ಜಗನ್ ವಿರುದ್ಧ ಸಿಡಿದೆದ್ದ ಸಂಸದನ ಬಂಧನ, ದೇಶದ್ರೋಹದ ಕೇಸ್ ದಾಖಲು
ಅಮರಾವತಿ, ಮೇ 14; ಆಂಧ್ರ ಪ್ರದೇಶದ ಸಿಐಡಿ ಪೊಲೀಸರು ನರಸಪುರಂ ಸಂಸದ ಕನುಮುರಿ ರಘುರಾಮ ಕೃಷ್ಣಂರಾಜು ಬಂಧಿಸಿದೆ. ಸಂಸದರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗಿದೆ.
ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಕನುಮುರಿ ರಘುರಾಮ ಕೃಷ್ಣಂರಾಜು (59) ಪಕ್ಷದ ವಿರುದ್ಧವೇ ಬಂಡಾಯ ಎದ್ದಿದ್ದಾರೆ. ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಗನ್ ಮೋಹನ್ ರೆಡ್ಡಿಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಆಂಧ್ರ ಪ್ರದೇಶದ ಮುಖ್ಯಮಂತ್ರಿ, ವೈಎಸ್ಆರ್ ಪಕ್ಷದ ಸಂಸ್ಥಾಪಕ ಜಗನ್ ಮೋಹನ್ ರೆಡ್ಡಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪವನ್ನು ಕನುಮುರಿ ರಘುರಾಮ ಕೃಷ್ಣಂರಾಜು ಮಾಡಿದ್ದರು. ಹೈದರಾಬಾದ್ ನಿವಾಸದಲ್ಲಿ ಅವರನ್ನು ಬಂಧಿಸಲಾಗಿದೆ.

ರಾಜ್ಯ ಸರ್ಕಾರದ ಪ್ರತಿಷ್ಠೆಗೆ ಹಾನಿ ಮಾಡುವ ರೀತಿಯಲ್ಲಿ ವರ್ತಿಸಿದ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ. ಕನುಮುರಿ ರಘುರಾಮ ಕೃಷ್ಣಂರಾಜು ವಿರುದ್ಧ ಸೆಕ್ಷನ್ 124 ಎ, 153 ಎ, 505 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಏಪ್ರಿಲ್ 27ರಂದು ಕನುಮುರಿ ರಘುರಾಮ ಕೃಷ್ಣಂರಾಜು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿಯೊಂದನ್ನು ಸಲ್ಲಿಸಿದ್ದರು. ಆಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಗನ್ ಮೋಹನ್ ರೆಡ್ಡಿಗೆ ನೀಡಿದ ಜಾಮೀನು ರದ್ದುಗೊಳಿಸಿ ಎಂದು ಕೋರಿದ್ದರು.
ಮುಖ್ಯಮಂತ್ರಿಯಾಗಿರುವ ಜಗನ್ ಮೋಹನ್ ರೆಡ್ಡಿ ಜಾಮೀನು ನೀಡುವಾಗ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಿದ್ದರು. ಸಂಸದರು ಕೆಲವು ಸಮುದಾಯಗಳ ವಿರುದ್ಧ ದ್ವೇಷದ ಭಾಷಣಗಳನ್ನು ಮಾಡುತ್ತಿದ್ದಾರೆ ಎಂದು ಸಹ ಪೊಲೀಸರು ಹೇಳಿದ್ದಾರೆ.












Click it and Unblock the Notifications