ಶಾಲಾ ಬಸ್ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು: ಪರಿಹಾರ ಘೋಷಿಸಿದ ಸಿಎಂ
ಬಾಗಲಕೋಟೆ, ಜನವರಿ 29: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕದಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇನ್ನು ಸಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ ಏನು..?
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಶಾಲಾ ಬಸ್ ಹಾಗೂ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದರು. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಮೃತ ದುರ್ದೈವಿಗಳು.

ಮೃತ ವಿದ್ಯಾರ್ಥಿಗಳು ಶ್ರೀವರ್ಧಮಾನ ಮಾಹವೀರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶಿಕ್ಷಣ ಸಂಸ್ಥೆಯಲ್ಲಿ ನಿನ್ನೆ(ಜನವರಿ 28) ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು. ಮೃತ ವಿದ್ಯಾರ್ಥಿಗಳು ಸೇರಿದಂತೆ ಇತರ ವಿದ್ಯಾರ್ಥಿಗಳು ವಾರ್ಷಿಕೋತ್ಸವ ಸಂಭ್ರಮ ಮುಗಿಸಿ ಗ್ರಾಮಕ್ಕೆ ತೆರಳುತ್ತಿದ್ದರು.
ಮಧ್ಯರಾತ್ರಿ 12 ಗಂಟೆಗೆ ವೇಳೆಗೆ ಅಲಗೂರು ಗ್ರಾಮದ ಬಳಿ ಶಾಲಾ ಬಸ್ ಹಾಗೂ ಹಾಗೂ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟಕ್ಕೂ ಅಧಿಕ ಮಕ್ಕಳು ಗಂಭೀರ ಗಾಯಗೊಂಡಿದ್ದರು. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಶಾಲಾ ಬಸ್ ಚಾಲಕ ಪೈಪೋಟಿಯಲ್ಲಿ ಚಲಾಯಿಸಲು ಹೋಗಿ ಅಪಘಾತ ಸಂಭವಿಸಿದೆ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications