ಕೃಷಿ ಕಾಯ್ದೆ ವಿರೋಧಿಸಿ ರೈಲ್ವೆ ಹಳಿ ಮೇಲೆ ಕುಳಿತ ರೈತರು
ಅಮೃತಸರ್, ಅಕ್ಟೋಬರ್.02: ಪಂಜಾಬ್ ಮತ್ತು ಹರಿಯಾಣದಲ್ಲಿ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಕೇಂದ್ರ ಸರ್ಕಾರದ ವಿರುದ್ಧ ರೈಲ್ ರೋಖೋ ನಡೆಸುತ್ತಿರುವ ರೈತರು ಧಿಕ್ಕಾರ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಅಮೃತಸರ್ ನ ದೇವಿದಾಸ್ ಪುರ್ ನಲ್ಲಿ ರೈಲ್ವೆ ಹಳಿಗಳ ಮೇಲೆ ಕುಳಿತಿರುವ ಪ್ರತಿಭಟನಾಕಾರರು ಕೃಷಿ ಸಂಬಂಧಿತ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವಂತೆ ಆಗ್ರಹಿಸುತ್ತಿದ್ದಾರೆ. ಅಕ್ಟೋಬರ್.05ರವರೆಗೂ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಭಾರತೀಯ ಕಿಸಾನ್ ಒಕ್ಕೂಟ ಮತ್ತು ಜಮ್ಹುರಿ ಕಿಸಾನ್ ಸಭಾ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಗುರುವಾರವಷ್ಟೇ ಪಂಜಾಬ್ ಜಲಂಧರ್ ನ ಫಿಲೌರ್ ನಲ್ಲಿ ರೈಲ್ ರೋಖೋ ಚಳುವಳಿ ನಡೆಸಲಾಗಿತ್ತು. ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಕೃಷಿ ಸಂಬಂಧಿತ ಮಸೂದೆಗಳನ್ನು ವಾಪಸ್ ಪಡೆದುಕೊಳ್ಳುವವರೆಗೂ ರೈತರ ಹೋರಾಟ ಮುಂದುವರಿಯಲಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ಅಮ್ರೀಕ್ ಸಿಂಗ್ ಹೇಳಿದ್ದಾರೆ.

ವಿವಾದಿತ ಮಸೂದೆಗೆ ರಾಷ್ಟ್ರಪತಿ ಅಂಕಿತ:
ಸಂಸತ್ ನಲ್ಲಿ ತೀವ್ರ ಸದ್ದು ಗದ್ದಲಕ್ಕೆ ಕಾರಣವಾದ ಕೃಷಿ ಸಂಬಂಧಿತ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳೆದ ಸಪ್ಟೆಂಬರ್.27ರಂದು ಅನುಮೋದನೆ ನೀಡಿದ್ದರು. ಇದರಿಂದ ಮೂರು ಮಸೂದೆಗಳು ಇದೀಗ ಕಾಯ್ದೆಗಳಾಗಿ ಬದಲಾಗಿವೆ. ಈ ಮೂರು ಕೃಷಿ ಸಂಬಂಧಿತ ಕಾಯ್ದೆಗಳು ಯಾವುವು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ
2. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ
3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ












Click it and Unblock the Notifications