ರೆಬೆಲ್ ವೈಎಸ್ಆರ್ ಕಾಂಗ್ರೆಸ್ ಸಂಸದ ರಾಮಕೃಷ್ಣರಾಜುಗೆ ಜಾಮೀನು
ನವದೆಹಲಿ, ಮೇ 21: ವೈಎಸ್ಆರ್ ಕಾಂಗ್ರೆಸ್ ರೆಬೆಲ್ ಸಂಸದ ಕನಮುರಿ ರಘು ರಾಮಕೃಷ್ಣರಾಜು ಅವರಿಗೆ ಇಂದು ಸುಪ್ರೀಂಕೋರ್ಟ್ನಿಂದ ಜಾಮೀನು ಸಿಕ್ಕಿದೆ. ಆಂಧ್ರಪ್ರದೇಶ ಸಿಐಡಿ ಹೂಡಿರುವ ದೇಶದ್ರೋಹ ಪ್ರಕರಣದಲ್ಲಿ ಅವರಿಗೆ ಅಲ್ಲಿನ ಹೈಕೋರ್ಟ್ನಿಂದ ಜಾಮೀನು ಸಿಕ್ಕಿರಲಿಲ್ಲ. ಸಿಐಡಿ ಅಧಿಕಾರಿಗಳು ತಮ್ಮ ಮೇಲೆ ವಿವೇಚನೆ ಇಲ್ಲದೆ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅಳಲು ತೋಡಿಕೊಂಡಿದ್ದರು.
ತಾವು ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಕೂಡಲೇ ಜಾಮೀನು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿ ಅವರು ಮತ್ತೊಂದು ಅರ್ಜಿಯನ್ನು ಸಂಸದ ರಾಜು ಪರ ವಕೀಲ ಮುಕುಲ್ ರೋಹ್ಟಗಿ ಅವರು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದರು.
ಅರ್ಜಿಯನ್ನು ಪರಿಗಣಿಸಿದ ಪರಿಗಣಿಸಿದ ಸುಪ್ರೀಂಕೋರ್ಟ್ ವಿಭಾಗೀಯ ಪೀಠದ ನ್ಯಾ ವಿನೀತ್ ಸರನ್ ಹಾಗೂ ಬಿಆರ್ ಗವಾಯಿ ಸಿಕಂದರಾಬಾದ್ ಆರ್ಮಿ ಆಸ್ಪತ್ರೆಯಿಂದ ಲಭ್ಯವಾದ ವೈದ್ಯಕೀಯ ವರದಿ ಆಧಾರದ ಮೇಲೆ ರಾಜು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಷರತ್ತುಗಳಲ್ಲಿ ಮುಖ್ಯವಾಗಿ ಆಸ್ಪತ್ರೆಯಲ್ಲಿರುವಾಗ ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಬಾರದು ಎಂದು ಕೋರ್ಟ್ ಸೂಚಿಸಿದೆ.
ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ಸಿಎಂ ಜಗನ್ ಮೋಹನ್ ರೆಡ್ಡಿ ಅಧಿಕಾರ ದುರುಪಯೋಗ ಮಾಡಿಕೊಂಡು ಪೊಲೀಸರನ್ನು ನನ್ನ ವಿರುದ್ಧ ಎತ್ತಿ ಕಟ್ಟಿದ್ದಾರೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ಪಕ್ಷದ ನೇತಾರ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಜಾಮೀನು ಪಡೆದಿದ್ದು ಹೇಗೆ? ಎಂದು ಪ್ರಶ್ನಿಸಿ ರಾಮಕೃಷ್ಣರಾಜು ಸಾಮಾಜಿಕ ಜಾಲ ತಾಣಗಳಲ್ಲಿ ವಾಗ್ದಾಳಿ ನಡೆಸಿದ್ದರು. ತಮ್ಮ ವಿರುದ್ಧ ಹೂಡಲಾಗಿರುವ ಮೊಕದ್ದಮೆ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು.