370 ನೇ ವಿಧಿ: ಕೇಂದ್ರದ ಬೆಂಬಲಕ್ಕೆ ನಿಂತ ಚಂದ್ರಬಾಬು ನಾಯ್ಡು ಅಚ್ಚರಿಯ ನಡೆ
ಅಮರಾವತಿ, ಆಗಸ್ಟ್ 05: ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಎನ್ ಡಿಎ ಸರ್ಕಾರದ ಎಲ್ಲ ನಡೆಗಳನ್ನೂ ಟೀಕಿಸುತ್ತಲೇ ಸುದ್ದಿಯಾಗಿದ್ದ ಟಿಡಿಪಿ ನಾಯಕ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಇದೀಗ ಕೇಂದ್ರ ಸರ್ಕಾರದ ಬೆಂಬಲಕ್ಕೆ ನಿಂತಿದ್ದಾರೆ!
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೆಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ತಾವು ಮತ್ತು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಚಂದ್ರಬಾಬು ನಾಯ್ಡು ಟ್ವೀಟ್ ಮಾಡಿದ್ದಾರೆ.
ಕೇಂದ್ರದ ನಡೆಗೆ ಸ್ನೇಹಿತರಿಂದಲೇ ವಿರೋಧ, ವಿರೋಧಿಗಳಿಂದ ಅಚ್ಚರಿಯ ಬೆಂಬಲ!
"370 ನೇ ವಿಧಿಯನ್ನು ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರದ ಜನರಿಗೆ ಶಾಂತಿ ಮತ್ತು ಸಮೃದ್ಧಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ನಾಯ್ಡು ಟ್ವೀಟ್ ಮಾಡಿದ್ದಾರೆ.
ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು : ಯಾರು, ಏನು ಹೇಳಿದರು?
2014 ರ ಲೋಕಸಭೆ ಚುನಾವಣೆಯ ನಂತರ ಎನ್ ಡಿಎ ಮೈತ್ರಿಕೂಟದ ಭಾಗವಾಗಿದ್ದ ಟಿಡಿಪಿ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ಮುಂದಾಗದ ಕಾರಣ ಮೈತ್ರಿಕೂಟದಿಂದ ಹೊರಬಂದಿತ್ತು. ನಂತರ ಎನ್ ಡಿಎ ಮೈತ್ರಿಕೂಟಕ್ಕೆ ಪರ್ಯಾಯವಾಗಿ ವಿರೋಧ ಪಕ್ಷಗಳ ಮಹಾಘಟಬಂಧನ ನಿರ್ಮಿಸಲು ಚಂದ್ರಬಾಬು ನಾಯ್ಡು ಅವರೇ ಮುಂಚೂಟಿಯಲ್ಲಿ ಓಡಾಡಿದ್ದರು. ಆದರೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಾತ್ರವಲ್ಲದೆ, ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲೂ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಜನಾದೇಶ ಪಡೆದುಕೊಳ್ಳಲುವಲ್ಲಿ ವಿಫಲವಾಗಿತ್ತು.