"ಪಂಜಾಬ್ ನಲ್ಲಿ ಒಂದೇ ಒಂದು ರೈಲ್ವೆ ಸಂಚಾರಕ್ಕೂ ಬಿಡುವುದಿಲ್ಲ"
ಅಮೃತಸರ್, ಅಕ್ಟೋಬರ್.01: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ ಪಂಜಾಬ್ ನಲ್ಲಿ ರೈಲ್ ರೋಖೋ ಚಳುವಳಿ ಮುಂದುವರಿದಿದೆ. ಭಾರತೀಯ ಕಿಸಾನ್ ಒಕ್ಕೂಟ ಮತ್ತು ಜಮ್ಹುರಿ ಕಿಸಾನ್ ಸಭಾ ಸಂಘಟನೆಗಳು ಹೋರಾಟ ನಡೆಸುತ್ತಿವೆ.
ಪಂಜಾಬ್ ಜಲಂಧರ್ ನಲ್ಲಿರುವ ಫಿಲೌರ್ ನಲ್ಲಿ ರೈಲ್ ರೋಖೋ ಚಳುವಳಿಯನ್ನು ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಕೃಷಿ ಸಂಬಂಧಿತ ಮಸೂದೆಗಳನ್ನು ವಾಪಸ್ ಪಡೆದುಕೊಳ್ಳುವವರೆಗೂ ರೈತರ ಹೋರಾಟ ಮುಂದುವರಿಯಲಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ಅಮ್ರೀಕ್ ಸಿಂಗ್ ಹೇಳಿದ್ದಾರೆ.
ಕೃಷಿ ಕಾಯ್ದೆ ವಿರುದ್ಧ ಹರಿಯಾಣ-ಪಂಜಾಬ್ ನಲ್ಲಿ ಹೋರಾಟ
"ಕೇಂದ್ರ ಸರ್ಕಾರಕ್ಕೆ ನಾವು ಎಚ್ಚರಿಕೆ ಸಂದೇಶವನ್ನು ರವಾನಿಸುತ್ತಿದ್ದೇವೆ. ಕೃಷಿ ಮಸೂದೆಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಪಂಜಾಬ್ ಪ್ರಜೆಗಳು ಅವರಿಗೆ ಮತವನ್ನೇ ಹಾಕುವುದಿಲ್ಲ. ರೈತ ವಿರೋಧಿ ಕಾಯ್ದೆ ವಾಪಸ್ ತೆಗೆದುಕೊಳ್ಳುವವರೆಗೂ ನಾವು ಹೋರಾಟ ನಡೆಸುತ್ತಲೇ ಇರುತ್ತೇವೆ" ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ಅಮ್ರೀಕ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಪಂಜಾಬ್ ನಲ್ಲಿ ಒಂದು ರೈಲು ಸಂಚಾರಕ್ಕೂ ಬಿಡಲ್ಲ:
ಕೃಷಿ ಮಸೂದೆಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಕೇಂದ್ರ ಸರ್ಕಾರದ ವಿರುದ್ಧ ನಮ್ಮ ಹೋರಾಟ ಹೀಗೆ ಮುಂದುವರಿಯಲಿದ್ದು, ನಾವು ರೈಲಿನ ಹಳಿಗಳ ಮೇಲೆಯೇ ಕುಳಿತುಕೊಳ್ಳುತ್ತೇವೆ. ಪಂಜಾಬ್ ರಾಜ್ಯಾದ್ಯಂತ ಒಂದೇ ಒಂದು ರೈಲು ಸಂಚಾರಕ್ಕೂ ಅನುಮತಿ ನೀಡುವುದಿಲ್ಲ ಎಂದು ಜಮ್ಹುರಿ ಕಿಸಾನ್ ಸಭಾ ಸದಸ್ಯ ಜಸ್ವಿಂದರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಇನ್ನೊಂದು ಕಡೆ ಅಮೃತಸರ್ ನಲ್ಲಿರುವ ದೇವಿದಾಸ್ ಪುರ್ ಗ್ರಾಮದಲ್ಲಿ ಕಿಸಾನ್ ಮಜದೂರ್ ಸಂಘರ್ಷ ಸಮಿತಿ ನಡೆಸುತ್ತಿರುವ 'ರೈಲ್ ರುಖೋ'(ರೈಲು ತಡೆ) ಪ್ರತಿಭಟನೆ ಕೂಡಾ ಮುಂದುವರಿದಿದೆ. ರೈಲು ಹಳಿಗಳ ಮೇಲೆ ಕಪ್ಪು ಬಟ್ಟೆ ಧರಿಸಿದ ರೈತರು ಹೋರಾಟ ಮುಂದುವರಿಸಿದ್ದಾರೆ.
ವಿವಾದಿತ ಮಸೂದೆಗೆ ರಾಷ್ಟ್ರಪತಿ ಅಂಕಿತ:
ಸಂಸತ್ ನಲ್ಲಿ ತೀವ್ರ ಸದ್ದು ಗದ್ದಲಕ್ಕೆ ಕಾರಣವಾದ ಕೃಷಿ ಸಂಬಂಧಿತ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳೆದ ಸಪ್ಟೆಂಬರ್.27ರಂದು ಅನುಮೋದನೆ ನೀಡಿದ್ದರು. ಇದರಿಂದ ಮೂರು ಮಸೂದೆಗಳು ಇದೀಗ ಕಾಯ್ದೆಗಳಾಗಿ ಬದಲಾಗಿವೆ. ಈ ಮೂರು ಕೃಷಿ ಸಂಬಂಧಿತ ಕಾಯ್ದೆಗಳು ಯಾವುವು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ
2. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ
3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ