ಆಂಧ್ರಪ್ರದೇಶದ ಕಡಪಾದಲ್ಲಿ ಪ್ರವಾಹಕ್ಕೆ ಮೂವರು ಬಲಿ, 30 ಮಂದಿ ನಾಪತ್ತೆ
ಕಡಪಾ (ಆಂಧ್ರಪ್ರದೇಶ), ನವೆಂಬರ್ 19: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು 30 ಮಂದಿ ನಾಪತ್ತೆಯಾಗಿದ್ದಾರೆ. ಅಧಿಕ ಮಳೆಗೆ ಅಣೆಕಟ್ಟು ಒಡೆದು ಚೆಯ್ಯೆರು ನದಿ ಉಕ್ಕಿ ಹರಿಯುವ ಮೂಲಕ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ನಂದಲೂರಿನ ಸ್ವಾಮಿ ಆನಂದ ದೇವಸ್ಥಾನವೂ ಮುಳುಗಡೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಶುಕ್ರವಾರ ಮುಂಜಾನೆ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಆಂಧ್ರಪ್ರದೇಶ ಮತ್ತು ರಾಯಲಸೀಮೆಯಾ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.
ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ನೂರಾರು ಯಾತ್ರಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ತಿರುಮಲ ಬೆಟ್ಟದ ಮುಖ್ಯ ದೇವಾಲಯಕ್ಕೆ ಹೊಂದಿಕೊಂಡಿರುವ ನಾಲ್ಕು ಬೀದಿಗಳು ಜಲಾವೃತಗೊಂಡಿವೆ. ಪ್ರವಾಹದ ನೀರು ರಸ್ತೆಗಳಲ್ಲಿ ಹರಿಯುತ್ತಿರುವ ವಿಡಿಯೋ ಸಾಮಾಜಿಕ ಜಾತಲಾಣದಲ್ಲಿ ಭಾರೀ ವೈರಲ್ ಆಗಿದೆ. ತಿರುಮಲ ಬೆಟ್ಟದ ಮೇಲೆ ಹಲವು ಮರಗಳು ನೆಲಕ್ಕುರುಳಿದ್ದು, ಪಾಪವಿನಾಶನಂ ಮತ್ತು ಶ್ರೀವಾರಿ ಪಾದಾಲು ಮುಂತಾದ ಸ್ಥಳಗಳಿಗೆ ಹೋಗುವ ರಸ್ತೆಯನ್ನು ಮುಚ್ಚಲಾಗಿದೆ.
ಕಾರ್ತಿಕ ಪೌರ್ಣಮಿಯಂದು ಶಿವನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಭಕ್ತರ ಗುಂಪೊಂದು ಹಠಾತ್ ಪ್ರವಾಹಕ್ಕೆ ಸಿಲುಕಿ ರಾಜಂಪೇಟೆ ಪ್ರದೇಶದಲ್ಲಿ ಕೊಚ್ಚಿಕೊಂಡು ಹೋಗಿದೆ. ಬಳಿಕ ನಂದಲೂರು ಬಳಿ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರ ಪತ್ತೆಗೆ ಪ್ರಯತ್ನ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಉಂಟಾದ ಭಾರೀ ಮಳೆಯಿಂದಾಗಿ ರಾಯಲಸೀಮಾ ಜಿಲ್ಲೆಗಳಾದ ಚಿತ್ತೂರು ಮತ್ತು ಕಡಪಾವು ಹಲವು ವರ್ಷಗಳಿಂದಲೂ ಭೀಕರವಾದ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಇದು ಹಲವಾರು ನದಿಗಳನ್ನು ಉಕ್ಕಿ ಹರಿಯುವಂತೆ ಮಾಡಿದೆ.
NDRF ಮತ್ತು SDRF ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಕ್ರಮ ಕೈಗೊಂಡಿವೆ. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಹೆಚ್ಚಿಸುವಂತೆ ಅವರಿಗೆ ನಿರ್ದೇಶನ ನೀಡಿದರು.
ಇನ್ನೂ ತಮಿಳುನಾಡು ನಿರಂತರ ಮಳೆಗೆ ಮನೆ ಕುಸಿದು ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪೆರ್ನಂಬೆಟ್ನಲ್ಲಿ ಶುಕ್ರವಾರ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಮನೆ ಕುಸಿದಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಹಾಗೂ ಓರ್ವ ಪುರುಷ ಸೇರಿದ್ದಾರೆ. ಮನೆಯವರು ಗಾಢ ನಿದ್ದೆಯಲ್ಲಿದ್ದಾಗ ಮನೆ ಕುಸಿದು ಬಿದ್ದಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಹೊರತೆಗೆದಿದ್ದಾರೆ. ತಮಿಳುನಾಡು ಮತ್ತು ಪುದುಚೇರಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಭಾಗದ ಜಲಾಶಯಗಳಿಗೆ ಹೆಚ್ಚಿನ ಒಳಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಆಯೋಗವು (ಸಿಡಬ್ಲ್ಯುಸಿ) ಅಣೆಕಟ್ಟು ನಿರ್ವಾಹಕರಿಗೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಮತ್ತು ಎಚ್ಚರಿಕೆಯಿಂದ ನೀರು ಬಿಡುವಂತೆ ಗುರುವಾರ ಸಲಹೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯು ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಗೆ ಹಠಾತ್ ಪ್ರವಾಹದ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ 250 ಮಿ.ಮೀ.ಗೂ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಾರೀ ಮಳೆ ಸುರಿದು ತಿರುಮಲ ಮತ್ತು ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಮಧುರಾ ನಗರ, ಗೊಲ್ಲವಾನಿ ಗುಂಟಾ, ಲಕ್ಷ್ಮೀಪುರಂ, ಏರ್ ಬೈಪಾಸ್ ರಸ್ತೆ, ಚಂದ್ರಗಿರಿ ಪಟ್ಟಣ, ಕಪಿಲ ತೀರ್ಥಂ ದೇವಸ್ಥಾನ ಸೇರಿದಂತೆ ಮನೆಗಳಿಗೆ ನುಗ್ಗುವ ಅಪಾಯವಿದೆ. ತಿರುಮಲ ಬೆಟ್ಟಗಳ ಮೇಲಿನಿಂದ ಜಲಪಾತದಂತೆ ಮಳೆ ನೀರು ಧುಮುಕುತ್ತಿದ್ದು ಪ್ರವಾಹದಿಂದಾಗಿ ಸಂಚಾರಕ್ಕೂ ಅಡಚಣೆಯಾಗಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇಂದು, ಹವಾಮಾನ ಇಲಾಖೆಯು ಬೆಂಗಳೂರು ಮತ್ತು ಘಟ್ಟಗಳಿಗೆ ಆರೆಂಜ್ ಅಲರ್ಟ್ ಮತ್ತು ಕೆಲವು ಕರಾವಳಿ ಜಿಲ್ಲೆಗಳು ಮತ್ತು ಕರ್ನಾಟಕದ ಉತ್ತರ ಒಳಭಾಗದಲ್ಲಿ ಹಳದಿ ಅಲರ್ಟ್ ಘೋಷಿಸಿದೆ.