ತಿರುಪತಿಯಲ್ಲಿ ಅಧಿಕ ಮಳೆ: ತಿರುಮಲ ಘಾಟ್ ರಸ್ತೆ ಬಂದ್, ವಿಮಾನಗಳ ಹಾರಾಟದಲ್ಲೂ ವ್ಯತ್ಯಯ
ತಿರುಪತಿ, ನವೆಂಬರ್ 19: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಿರುಪತಿ ಸುತ್ತಮುತ್ತಲ ಪ್ರದೇಶದಲ್ಲಿ ಭಾರಿ ಅನಾಹುತ ಸೃಷ್ಟಿಯಾಗಿದೆ.
ತಿರುಪತಿ ಹಾಗೂ ನೆಲ್ಲೂರಿನಲ್ಲಿ ವಿಪರೀತ ಮಳೆ ಸುರಿಯುತ್ತಿದೆ, ತಿರುಮಲ ಬೆಟ್ಟ, ಘಾಟ್ ರಸ್ತೆ ಬಂದ್ ಆಗಿದೆ. ದೇಗುಲ ನಗರಿ ಭಾಗಶಃ ಮುಳುಗಿದಂತಾಗಿದೆ.
ಬಹುತೇಕ ಕಡೆ ಮರಗಳು ಬಿದ್ದಿವೆ, ಗುಡ್ಡಗಳು ಕುಸಿಯುತ್ತಿವೆ, ದೇವಸ್ಥಾನಗಳಲ್ಲಿ ನೀರು ರಭಸವಾಗಿ ಹರಿಯುತ್ತಿದ್ದು ಭಕ್ತರು ಅಲ್ಲೇ ಸಿಲುಕಿಕೊಂಡಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂಸಂಕಷ್ಟತಂದಿಟ್ಟಿದೆ. ಬುಧವಾರ ರಾತ್ರಿಯಿಂದೀಚೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹಪರಿಸ್ಥಿತಿ ಸೃಷ್ಟಿಯಾಗಿದೆ.

ತಿರುಪತಿಯ ಹಲವು ತಗ್ಗುಪ್ರದೇಶ ಮತ್ತು ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು ಪ್ರವಾಹ ಕಾಣಿಸಿಕೊಂಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಕ್ಕಿ ವಾಹನಗಳುಕೊಚ್ಚಿ ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಇನ್ನು ತಿರುಮಲ ಬೆಟ್ಟಕ್ಕೆ ಹತ್ತುವ ರಸ್ತೆ ಮಾರ್ಗದಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು, ಮರಗಳು ಬುಡಮೇಲಾಗಿವೆ. ಟಿಟಿಡಿ ವಸತಿಗೃಹಗಳು ಕೂಡಾ ನೀರಿನಲ್ಲಿ ಮುಳುಗಿಹೋಗಿವೆ.
ಇನ್ನು ತಿರುಮಲ ಬೆಟ್ಟದ ಬುಡದಲ್ಲಿರುವ ಕಪಿಲೇಶ್ವರ ಸ್ವಾಮಿ ದೇಗುಲದ ಬಳಿ ಬೆಟ್ಟದ ಮೇಲಿನಿಂದ ಮಳೆ ನೀರು ಜಲಪಾತದ ರೀತಿಯಲ್ಲಿ ಧುಮ್ಮಿಕ್ಕುತ್ತಿರುವ ದೃಶ್ಯಗಳು ಮೈ ಜುಮ್ಮೆನಿಸುತ್ತಿವೆ.
ನಗರದ ಹೊರವಲಯದಲ್ಲಿ ಹರಿಯುವ ಸ್ವರ್ಣಮುಖಿ ನದಿಯಲ್ಲಿ ನೀರಿನ ಮಟ್ಟಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಅಕ್ಕಪಕ್ಕದ ಹಳ್ಳಿಗಳ ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಪರಿಣಾಮ ಹಲವು ಹಳ್ಳಿಗಳಲ್ಲಿ ಸೊಂಟದ ಮಟ್ಟದವರೆಗೂ ನೀರು ತುಂಬಿದ್ದು ಜನರಲ್ಲಿ ಆತಂಕ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ತಿರುಪತಿ ಶ್ರೀ ವೆಂಕಟೇಶ್ವರ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ರಸ್ತೆಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗಿದೆ. ಮಂದ ಬೆಳಕಿನ ಪರಿಣಾಮ ಬೆಂಗಳೂರು, ಹೈದರಾಬಾದ್ನಿಂದ ರೇಣಿಗುಂಟಾ ವಿಮಾನನಿಲ್ದಾಣಕ್ಕೆ ಬರಬೇಕಿದ್ದ ವಿಮಾನಗಳನ್ನು ವಾಪಸ್ ಕಳಿಸಲಾಗಿದೆ. ದಿಲ್ಲಿಯಿಂದ ತಿರುಪತಿಗೆ ಬರಬೇಕಿದ್ದ ವಿಮಾನವನ್ನು ರದ್ದುಪಡಿಸಲಾಗಿದೆ. ಪಾದಯಾತ್ರೆ ಮುಖಾಂತರ ದೇವಸ್ಥಾನಕ್ಕೆ ಹೋಗುವ ಮಾರ್ಗಗಳನ್ನು ಬುಧವಾರದಿಂದಲೇ ಮುಚ್ಚಲಾಗಿತ್ತು.
ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯದಲ್ಲಿ ಸ್ಥಳೀಯ ಆಡಳಿತ ನಿರತವಾಗಿದೆ. ತಿರುಪತಿ ಬೆಟ್ಟದಿಂದ ಜಲಪಾತದಂತೆ ನೀರು ಉಕ್ಕಿ ಧುಮ್ಮಿಕ್ಕುತ್ತಿದೆ. ಬಿಡದೆ ಸುರಿಯುತ್ತಿರುವ ಮಳೆ ಈ ಅವಾಂತರ ಸೃಷ್ಟಿಸಿದೆ. ಆಂಧ್ರ ಪ್ರದೇಶ ಸರ್ಕಾರ ತುರ್ತು ಸಭೆ ಕರೆದು ಪ್ರವಾಹ ಪರಿಸ್ಥಿತಿ ಎದುರಿಸುವ ಕುರಿತು ಚರ್ಚಿಸಿದೆ.
ಪ್ರವಾಹ ಪೀಡಿತ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ, ಆಹಾರ ಸಾಮಾಗ್ರಿಗಳ ಪೂರೈಕೆ ಸೇರಿದಂತೆ ಪರಿಸ್ಥಿತಿ ನಿಭಾಯಿಸಲು ತಂಡಗಳನ್ನು ರಚಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಆರೇಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೆರಡು ದಿನ ಮಳೆ ಹೀಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಇದು ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಭಾರಿ ಮಳೆ ಹಾಗೂ ಪ್ರವಾಹದಿಂದ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಗಳ ಮೇಲೆ ಗುಡ್ಡ ಕುಸಿದು ಬಿದ್ದಿದೆ. ರಸ್ತೆ ಮೇಲೆ ಬಿದ್ದಿರುವ ಕಲ್ಲು, ಬಂಡೆ ಹಾಗೂ ಮಣ್ಣು ತೆರವು ಕಾರ್ಯಾಚರಣೆಯೂ ನಡೆಯುತ್ತಿದೆ. ಆದರೆ ಭಾರಿ ಮಳೆ ಕಾರ್ಯಾಚರಣೆಗೆ ಅಡ್ಡಿಯನ್ನುಂಟು ಮಾಡುತ್ತಿದೆ. ಇಂದು(ನ.19) ನಡೆಯಬೇಕಿದ್ದ ಕಾರ್ತಿಕ ದೀಪೋತ್ಸವವು ವಿಶೇಷ ಪೂಜಾ ಕಾರ್ಯಕ್ರವನ್ನು ಮುಂದೂಡಲಾಗಿದೆ. ಈ ಕುರಿತು ತುರ್ತು ಸಭೆ ನಡೆಸಿದ ತಿರುಪತಿ ಆಡಳಿತ ಮಂಡಳಿ ದೀಪೋತ್ಸವವನ್ನು ಮುಂದೂಡಿದೆ.
ತಿರುಮಲ , ಚಿತ್ತೂರು ಸೇರಿದಂತೆ ತಿರುಪತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅತೀವ ಮಳೆ ಹಾಗೂ ಪ್ರವಾಹದಿಂದ ತಿರುಪತಿ, ತಿರುಮಲದಲ್ಲಿ ರಸ್ತೆಗಳೆಲ್ಲಾ ನದಿಗಳಾಗಿ ಬದಲಾಗಿದೆ. ರಸ್ತೆಯಲ್ಲಿ ನಿಂತಿದ್ದ ಆಟೋ, ಕಾರು ಬೈಕ್ ಚರಂಡಿಯಲ್ಲಿ ಕೊಚ್ಚಿ ಹೋಗಿದೆ. ನೀರಿನ ರಭಸಕ್ಕೆ ಹಲವು ವಾಹನಗಳು ಕೊಚ್ಚಿ ಹೋಗಿದೆ. ರಸ್ತೆಯಲ್ಲಿದ್ದ ಬಸ್ಗಳು ಬಹುತೇಕ ಮುಳುಗಡೆಯಾಗಿದ್ದು, ಬಸ್ ಮೇಲ್ಬಾಗ ಮಾತ್ರ ಕಾಣಿಸುತ್ತಿದೆ.
ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಗುರುವಾರ ಸಂಜೆಯಿಂದ ಅನಿರ್ದಿಷ್ಟಾವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ. ಜತೆಗೆ ವಿಮಾನ ಸಂಚಾರಕ್ಕೂ ತೊಂದರೆಯಾಗಿದೆ.
ಹೈದರಾಬಾದ್ ಮತ್ತು ಬೆಂಗಳೂರಿನಿಂದ ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಎರಡು ಪ್ರಯಾಣಿಕರ ವಿಮಾನಗಳು ಇಂದು ಪ್ರತಿಕೂಲ ಹವಾಮಾನದಿಂದಾಗಿ ಹಿಂತಿರುಗಬೇಕಾಯಿ ಎಂದು ತಿರುಪತಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ಸುರೇಶ್ ಪಿಟಿಐಗೆ ತಿಳಿಸಿದ್ದಾರೆ,
ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ನವದೆಹಲಿಯಿಂದ ತಿರುಪತಿಗೆ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.












Click it and Unblock the Notifications