ಮಾಸ್ಕ್ ಧರಿಸದ ಕಾರಣಕ್ಕೆ ಅಮಾನುಷವಾಗಿ ಹಲ್ಲೆ ನಡೆಸಿತಾ ಖಾಕಿ?
ಅಮರಾವತಿ, ಜುಲೈ.22: ಕೊರೊನಾವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮಾಸ್ಕ್ ಧರಿಸಬೇಕು. ಆದರೆ ಹೀಗೆ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ನಡೆಸಿದ ಹಲ್ಲೆಯಿಂದಲೇ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ.
ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಚಿರಾಲ ಠಾಣೆಯ ಪೊಲೀಸರು ಹಲ್ಲೆ ನಡೆಸಿದ ಹಿನ್ನೆಲೆ ಕಿರಣ್ ಕುಮಾರ್ ಎಂಬುವವರು ಗುಂಟೂರು ಜಿಲ್ಲೆಯ ಆಸ್ಪತ್ರೆಯಲ್ಲಿ ಜುಲೈ.19ರಂದು ಮೃತಪಟ್ಟಿದ್ದರು. ಇದಾದ ಬಳಿಕ ಪೊಲೀಸರ ವಿರುದ್ಧ ಮೃತರ ಸಂಬಂಧಿಕರು ಕೆರಳಿದ್ದಾರೆ.
ಆಂಧ್ರ ಪ್ರದೇಶದಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ ಭಾರಿ ಏರಿಕೆ
ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ಕಿರಣ್ ಕುಮಾರ್ ಮಾಸ್ಕ್ ಧರಿಸಿರಲಿಲ್ಲ ಎಂಬ ಕಾರಣಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಇದರಿಂದಲೇ ಕಿರಣ್ ಕುಮಾರ್ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿಯು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಚಿರಾಲ ಠಾಣೆ ಪಿಎಸ್ಐ ವಜಾಗೊಳಿಸುವಂತೆ ಆಗ್ರಹ:
ಮಾಸ್ಕ್ ಧರಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ನಿರ್ದಾಕ್ಷಿಣ್ಯವಾಗಿ ಹಲ್ಲೆ ನಡೆಸಿದ ಪಿಎಸ್ಐ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ಕೂಡಲೇ ಚಿರಾಲ ಠಾಣೆಯ ಪಿಎಸ್ಐರನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ ಮೃತ ಕಿರಣ್ ಕುಮಾರ್ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಆದರೆ ಪ್ರಕಾಶಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಕೌಶಾಲ್, ಮೃತನ ಸಂಬಂಧಿಕರು ಮಾಡುತ್ತಿರುವ ಆರೋಪವನ್ನು ತಳ್ಳಿ ಹಾಕಿದ್ದಾರೆ.