ಸಿಎಂ ಜಗನ್ ಆರೋಪದ ನಡುವೆ ಆಂಧ್ರ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ
ಅಮರಾವತಿ, ಡಿಸೆಂಬರ್ 16: ಸುಪ್ರೀಂ ಕೋರ್ಟ್ ಕೊಲೀಜಿಯಂ ಆಂಧ್ರ ಪ್ರದೇಶದ ನ್ಯಾಯಮೂರ್ತಿ ಜೆ.ಕೆ. ಮಾಹೇಶ್ವರಿ ಒಳಗೊಂಡಂತೆ ವಿವಿಧ ಹೈಕೋರ್ಟ್ ಗಳ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡುವಂತೆ ಶಿಫಾರಸ್ಸು ಮಾಡಿದೆ.
ಮಂಗಳವಾರ ನಡೆದ ಬೆಳವಣಿಗೆಯಂತೆ, ಜೆ.ಕೆ. ಮಾಹೇಶ್ವರಿ ಅವರನ್ನು ಸಿಕ್ಕಿಂಗೆ ವರ್ಗಾವಣೆ ಮಾಡಲಾಗಿದ್ದು, ಪಂಜಾಬ್, ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿ ಎಸ್ ಮುರಳೀಧರ್ ಅವರನ್ನು ಒಡಿಶಾದ ಮುಖ್ಯ ನ್ಯಾಯಮೂರ್ತಿಯಾಗಿ ನಿಯೋಜಿಸಲು ಶಿಫಾರಸ್ಸು ಮಾಡಿರುವುದಾಗಿ ತಿಳಿದುಬಂದಿದೆ.
ಜಗನ್ ರೆಡ್ಡಿ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ಮತ್ತಷ್ಟು ನ್ಯಾಯಮೂರ್ತಿಗಳ ವರ್ಗಾವಣೆ ಸಂಬಂಧ ಕಾನೂನು ಸಚಿವರಿಗೆ ಶಿಫಾರಸ್ಸು ಕಳಿಸಲಾಗುವುದೆಂದು ಮೂಲಗಳು ತಿಳಿಸಿವೆ.
ಆಂಧ್ರಪ್ರದೇಶ ಹಾಗೂ ಸಿಕ್ಕಿಂನ ಮುಖ್ಯ ನ್ಯಾಯಮೂರ್ತಿಗಳು ಸಿಕ್ಕಿಂನ ಗಾಂಗ್ಟಕ್ ಗೆ ತೆರಳುತ್ತಿರುವ ಮುಖ್ಯ ನ್ಯಾಯಮೂರ್ತಿ ಜೆ.ಕೆ. ಮಾಹೇಶ್ವರಿ ಹಾಗೂ ಮುಖ್ಯ ನ್ಯಾಯಮೂರ್ತಿ ಅರುಪ್ ಕುಮಾರ್ ಗೋಸ್ವಾಮಿ ಅವರ ಸ್ಥಳಗಳಿಗೆ ನಿಯೋಜನೆಗೊಳ್ಳಲಿರುವುದಾಗಿ ತಿಳಿದುಬಂದಿದೆ.
ಈಚೆಗೆ ಆಂಧ್ರ ಪ್ರದೇಶ ಹೈಕೋರ್ಟ್ ವಿವಾದಕ್ಕೆ ಸಿಲುಕಿದ್ದು, ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ, ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿಗಳು ಹೈಕೋರ್ಟ್ ನ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ವರ್ಗಾವಣೆಯ ಬೆಳವಣಿಗೆ ನಡೆದಿದೆ.
ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ಎಸ್ ಮುರಳೀಧರ್ ಅವರನ್ನು ಒಡಿಶಾ ಹೈಕೋರ್ಟ್ ಗೆ ನಿಯೋಜಿಸಿರುವುದಾಗಿ ತಿಳಿದುಬಂದಿದೆ. ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರನ್ನು ಜಮ್ಮು ಹಾಗೂ ಕಾಶ್ಮೀರದ ಮುಖ್ಯ ನ್ಯಾಯಮೂರ್ತಿಯಾಗಿ ಹಾಗೂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನು ತೆಲಂಗಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಶಿಫಾರಸ್ಸು ಮಾಡಿರುವುದಾಗಿ ತಿಳಿದುಬಂದಿದೆ.