ಪಂಜಾಬ್ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧುರಿಗೆ ಕೊರೊನಾವೈರಸ್
ಅಮೃತಸರ್, ಅಕ್ಟೋಬರ್.06: ಪಂಜಾಬ್ ನಲ್ಲೂ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಮುಂದುವರಿದಿದೆ. ರಾಜ್ಯದ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧುರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧುರಿಗೆ ಬೆಳಗ್ಗೆಯಿಂದ ಕೊರೊನಾವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಹೋಮ್ ಐಸೋಲೇಷನ್ ನಲ್ಲಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಜ್ವರ ಹಾಗೂ ನೆಗಡಿಯ ಲಕ್ಷಣಗಳಿರುವ ಬಗ್ಗೆ ವರದಿಯಾಗಿದೆ.
ಪಂಜಾಬ್ ನಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಉಗ್ರ ಹೋರಾಟ ನಡೆಸಲಾಗುತ್ತಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡಾ ರೈತರ ಪ್ರತಿಭಟನೆಗೆ ಕೈ ಜೋಡಿಸಿದ್ದರು. ಸೋಮವಾರ ನಡೆದ ಬೃಹತ್ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಜೊತೆಗೆ ಇದೇ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧು ವೇದಿಕೆ ಹಂಚಿಕೊಂಡಿದ್ದರು.

ಪಂಜಾಬ್ ನಲ್ಲಿ ಕೊರೊನಾವೈರಸ್ ಅಟ್ಟಹಾಸ:
ಪಂಜಾಬ್ ನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 119186ಕ್ಕೆ ಏರಿಕೆಯಾಗಿದ್ದು, ಮಹಾಮಾರಿಗೆ ಈವರೆಗೂ 3641 ಮಂದಿ ಪ್ರಾಣ ಬಿಟ್ಟಿದ್ದಾರೆ. 102648 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ರಾಜ್ಯದಲ್ಲಿ 12897 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.












Click it and Unblock the Notifications