ಸುಪ್ರೀಂಕೋರ್ಟ್ ಸಿಜೆಐಗೆ ಆಂಧ್ರ ಸಿಎಂ ಜಗನ್ ಪತ್ರ
ಅಮರಾವತಿ, ಅಕ್ಟೋಬರ್ 11: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ನ್ಯಾಯಾಂಗದ ನಡುವಿನ ಸಂಘರ್ಷ ದೆಹಲಿ ತಲುಪಿದೆ. ಕೆಲವು ನ್ಯಾಯಮೂರ್ತಿಗಳ ವಿರುದ್ಧ ಜಗನ್ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೊಬ್ಡೆ ಅವರಿಗೆ ಬರೆದಿರುವ ಪತ್ರದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, "ರಾಜ್ಯದ ನ್ಯಾಯಾಂಗ ವ್ಯವಸ್ಥೆ ತಟಸ್ಥ ನೀತಿಯನ್ನು ಕಾಪಾಡಿಕೊಂಡು ಬರಲು ಅಗತ್ಯವಿರುವ ಕ್ರಮ ಕೈಗೊಳ್ಳಬೇಕು" ಎಂದು ಮನವಿ ಮಾಡಿದ್ದಾರೆ.
ಆಂಧ್ರ ಪ್ರದೇಶ ಸರ್ಕಾರದ ಸಲಹೆಗಾರ ಮತ್ತು ಮಾಜಿ ಮುಖ್ಯ ಕಾರ್ಯದರ್ಶಿ ಅಜೇಯ ಕಲ್ಲಮ್ ಈ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಅಕ್ಟೋಬರ್ 6ರಂದು ಜಗನ್ ಮೋಹನ್ ರೆಡ್ಡಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದರು. ಅಂದೇ ಈ ಪತ್ರವನ್ನು ಬರೆಯಲಾಗಿದೆ.

"ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವನ್ನು ಅಸ್ಥಿರಗೊಳಿಸಲು ಮತ್ತು ಕಿತ್ತೆಸೆಯಲು ಹೈಕೋರ್ಟ್ನಂತಹ ಸಂಸ್ಥೆಯನ್ನು ಬಳಸಿಕೊಳ್ಳಲಾಗುತ್ತಿದೆ" ಎಂದು ಪತ್ರದಲ್ಲಿ ಮುಖ್ಯಮಂತ್ರಿಗಳು ವಿವರಿಸಿದ್ದಾರೆ.
ವಿರೋಧ ಪಕ್ಷಗಳಿಗೆ ಮಹತ್ವದ್ದು ಎನಿಸುವ ಪ್ರಕರಣಗಳನ್ನು ಹೈಕೋರ್ಟ್ನಲ್ಲಿ ಹೇಗೆ ಹಂಚಿಕೆ ಮಾಡಲಾಗುತ್ತಿದೆ? ಎಂದು ಪತ್ರದಲ್ಲಿ ಜಗನ್ ಮೋಹನ್ ರೆಡ್ಡಿ ವಿವರಿಸಿದ್ದಾರೆ. ಮುಖ್ಯಮಂತ್ರಿಗಳೇ ಬರೆದಿರುವ ಪತ್ರ ಆಂಧ್ರ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.
ನ್ಯಾಯಮೂರ್ತಿ ಎನ್. ವಿ. ರಮಣ ಅವರು ಟಿಡಿಪಿ ಮತ್ತು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಸಹಾಕಾರ ನೀಡುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಜಗನ್ ಮೋಹನ್ ರೆಡ್ಡಿ ಆರೋಪಿಸಿದ್ದಾರೆ.












Click it and Unblock the Notifications