ಬಾಗಲಕೋಟೆಗೊಂದು ಸಚಿವ ಸ್ಥಾನ ಕೊಡಿ : ಕಾಂಗ್ರೆಸ್ ನಾಯಕರ ಬೇಡಿಕೆ
ಬಾಗಲಕೋಟೆ, ನವೆಂಬರ್ 13 : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಜಿಲ್ಲೆಗೊಂದು ಸಚಿವ ಸ್ಥಾನ ನೀಡಿ ಎಂದು ಬೇಡಿಕೆ ಮುಂದಿಟ್ಟಿದ್ದಾರೆ.
ಬಾಗಲಕೋಟೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದ ಜಿಲ್ಲೆ. ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಅವರು ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಆದ್ದರಿಂದ, ಜಿಲ್ಲೆಗೊಂದು ಸಚಿವ ಸ್ಥಾನ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.
ಜಮಖಂಡಿ ಕ್ಷೇತ್ರದ ಉಪ ಚುನಾವಣೆಯಲ್ಲಿ 97,017 ಮತಗಳನ್ನು ಪಡೆದು ಗೆಲುವು ಸಾಧಿಸಿದ ಸಿದ್ದು ನ್ಯಾಮಗೌಡ ಪುತ್ರ ಆನಂದ್ ನ್ಯಾಮಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ 8 ಸಚಿವ ಸ್ಥಾನಗಳಿ ಖಾಲಿ ಇವೆ. ಇವುಗಳ ಪೈಕಿ 6 ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ, 2 ಸ್ಥಾನಗಳು ಜೆಡಿಎಸ್ ಪಕ್ಷಕ್ಕೆ ಸಿಗಲಿವೆ. ನವೆಂಬರ್ 20ರ ಬಳಿಕ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ...

ಗಮನ ಸೆಳೆದ ಜಿಲ್ಲೆ ಬಾಗಲಕೋಟೆ
2018ರ ವಿಧಾನಸಭೆ ಚುನಾವಣೆ ವೇಳೆ ಬಾಗಲಕೋಟೆ ಜಿಲ್ಲೆ ರಾಜ್ಯದ ಗಮನ ಸೆಳೆದಿತ್ತು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಸೂಚನೆ ಅರಿತಿದ್ದ ಸಿದ್ದರಾಮಯ್ಯ ಬಾದಾಮಿಯಿಂದಲೂ ಕಣಕ್ಕಿಳಿಸಿದ್ದರು. ಜಿಲ್ಲೆಯ ಕಾಂಗ್ರೆಸ್ ನಾಯಕರು ಹಗಲಿರುಳು ಶ್ರಮ ವಹಿಸಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿದ್ದರು.

ಸಚಿವ ಸ್ಥಾನದ ನಿರೀಕ್ಷೆ ಇತ್ತು
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಜಿಲ್ಲೆಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಇತ್ತು. ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಅವರು ಸಂಪುಟ ಸೇರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ಅವರು ಕಾರು ಅಪಘಾತದಲ್ಲಿ ಮೃತಪಟ್ಟರು. ಈಗ ಜಮಖಂಡಿ ಉಪ ಚುನಾವಣೆಯಲ್ಲಿ ಅವರ ಪುತ್ರ ಆನಂದ್ ನ್ಯಾಮಗೌಡ ಆರಿಸಿ ಬಂದಿದ್ದಾರೆ.

ಗೆಲ್ಲಿಸಿದರೆ ಸಚಿವ ಸ್ಥಾನ
ಜಮಖಂಡಿ ಉಪ ಚುನಾವಣೆಯಲ್ಲಿ ಆನಂದ್ ನ್ಯಾಮಗೌಡ ಅವರನ್ನು ಗೆಲ್ಲಿಸಿದರೆ ಸಚಿವ ಸ್ಥಾನ ನೀಡುವುದಾಗಿ ಹೈಕಮಾಂಡ್ ನಾಯಕರು ಭರವಸೆ ನೀಡಿದ್ದರು ಎಂದು ತಿಳಿದುಬಂದಿದೆ. ಉಪ ಚುನಾವಣೆಯಲ್ಲಿ 39,480 ಮತಗಳ ಅಂತರದಿಂದ ಆನಂದ್ ನ್ಯಾಮಗೌಡ ಗೆಲುವು ಸಾಧಿಸಿದ್ದಾರೆ. ಆದ್ದರಿಂದ, ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಆನಂದ್ ನ್ಯಾಮಗೌಡಗೆ ಸಚಿವ ಸ್ಥಾನ?
ಸಿದ್ದು ನ್ಯಾಮಗೌಡಗೆ ಸಚಿವ ಸ್ಥಾನ ನೀಡಲಿಲ್ಲ. ಈಗ ಜಮಖಂಡಿ ಉಪ ಚುನಾವಣೆಯಲ್ಲಿ ಗೆದ್ದ ಆನಂದ್ ನ್ಯಾಮಗೌಡಗೆ ಸಚಿವ ಸ್ಥಾನ ನೀಡಿ ಎಂದು ಬೆಂಬಲಿಗರು ಬೇಡಿಕೆ ಮಂದಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದವರಿಗೆ ಹೈಕಮಾಂಡ್ ಸಂಪುಟ ಸೇರುವ ಅವಕಾಶ ನೀಡಲಿದೆ. ಸಿದ್ದರಾಮಯ್ಯ ಅವರು ನ್ಯಾಮಗೌಡ ಅವರ ಹೆಸರು ಶಿಫಾರಸು ಮಾಡಲಿದ್ದಾರೆಯೇ? ಕಾದು ನೋಡಬೇಕು.

ಯಾವ-ಯಾವ ನಾಯಕರು
ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ್, ಮಾಜಿ ಸಿಎಂ ಸಿದ್ದರಾಮಯ್ಯ, ಆನಂದ್ ನ್ಯಾಮಗೌಡ ಸೇರಿ ಮೂವರು ಕಾಂಗ್ರೆಸ್ ನಾಯಕರು ಜಿಲ್ಲೆಯಲ್ಲಿದ್ದಾರೆ. ಇವರಲ್ಲಿ ಆನಂದ್ ನ್ಯಾಮಗೌಡ ಅಥವ ಎಸ್.ಆರ್.ಪಾಟೀಲ್ ಸಂಪುಟ ಸೇರಬಹುದು ಎಂಬುದು ನಿರೀಕ್ಷೆಯಾಗಿದೆ.












Click it and Unblock the Notifications