ಪಂಜಾಬ್ ನಲ್ಲಿ 6ನೇ ದಿನಕ್ಕೆ ಕಾಲಿಟ್ಟ 'ರೈಲ್ ರೋಕೋ' ಆಂದೋಲನ
ಅಮೃತಸರ್, ಸಪ್ಟೆಂಬರ್.29: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆ ವಿರೋಧಿಸಿ ಪಂಜಾಬ್ ನಲ್ಲಿ ನಡೆಯುತ್ತಿರುವ ರೈತರ ಹೋರಾಟ 6ನೇ ದಿನಕ್ಕೆ ಕಾಲಿಟ್ಟಿದೆ. ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯಬೇಕು ಎನ್ನುವ ಕೂಗು ಜೋರಾಗುತ್ತಿದೆ.
ಅಮೃತಸರ್ ನಲ್ಲಿರುವ ದೇವಿದಾಸ್ ಪುರ್ ಗ್ರಾಮದಲ್ಲಿ ಕಿಸಾನ್ ಮಜದೂರ್ ಸಂಘರ್ಷ ಸಮಿತಿ ನಡೆಸುತ್ತಿರುವ 'ರೈಲ್ ರುಖೋ'(ರೈಲು ತಡೆ) ಪ್ರತಿಭಟನೆಯು 6ನೇ ದಿನಕ್ಕೆ ಕಾಲಿಟ್ಟಿದೆ. ರೈಲು ಹಳಿಗಳ ಮೇಲೆ ಕಪ್ಪು ಬಟ್ಟೆ ಧರಿಸಿದ ರೈತರು ಹೋರಾಟ ಮುಂದುವರಿಸಿದ್ದಾರೆ.
NDA ಮೈತ್ರಿಕೂಟದ ಬಗ್ಗೆ So 'SAD' ಎಂದ ಸುಖ್ಬೀರ್ ಬಾದಲ್!
ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ ಅಕ್ಟೋಬರ್.01ರಂದು ದೇಶಾದ್ಯಂತ ಕಿಸಾನ್ ಮಜದೂರ್ ಸಂಘರ್ಷ ಸಮಿತಿ ಉಗ್ರ ಹೋರಾಟ ನಡೆಸುವುದಾಗಿ ಸಂಘಟನೆಯ ಕಾರ್ಯದರ್ಶಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.
ವಿವಾದಿತ ಮಸೂದೆಗೆ ರಾಷ್ಟ್ರಪತಿ ಅಂಕಿತ:
ಸಂಸತ್ ನಲ್ಲಿ ತೀವ್ರ ಸದ್ದು ಗದ್ದಲಕ್ಕೆ ಕಾರಣವಾದ ಕೃಷಿ ಸಂಬಂಧಿತ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಅನುಮೋದನೆ ನೀಡಿದ್ದಾರೆ. ಇದರಿಂದ ಮೂರು ಮಸೂದೆಗಳು ಇದೀಗ ಕಾಯ್ದೆಗಳಾಗಿ ಬದಲಾಗಿವೆ. ಸಂಸತ್ ನಲ್ಲಿ ಅಂಗೀಕಾರಗೊಂಡ ಕೃಷಿ ಸಂಬಂಧಿತ ಮಸೂದೆಗಳಿಗೆ ಅಂಕಿತ ಹಾಕದಂತೆ ಕಾಂಗ್ರೆಸ್ ಮತ್ತು ಶಿರೋಮಣಿ ಆಕಾಲಿ ದಳ ಸೇರಿದಂತೆ ವಿರೋಧ ಪಕ್ಷದ ನಾಯಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮನವಿ ಮಾಡಿಕೊಂಡಿದ್ದರು.
ರಾಷ್ಟ್ರಪತಿ ಅಂಕಿತ ಹಾಕಿದ ಕಾಯ್ದೆ ಯಾವುವು?:
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ. ಈ ಮೂರು ಕೃಷಿ ಸಂಬಂಧಿತ ಕಾಯ್ದೆಗಳು ಯಾವುವು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
1. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ
2. ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ
3. ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆ