ಕೇಂದ್ರ ಸರ್ಕಾರಕ್ಕೆ 3,000 ಕೋಟಿ ಪರಿಹಾರ ಕೋರಿದ ಪಂಜಾಬ್ ಸಿಎಂ
ಅಮೃತಸರ್, ಏಪ್ರಿಲ್.21: ಜಾಗತಿಕ ಸಾಂಕ್ರಾಮಿಕ ಪಿಡುಗು ಎಂದು ಘೋಷಿಸಿರುವ ಕೊರೊನಾ ವೈರಸ್ ನಿಯಂತ್ರಿಸಲು ಭಾರತ ಲಾಕ್ ಡೌನ್ ಮಾಡವಾಗಿದೆ. ಇದರಿಂದ ಆಗಿರುವ ನಷ್ಟ ಭರಿಸಲು ಕೇಂದ್ರ ಸರ್ಕಾರವು 3,000 ಕೋಟಿ ರೂಪಾಯಿ ನೀಡುವಂತೆ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಪತ್ರ ಬರೆದಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ಆಗಿರುವ ನಷ್ಟವನ್ನು ತುಂಬಿಕೊಳ್ಳುವುದಕ್ಕಾಗಿ ಆಂತರಿಕ ಪರಿಹಾರವಾಗಿ 3,000 ಕೋಟಿ ರೂಪಾಯಿಯನ್ನು ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾರಿಗೆ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಇದರ ಜೊತೆಗೆ ಬಾಕಿ ಉಳಿದಿರುವ ಸರಕು ಮತ್ತು ಸೇವಾ ತೆರಿಗೆ 4,400 ಕೋಟಿ ಹಣವನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಭಾರತ ಲಾಕ್ ಡೌನ್ ನಿಂದಾಗಿ ರಾಜ್ಯದ ಆರ್ಥಿಕ ವ್ಯವಸ್ಥೆಯ ಮೇಲೆ ಗಣನೀಯ ಪರಿಣಾಮ ಬೀರಲಿದ್ದು ಅದನ್ನು ನಿಭಾಯಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹಣಕಾಸಿನ ಪರಿಹಾರವನ್ನು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ ಸಂಪೂರ್ಣ ಬೆಂಬಲ:
ಕೊರೊನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ಭಾರತ ಲಾಕ್ ಡೌನ್ ಘೋಷಿಸಲಾಗಿದೆ. ಕೇಂದ್ರ ಸರ್ಕಾರದ ನಡೆಗೆ ಪಂಜಾಬ್ ಸರ್ಕಾರದಿಂದ ಸಂಪೂರ್ಣ ಬೆಂಬಲ ನೀಡಲಾಗುತ್ತದೆ. ಕೇಂದ್ರ ನೀಡುವ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ನೋಡಿಕೊಳ್ಳುವ ಹೊಣೆ ನಮ್ಮದು. ಆದರೆ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆಯನ್ನು ಹೊರಿಸದೇ ಕೇಂದ್ರ ಸರ್ಕಾರವು ಕೂಡಾ ಆರ್ಥಿಕ ಪರಿಹಾರವನ್ನು ನೀಡುವಂತೆ ಪತ್ರದಲ್ಲಿ ಅಮರೀಂದರ್ ಸಿಂಗ್ ಉಲ್ಲೇಖಿಸಿದ್ದಾರೆ.












Click it and Unblock the Notifications