ಪಂಜಾಬ್: ಕೃಷಿ ಕಾಯ್ದೆ ವಿರುದ್ಧ ರಾಹುಲ್ ಗಾಂಧಿ ಹೋರಾಟ ಶುರು
ಅಮೃತಸರ್, ಅಕ್ಟೋಬರ್.04: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ ಪಂಜಾಬ್ ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೂರು ದಿನಗಳ ಪ್ರತಿಭಟನೆ ನಡೆಸುವುದಕ್ಕೆ ಮುಂದಾಗಿದ್ದಾರೆ.
ಪಂಜಾಬ್ ನಲ್ಲಿ 'ಖೇಟಿ ಬಚಾವೋ ಯಾತ್ರಾ' ಅಡಿ ರೈತರ ಜೊತೆಗೆ ಸಂಸದ ರಾಹುಲ್ ಗಾಂಧಿ ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ. ಚಂಡೀಘರ್ ನಿಂದ 170 ಕಿಲೋ ಮೀಟರ್ ದೂರದಲ್ಲಿರುವ ಮೋಗಾ ಜಿಲ್ಲೆಯ ಬಧ್ನಿ ಕಾಲನ್ ನಲ್ಲಿ ರ್ಯಾಲಿ ಆರಂಭಿಸಲಿದ್ದಾರೆ.
ಮೂರು ದಿನಗಳ ಪಂಜಾಬ್ ಯಾತ್ರೆಯಲ್ಲಿ ಸಂಸದ ರಾಹುಲ್ ಗಾಂಧಿ ಅವರು, ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮತ್ತು ಕಾಂಗ್ರೆಸ್ ಮುಖ್ಯಸ್ಥ ಸುನೀಲ್ ಜಖರ್ ಹಾಗೂ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಬಧ್ನಿ ಕಲನ್ ನಿಂದ ಜತ್ಪುರ್ ವರೆಗೂ ಟ್ರ್ಯಾಕ್ಟರ್ ರ್ಯಾಲಿ ನಡೆಸಲಿದ್ದಾರೆ. ಲೂಧಿಯಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ.

ಕೃಷಿ ಕಾಯ್ದೆ ವಿರುದ್ಧ ನಿರಂತರ ಹೋರಾಟ:
ಕೇಂದ್ರ ಸರ್ಕಾರದ ವಿರುದ್ಧ ರೈಲ್ ರೋಖೋ ನಡೆಸುತ್ತಿರುವ ರೈತರು ಧಿಕ್ಕಾರ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಮೃತಸರ್ ನ ದೇವಿದಾಸ್ ಪುರ್ ನಲ್ಲಿ ರೈಲ್ವೆ ಹಳಿಗಳ ಮೇಲೆ ಕುಳಿತಿರುವ ಪ್ರತಿಭಟನಾಕಾರರು ಕೃಷಿ ಸಂಬಂಧಿತ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವಂತೆ ಆಗ್ರಹಿಸುತ್ತಿದ್ದಾರೆ. ಅಕ್ಟೋಬರ್.05ರವರೆಗೂ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಕಿಸಾನ್ ಒಕ್ಕೂಟ ಮತ್ತು ಜಮ್ಹುರಿ ಕಿಸಾನ್ ಸಭಾ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ವಿವಾದಿತ ಮಸೂದೆಗೆ ರಾಷ್ಟ್ರಪತಿ ಅಂಕಿತ:
ಸಂಸತ್ ನಲ್ಲಿ ತೀವ್ರ ಸದ್ದು ಗದ್ದಲಕ್ಕೆ ಕಾರಣವಾದ ಕೃಷಿ ಸಂಬಂಧಿತ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳೆದ ಸಪ್ಟೆಂಬರ್.27ರಂದು ಅನುಮೋದನೆ ನೀಡಿದ್ದರು. ಇದರಿಂದ ಮೂರು ಮಸೂದೆಗಳು ಇದೀಗ ಕಾಯ್ದೆಗಳಾಗಿ ಬದಲಾಗಿವೆ. ಈ ಮೂರು ಕೃಷಿ ಸಂಬಂಧಿತ ಕಾಯ್ದೆಗಳು ಯಾವುವು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ
2. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ
3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ












Click it and Unblock the Notifications