ತಿರುಪತಿ: ಮತ್ತೊಂದು ಐತಿಹಾಸಿಕ ನಿರ್ಧಾರಕ್ಕೆ ಮುಂದಾದ ವೈ ಎಸ್ ಜಗನ್
Recommended Video
ಅಮರಾವತಿ, ಅ 24: ಅಧಿಕಾರಕ್ಕೆ ಬಂದ ನಂತರ ಹಲವು ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ, ಹಿಂದೂಗಳ ಪುಣ್ಯಕ್ಷೇತ್ರ ತಿರುಪತಿಯಲ್ಲಿ ಮತ್ತೊಂದು ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ತಿರುಪತಿ ನಗರದಲ್ಲಿ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲು, ಜಗನ್ ಸರಕಾರ ಮುಂದಾಗುವ ಸಾಧ್ಯತೆಯಿದೆ. ತಿರುಮಲ ಬೆಟ್ಟದಲ್ಲಿ ಈಗಾಗಲೇ ಮದ್ಯಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ.
ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ) ಆಡಳಿತ ಮಂಡಳಿ, ಬುಧವಾರ (ಅ 23) ಸಂಜೆ ಸಭೆ ಸೇರಿ, ಹಂತ ಹಂತದಲ್ಲಿ, ತಿರುಪತಿ ನಗರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರುವಂತೆ, ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ನಿರ್ಧಾರಕ್ಕೆ ಬಂದಿದೆ.

ಟಿಟಿಡಿ ಅಧ್ಯಕ್ಷ ವೈ.ವಿ.ಸುಬ್ಬಾ ರೆಡ್ಡಿ ಈ ಬಗ್ಗೆ ಹೇಳಿಕೆ ನೀಡುತ್ತಾ, "ಮದ್ಯ ನಿಷೇಧದ ವಿಚಾರದಲ್ಲಿ ಮಂಡಳಿಯ ನಿರ್ಧಾರದ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಿದ್ದೇವೆ" ಎಂದು ಹೇಳಿದ್ದಾರೆ.
"ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಹೇರಲು ಪೂರ್ವ ತಯಾರಿ ನಡೆಸುತ್ತಿದ್ದಾರೆ. ತಿರುಮಲದಲ್ಲಿ ಈಗಾಗಲೇ ಮದ್ಯ ಮಾರಾಟಕ್ಕೆ ನಿಷೇಧವಿದೆ. ನಮ್ಮ ಪ್ರಸ್ತಾವನೆಯನ್ನು ಸರಕಾರ ಒಪ್ಪಿಕೊಳ್ಳುತ್ತದೆ ಎನ್ನುವ ವಿಶ್ವಾಸದಲ್ಲಿದ್ದೇವೆ" ಎಂದು ಸುಬ್ಬಾ ರೆಡ್ಡಿ ಹೇಳಿದ್ದಾರೆ.
ತಿರುಮಲದಲ್ಲಿ ಸಂಚರಿಸುವ ಆಂಧ್ರಪ್ರದೇಶ ಸರ್ಕಾರದ ಸಾರಿಗೆ ಬಸ್ ಗಳ ಟಿಕೆಟ್ ನಲ್ಲಿ ಕ್ರೈಸ್ತ ಮತ ಪ್ರಚಾರ ನಡೆಯುತ್ತಿದೆ ಎಂಬ ಆರೋಪ ಈ ಹಿಂದೆ, ಕೇಳಿ ಬಂದ ಬೆನ್ನಲ್ಲೇ, ಆಂಧ್ರಪ್ರದೇಶ ಸರಕಾರ, ಹೊಸ ಬದಲಾವಣೆ ತಂದಿತ್ತು.
ಟಿಟಿಡಿ ಅಧಿಕಾರಿಗಳನ್ನು ಭೇಟಿಯಾದ ನಂತರ, "ದೇವಾಲಯದಲ್ಲಿ ಕಾರ್ಯ ನಿರ್ವಹಿಸುವ ಹಿಂದೂಯೇತರ ನೌಕರರನ್ನು ಕೆಲಸದಿಂದ ತೆಗೆದು ಹಾಕಲಾಗುವುದು" ಎಂದು ಆಂಧ್ರಪ್ರದೇಶದ ಮುಖ್ಯ ಕಾರ್ಯದರ್ಶಿ ಎಲ್.ವಿ.ಸುಬ್ರಹ್ಮಣ್ಯಂ ಹೇಳಿದ್ದರು.












Click it and Unblock the Notifications