ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷಿ ಕಾಯ್ದೆ ರದ್ದು: ರಾಹುಲ್ ಗಾಂಧಿ
ಅಮೃತಸರ್, ಅಕ್ಟೋಬರ್.04: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದರೆ ವಿವಾದಾತ್ಮಕ ಕೃಷಿ ಸಂಬಂಧಿತ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ವಯನಾಡು ಸಂಸದ ರಾಹುಲ್ ಗಾಂಧಿ ಪ್ರಮಾಣ ಮಾಡಿದ್ದಾರೆ.
ಪಂಜಾಬ್ ನಲ್ಲಿ 'ಖೇಟಿ ಬಚಾವೋ ಯಾತ್ರೆ' ನಡೆಸಿದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರೈತರು ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆ, ಸಂಗ್ರಹಣೆ ಮತ್ತು ಸಗಟು ವ್ಯಾಪಾರವು ದೇಶದ ಮೂರು ಆಧಾರ ಸ್ತಂಭಗಳಾಗಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ವ್ಯವಸ್ಥೆಯನ್ನೇ ಹಾಳುಗೆಡವಲು ಹೊರಟಿದ್ದಾರೆ ಎಂದು ರಾಹುಲ್ ಗಾಂಧಿ ದೂಷಿಸಿದ್ದಾರೆ.
ಪಂಜಾಬ್: ಕೃಷಿ ಕಾಯ್ದೆ ವಿರುದ್ಧ ರಾಹುಲ್ ಗಾಂಧಿ ಹೋರಾಟ ಶುರು
ಬಿಜೆಪಿ ಸರ್ಕಾರದ ಮುಖ್ಯ ಉದ್ದೇಶವೇ ಕನಿಷ್ಠ ಬೆಂಬಲ ಬೆಲೆ ಮತ್ತು ಆಹಾರ ಸಂಗ್ರಹಣೆ ವ್ಯವಸ್ಥೆಯನ್ನೇ ಹಾಳು ಮಾಡುವುದಾಗಿದೆ. ಸರ್ಕಾರದ ಉದ್ದೇಶ ಈಡೇರುವುದಕ್ಕೆ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.
ಕಪ್ಪು ಕಾಯ್ದೆ ರದ್ದುಗೊಳಿಸುವವರೆಗೂ ಹೋರಾಟ
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಕೂಡಲೇ ಈಗಿನ ಬಿಜೆಪಿ ಸರ್ಕಾರವು ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆಗಳನ್ನು ರದ್ದುಗೊಳಿಸಲಾಗುವುದು ಎಂದು ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ. ಅಲ್ಲದೇ ನರೇಂದ್ರ ಮೋದಿ ಸರ್ಕಾರವು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಕಪ್ಪು ಕಾಯ್ದೆ ಎಂದಿರುವ ಅವರು, ಕೇಂದ್ರ ಸರ್ಕಾರವು ಈ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಂಸತ್ ಉಭಯ ಸದನಗಳಲ್ಲಿ ಚರ್ಚೆಗೇಕೆ ಹಿಂದೇಟು?
ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೇ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವ ಅನಿವಾರ್ಯತೆ ಏನಿತ್ತು ಎಂದು ಕೇಂದ್ರ ಸರ್ಕಾರವನ್ನು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ರೈತರ ಹಿತದೃಷ್ಟಿಯಿಂದಲೇ ಕಾಯ್ದೆ ಜಾರಿಗೊಳಿಸುವುದಾಗಿದ್ದಲ್ಲಿ, ಸಂಸತ್ ಉಭಯ ಸದನಗಳಲ್ಲಿ ಈ ಕಾಯ್ದೆ ಜಾರಿಗೂ ಮೊದಲು ಚರ್ಚೆಗೆ ಏಕೆ ಅವಕಾಶ ನೀಡಲಿಲ್ಲ ಎಂದು ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.
ರೈತರಿಗೆ ಹಿತವಾಗಿದ್ದಲ್ಲಿ ಪ್ರತಿಭಟನೆ ಏಕೆ ಮಾಡುತ್ತಿದ್ದರು?
ಪಂಜಾಬ್ ಸೇರಿದಂತೆ ದೇಶಾದ್ಯಂತ ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ ರೈತಾಪಿ ವರ್ಗದ ಜನರಿಂದಲೇ ಹೋರಾಟ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಮೂರು ಕೃಷಿ ಸಂಬಂಧಿತ ಕಾಯ್ದೆಗಳಿಂದ ರೈತರಿಗೆ ಅನುಕೂಲವಾಗುವುದಿದ್ದರೆ, ಅವರಿಗೆ ಖುಷಿ ಕೊಡುವ ವಿಚಾರವೇ ಆಗಿದ್ದರೆ ದೇಶಾದ್ಯಂತ ಏಕೆ ಪ್ರತಿಭಟನೆ ಮಾಡುತ್ತಿದ್ದರು ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.
|
ಸಂಸದ ರಾಹುಲ್ ಗಾಂಧಿ ಟ್ರ್ಯಾಕ್ಟರ್ ರ್ಯಾಲಿ
ಪಂಜಾಬ್ ನಲ್ಲಿ 'ಖೇಟಿ ಬಚಾವೋ ಯಾತ್ರಾ' ಅಡಿ ಸಂಸದ ರಾಹುಲ್ ಗಾಂಧಿ ಅವರು, ಮೂರು ದಿನಗಳ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದಾರೆ. ಚಂಡೀಘರ್ ನಿಂದ 170 ಕಿಲೋ ಮೀಟರ್ ದೂರದಲ್ಲಿರುವ ಮೋಗಾ ಜಿಲ್ಲೆಯ ಬಧ್ನಿ ಕಾಲನ್ ನಲ್ಲಿ ರ್ಯಾಲಿ ನಡೆಸಿದರು. ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮತ್ತು ಕಾಂಗ್ರೆಸ್ ಮುಖ್ಯಸ್ಥ ಸುನೀಲ್ ಜಖರ್ ಹಾಗೂ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಬಧ್ನಿ ಕಲನ್ ನಿಂದ ಜತ್ಪುರ್ ವರೆಗೂ ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು.
ಕೇಂದ್ರವು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ಯಾವುವು?
ಸಂಸತ್ ನಲ್ಲಿ ತೀವ್ರ ಸದ್ದು ಗದ್ದಲಕ್ಕೆ ಕಾರಣವಾದ ಕೃಷಿ ಸಂಬಂಧಿತ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳೆದ ಸಪ್ಟೆಂಬರ್.27ರಂದು ಅನುಮೋದನೆ ನೀಡಿದ್ದರು. ಇದರಿಂದ ಮೂರು ಮಸೂದೆಗಳು ಇದೀಗ ಕಾಯ್ದೆಗಳಾಗಿ ಬದಲಾಗಿವೆ. ಈ ಮೂರು ಕೃಷಿ ಸಂಬಂಧಿತ ಕಾಯ್ದೆಗಳು ಯಾವುವು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ
2. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ
3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ