ಬಾಗಲಕೋಟೆ : ಬಾಯ್ಲರ್ ಸ್ಫೋಟ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
ಬಾಗಲಕೋಟೆ, ಡಿಸೆಂಬರ್ 17 : ಬಾಗಲಕೋಟೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 6 ಕಾರ್ಮಿಕರು ಮೃತಪಟ್ಟಿದ್ದಾರೆ. ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರು ಮೃತರ ಕುಟುಂಬಕ್ಕೆ 2.50 ಲಕ್ಷ ವೈಯಕ್ತಿಕ ಪರಿಹಾರ ಘೋಷಣೆ ಮಾಡಿದ್ದಾರೆ.
ಬಿಜೆಪಿ ನಾಯಕ ಮುರುಗೇಶ್ ನಿರಾಣಿ ಒಡೆತನದ ಸಕ್ಕರೆ ಕಾರ್ಖನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಭಾನುವಾರ 6 ಕಾರ್ಮಿಕರು ಮೃತಪಟ್ಟಿದ್ದರು. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು 2.50 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಮುರುಗೇಶ್ ನಿರಾಣಿ ಅವರು ಈಗಾಗಲೇ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಭರವೆ ನೀಡಿದ್ದಾರೆ. ಸರ್ಕಾರವೂ ಮೃತರ ಕುಟುಂಬಕ್ಕೆ ಪರಿಹಾರ ನೀಡಲಿ ಎಂದು ಹೇಳಿದ್ದಾರೆ.

'ಸರ್ಕಾರದಿಂದ ಪರಿಹಾರ ಕೊಡಿಸುವ ಅವಕಾಶವಿದ್ದರೆ ನಾನು ಪ್ರಯತ್ನ ನಡೆಸುತ್ತೇನೆ. ಮುಖ್ಯಮಂತ್ರಿಗಳ ಜೊತೆ ಈ ಕುರಿತು ಮಾತನಾಡುತ್ತೇನೆ' ಎಂದು ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ.
ರಕ್ಷಣಾ ಕಾರ್ಯ ಸ್ಥಗಿತ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿರುವ ಕಾರ್ಖನೆಯಲ್ಲಿ ಭಾನುವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಕಟ್ಟಡ ಕುಸಿದು ಬಿದ್ದಿತ್ತು.
ಅವಶೇಷಗಳಡಿ ಕಾರ್ಮಿಕರು ಸಿಲುಕಿರಬಹುದು ಎಂಬ ಶಂಕೆ ಹಿನ್ನಲೆಯಲ್ಲಿ ಜೆಸಿಬಿ ಮೂಲಕ ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈಗ ಅವಶೇಷಗಳಡಿ ಯಾರೂ ಇಲ್ಲ ಎಂದು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.












Click it and Unblock the Notifications