ ಮತ್ತು ಮಕ್ಕಳ ಮೇಲೆ ರಕ್ಷಣೆಗಾಗಿ ಆಂಧ್ರಪ್ರದೇಶ ಸರ್ಕಾರ ದಿಟ್ಟ ಕ್ರಮವನ್ನು ಕೈಗೊಳ್ಳಲಿದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಇದಕ್ಕಾಗಿ ಮಸೂದೆಯನ್ನು ಮಂಡನೆ ಮಾಡಲಾಗುತ್ತದೆ.
ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಸುವವರ ವಿಚಾರಣೆಯನ್ನು 21 ದಿನಗಳಲ್ಲಿ ಪೂರ್ಣಗೊಳಿಸಲು ಕಾನೂನಿನಲ್ಲಿ ತಿದ್ದುಪಡಿ ತರಲಾಗುತ್ತದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಸೂದೆಯನ್ನು ಸಿದ್ಧಪಡಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ್ದಾರೆ.
ತೆಲಂಗಾಣದಲ್ಲಿ ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಬಳಿಕ ಮಹಿಳಾ ಸುರಕ್ಷತೆ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ದಿಶಾ ಹೆಸರಿನಲ್ಲಿಯೇ ಮಸೂದೆಯನ್ನು ಜಾರಿಗೆ ತರಲು ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ.

ಆಂಧ್ರಪ್ರದೇಶದ ಗೃಹ ಸಚಿವೆ ಎಂ. ಸುಚರಿತ ಈ ಕುರಿತು ಮಾತನಾಡಿದ್ದು, "ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಶಿಕ್ಷೆ ವಿಧಿಸುವ ಕಾನೂನನ್ನು ಮತ್ತಷ್ಟು ಬಲಿಷ್ಠವಾಗಿ ಮಾಡಲಾಗುತ್ತದೆ. 21 ದಿನದಲ್ಲಿ ವಿಚಾರಣೆ ಮುಗಿಸುವಂತೆ ಮಸೂದೆ ರಚನೆ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.
ಮಸೂದೆ ಅನ್ವಯ ಒಂದು ವಾರದಲ್ಲಿ ವಿಚಾರಣೆ ಪೂರ್ಣಗೊಳ್ಳಬೇಕು. ಎರಡು ವಾರದಲ್ಲಿ ನ್ಯಾಯಾಲಯದ ಕಲಾಪಗಳು ಪೂರ್ಣಗೊಳ್ಳಬೇಕು. 21 ದಿನದಲ್ಲಿ ಎಲ್ಲಾ ಪ್ರಕ್ರಿಯೆ ಮುಗಿದು ಅಪರಾಧಿಗೆ ಶಿಕ್ಷೆ ಪ್ರಕಟವಾಗಬೇಕಿದೆ.
ಸರ್ಕಾರ ಝಿರೋ ಎಫ್ಐಆರ್ ಪರಿಕಲ್ಪನೆಯನ್ನು ಜಾರಿಗೆ ತರಲು ಮುಂದಾಗಿದ್ದು, ಘಟನೆ ಯಾವುದೇ ಪ್ರದೇಶದಲ್ಲಿ ನಡೆದಿದ್ದರೂ ಹತ್ತಿರದ ಪೊಲೀಸ್ ಠಾಣೆಯವರು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ದೂರು ಸ್ವೀಕಾರ ಮಾಡಲು ವಿಳಂಬ ಮಾಡುವಂತಿಲ್ಲ.
ನವೆಂಬರ್ 27ರಂದು ಹೈದರಾಬಾದ್ ಹೊರವಲಯದಲ್ಲಿ ಪಶುವೈದ್ಯೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಬಳಿಕ ಪೆಟ್ರೋಲ್ ಸುರಿದು ಆಕೆಯನ್ನು ಜೀವಂತ ಸುಡಲಾಗಿತ್ತು. ಈ ಘಟನೆ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.
ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳು ಪೊಲೀಸ್ ಎನ್ ಕೌಂಟರ್ನಲ್ಲಿ ಮೃತಪಟ್ಟಿದ್ದರು. ಈ ಘಟನೆ ಬಳಿಕ ಮಹಿಳೆಯರ ಸುರಕ್ಷತೆ ಬಗ್ಗೆ ಚರ್ಚೆಗಳು ಆರಂಭವಾಗಿವೆ.












Click it and Unblock the Notifications