ಬಾಗಲಕೋಟೆ : ಬಾಯ್ಲರ್ ಸ್ಪೋಟ, ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ
ಬಾಗಲಕೋಟೆ, ಡಿಸೆಂಬರ್ 18 : ಬಾಗಲಕೋಟೆಯಲ್ಲಿ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ಈ ದುರಂತದಲ್ಲಿ 6 ಕಾರ್ಮಿಕರು ಮೃತಪಟ್ಟಿದ್ದರು.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಸಕ್ಕರೆ ಕಾರ್ಖನೆಯಲ್ಲಿ ಭಾನುವಾರ ಬಾಯ್ಲರ್ ಸ್ಫೋಟಗೊಂಡಿತ್ತು. ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸರ್ಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು.
ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಕಾರ್ಮಿಕ ಸಚಿವ ವೆಂಕಟರಮಣಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರ ಆರೋಗ್ಯ ವಿಚಾರಿಸಿದರು. ಸರ್ಕಾರದಿಂದ ಪರಿಹಾರ ಘೋಷಣೆ ಮಾಡಲಾಗಿದೆ ಎಂದರು.

ಮೃತಪಟ್ಟ ಕಾರ್ಮಿಕರಿಗೆ ಸರ್ಕಾರದಿಂದ 5 ಲಕ್ಷ, ಕಂಪನಿ ಮಾಲೀಕರಿಂದ 5 ಲಕ್ಷ, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರು ವೈಯಕ್ತಿಕವಾಗಿ 2.50 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಕಂಪನಿ ಮಾಲೀಕರು ಭರಿಸಲಿದ್ದಾರೆ.
ಬಿಜೆಪಿ ನಾಯಕ ಮುರುಗೇಶ್ ನಿರಾಣಿ ಒಡೆನದ ಸಕ್ಕರೆ ಕಾರ್ಖನೆಯ ಬಾಯ್ಲರ್ ಸ್ಫೋಟಗೊಂಡಿತ್ತು. ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರು ಹೆಚ್ಚಿನ ಪರಿಹಾರಕ್ಕಾಗಿ ಒತ್ತಾಯಿಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನು ಬಂಧಿಸಿಲ್ಲ. ಬಾಯ್ಲರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ತನಿಖೆಗೆ ಆದೇಶ ನೀಡಲಾಗಿದೆ.












Click it and Unblock the Notifications