ಜಿಲ್ಲಾ ಉಸ್ತುವಾರಿಗಳ ನೇಮಕ : ಶನಿವಾರ ಮಹತ್ವದ ಸಭೆ
ಬಾಗಲಕೋಟೆ, ಜುಲೈ 20 : ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ, ಜಿಲ್ಲಾ ಉಸ್ತುವಾರಿ ಸಚಿವರು ನೇಮಕದ ಬಗ್ಗೆ ಶನಿವಾರ ಕರ್ನಾಟಕ ಕಾಂಗ್ರೆಸ್ ತೀರ್ಮಾನ ಕೈಗೊಳ್ಳಲಿದೆ. ಸಮನ್ವಯ ಸಮಿತಿ ಸಭೆಯೂ ಶನಿವಾರ ನಡೆಯಲಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಜಮಖಂಡಿಯಲ್ಲಿ ಈ ಕುರಿತು ಶುಕ್ರವಾರ ಮಾತನಾಡಿದರು. 'ಶನಿವಾರ ಬೆಂಗಳೂರಿನಲ್ಲಿ ಕೆ.ಸಿ.ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ಪಕ್ಷದ ನಾಯಕರ ಸಭೆ ನಡೆಯಲಿದೆ. ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗುತ್ತದೆ' ಎಂದರು.
ರಾಹುಲ್ ಗಾಂಧಿಯೇ ಮುಂದಿನ ಪ್ರಧಾನ ಮಂತ್ರಿ: ಈಶ್ವರ ಖಂಡ್ರೆ
'ಸಂಪುಟ ವಿಸ್ತರಣೆ, ನಿಗಮ-ಮಂಡಳಿ ನೇಮಕದ ಬಗ್ಗೆಯೂ ಚರ್ಚೆ ನಡೆಯಲಿದೆ. ಶನಿವಾರ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆಯೂ ನಡೆಯಲಿದೆ' ಎಂದು ಈಶ್ವರ ಖಂಡ್ರೆ ತಿಳಿಸಿದರು.
ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿದ ಕೆಪಿಸಿಸಿ ಅಧ್ಯಕ್ಷರು
'ಸಮ್ಮಿಶ್ರ ಸರ್ಕಾರದ ಮೈತ್ರಿ ಧರ್ಮವನ್ನು ನಾನು ಅನುಸರಿಸುತ್ತೇವೆ. ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ. ಸೀಟುಗಳ ಹಂಚಿಕೆ ಬಗ್ಗೆ ಹಿರಿಯ ನಾಯಕರು ತೀರ್ಮಾನವನ್ನು ಕೈಗೊಳ್ಳಲಿದ್ದಾರೆ' ಎಂದರು.
'ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ಬೇಡಿಕೆ ಇಡುವುದಿಲ್ಲ. ಉತ್ತರ ಕರ್ನಾಟಕ ಭಾಗಕ್ಕೆ ಯಾವುದೇ ತಾರತಮ್ಯವನ್ನು ಮಾಡಿಲ್ಲ. ಸರ್ಕಾರ ಈ ಭಾಗದ ಅಭಿವೃದ್ಧಿಗೆ ಬದ್ಧವಾಗಿದೆ' ಎಂದು ಈಶ್ವರ ಖಂಡ್ರೆ ಹೇಳಿದರು.