ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣ; ವಿಶೇಷತೆಗಳು
ತಿರುಪತಿ, ಸೆಪ್ಟೆಂಬರ್ 24 : ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶಂಕುಸ್ಥಾಪನೆ ಮಾಡಿದರು. 6.67 ಎಕರೆ ಪ್ರದೇಶದಲ್ಲಿ 4 ಕಟ್ಟಡಗಳು ನಿರ್ಮಾಣವಾಗಲಿವೆ.
ಗುರುವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಕರ್ನಾಟಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದರು. ಕರ್ನಾಟಕ ಸರ್ಕಾರದ ವತಿಯಿಂದ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಅವರು ಈ ಕುರಿತು ಮಾಹಿತಿ ನೀಡಿದರು. "ಬೆಟ್ಟದ ಮೇಲೆ ಕರ್ನಾಟಕಕ್ಕೆ ಸೇರಿರುವ 6.67 ಎಕರೆ ಪ್ರದೇಶದಲ್ಲಿ ವಸತಿ ಗೃಹ ನಿರ್ಮಾಣವಾಗಲಿದ್ದು, ತಿರುಪತಿಯಲ್ಲಿ ಕರ್ನಾಟಕದ ಭಕ್ತರಿಗೆ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲು ಭವನ ನಿರ್ಮಾಣ ಮಾಡಲಾಗುತ್ತಿದೆ" ಎಂದರು.
ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ, ಆಂಧ್ರ ಪ್ರದೇಶ ಸರ್ಕಾರದ ವಿವಿಧ ಸಚಿವರು ಸೇರಿದಂತೆ ಹಲವರು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಬಳಿಕ ಯಡಿಯೂರಪ್ಪ ಅವರು ತಿರುಪತಿಯಲ್ಲಿ ದೇವರ ದರ್ಶನ ಪಡೆದರು.

ಟಿಟಿಡಿಯಿಂದ ಕಟ್ಟಡಗಳ ನಿರ್ಮಾಣ
ಒಟ್ಟು 3 ಲಕ್ಷ ಚದರ ಅಡಿ ಜಾಗದಲ್ಲಿ ಸಂಪಿಗೆ, ಸೇವಂತಿಗೆ, ತಾವರೆ ಮತ್ತು ಮಲ್ಲಿಗೆ ಹೆಸರಿನ ನಾಲ್ಕು ಭವ್ಯ ಕಟ್ಟಡಗಳು ನಿರ್ಮಾಣವಾಗಲಿವೆ. ಟಿಟಿಡಿ ಹೊಸ ಕಟ್ಟಡಗಳ ನಿರ್ಮಾಣದ ಹೊಣೆಯನ್ನು ಹೊತ್ತುಕೊಂಡಿದೆ. ಕರ್ನಾಟಕ ಸರ್ಕಾರಕ್ಕೆ ಸೇರಿದ ಜಾಗದಲ್ಲಿ ಕಟ್ಟಡಗಳು ನಿರ್ಮಾಣಗೊಳ್ಳಲಿವೆ.

ಹಳೆ ಕಟ್ಟಡ ನವೀಕರಣ
"ಹೊಸ ಕಟ್ಟಡಗಳ ನಿರ್ಮಾಣದ ಜೊತೆಗೆ ಈ ಹಿಂದೆ ಇದ್ದ ಕನಕಾಂಬರ ಎಂಬ ಹೆಸರಿನ ಕಟ್ಟಡವನ್ನು ನವೀಕರಣ ಮಾಡಲಾಗುತ್ತದೆ" ಎಂದು ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ನ್ಯೂ ಮೈಸೂರು ಚೌಲ್ಟ್ರಿ ನಿರ್ಮಾಣ
1964ರಲ್ಲಿ ನ್ಯೂ ಮೈಸೂರು ಚೌಲ್ಟ್ರಿ ನಿರ್ಮಾಣಕ್ಕೆ ಅಂಧಿನ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಶಂಕುಸ್ಥಾಪನೆ ಮಾಡಿದ್ದರು. ಆದಾದ ಬಳಿಕ ಸಿಎಂ ಯಡಿಯೂರಪ್ಪ ಮತ್ತು ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಒಟ್ಟಾಗಿ ಕರ್ನಾಟಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದ್ದು ವಿಶೇಷವಾಗಿದೆ.

ರಾಜ್ಯದಿಂದ ಹೆಚ್ಚಿನ ಭಕ್ತರು ಭೇಟಿ
"ಕರ್ನಾಟಕದಿಂದ ಹೆಚ್ಚಿನ ಭಕ್ತರು ತಿರುಪತಿಗೆ ಭೇಟಿ ನೀಡುತ್ತಾರೆ. ಆದರೆ, ಎಲ್ಲರಿಗೂ ಉಳಿದುಕೊಳ್ಳಲು ಕರ್ನಾಟಕ ಭವನದಲ್ಲಿ ಕೊಠಡಿಗಳು ಸಿಗುತ್ತಿರಲಿಲ್ಲ. ಆದ್ದರಿಂದ, ನಾಲ್ಕು ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ" ಎಂದು ರೋಹಿಣಿ ಸಿಂಧೂರಿ ಹೇಳಿದರು.

ನಡೆದುಕೊಂಡು ಹೋಗಬಹುದು
"ಹೊಸದಾಗಿ ನಿರ್ಮಾಣವಾಗುತ್ತಿರುವ ಕಟ್ಟಡದಿಂದ ಭಕ್ತರು ದೇವಾಲಯಕ್ಕೆ ನಡೆದುಕೊಂಡೇ ಹೋಗಬಹುದು. ಈ ಯೋಜನೆ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಬಹುದು" ಎಂದು ಅಂದಾಜಿಸಲಾಗಿದೆ.












Click it and Unblock the Notifications