ಜಮಖಂಡಿ ಚುನಾವಣಾ ಚಿತ್ರಣ ಅಂತಿಮ, ಪ್ರಚಾರಕ್ಕೆ ಘಟಾನುಘಟಿ ನಾಯಕರು!
ಬಾಗಲಕೋಟೆ, ಅಕ್ಟೋಬರ್ 23 : ಜಮಖಂಡಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ಅಂತಿಮಗೊಂಡಿದೆ. 7 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದು, ನವೆಂಬರ್ 3ರಂದು ಮತದಾನ ನಡೆಯಲಿದೆ. ಪ್ರಚಾರದ ಭರಾಟೆ ಈಗಾಗಲೇ ಆರಂಭವಾಗಿದೆ.
ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 20 ಕೊನೆಯ ದಿನವಾಗಿತ್ತು. ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, 7 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಮತ್ತು ಬಿಜೆಪಿಯ ಶ್ರೀಕಾಂತ ಕುಲಕರ್ಣಿ ಅವರ ನಡುವೆ ಪ್ರಬಲ ಪೈಪೋಟಿ ನಡೆಯುವ ನಿರೀಕ್ಷೆ ಇದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಕಾಂಗ್ರೆಸ್ ತಂತ್ರ ರೂಪಿಸಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಉಸ್ತುವಾರಿಯಲ್ಲಿ ಕಾಂಗ್ರೆಸ್ ನಾಯಕರು ಪ್ರಚಾರವನ್ನು ನಡೆಸಲಿದ್ದಾರೆ....

ಕಣದಲ್ಲಿರುವ ಅಭ್ಯರ್ಥಿಗಳು
* ಆನಂದ ನ್ಯಾಮಗೌಡ - ಕಾಂಗ್ರೆಸ್
* ಶ್ರೀಕಾಂತ್ ಕುಲಕರ್ಣಿ - ಬಿಜೆಪಿ
* ಪರುಶರಾಮ ಮಹಾರಾಜನವರ - ಪ್ರಜಾ ಪರಿವರ್ತನಾ ಪಾರ್ಟಿ
* ಯಮನಪ್ಪ ಗುಣದಾಳ - ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ
* ಆಂಬ್ರೋಸ್ ಡಿಮೆಲ್ಲೋ - ಪಕ್ಷೇತರ
* ರವಿ ಪಡಸಲಗಿ - ಪಕ್ಷೇತರ
* ಸಂಗಮೇಶ ಚಿಕ್ಕನರಗುಂದ - ಪಕ್ಷೇತರ

ನಾಯಕರ ಪ್ರಚಾರ
ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಪರವಾಗಿ ಪ್ರಚಾರ ನಡೆಸಲು ಕಾಂಗ್ರೆಸ್ ನಾಯಕರ ದಂಡೇ ಆಗಮಿಸಲಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿದ್ದು, ಈಗಾಗಲೇ ಜಮಖಂಡಿಯಲ್ಲಿ ಪ್ರಚಾರ, ಮುಖಂಡರ ಸಭೆ ನಡೆಸುತ್ತಿದ್ದಾರೆ. ಜಮಖಂಡಿಯಲ್ಲಿಯೇ ವಾಸ್ತವ್ಯ ಹೂಡಿ ಅವರು ಪ್ರಚಾರ ನಡೆಸಲಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಸಹ ಜಮಖಂಡಿಯಲ್ಲಿ ವಾಸ್ತವ್ಯ ಹೂಡಿದ್ದು, ಪ್ರಚಾರದ ಉಸ್ತುವಾರಿಗಳನ್ನು ನೋಡಿಕೊಳ್ಳುತ್ತಿದ್ದಾರೆ.

ಸಿದ್ದರಾಮಯ್ಯ ಪ್ರಚಾರ
ಮಾಜಿ ಮುಖ್ಯಮಂತ್ರಿ ಮತ್ತು ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರು ಜಮಖಂಡಿಯಲ್ಲಿ 4 ದಿನಗಳ ಕಾಲ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅಕ್ಟೋಬರ್ 26, 27, 30 ಮತ್ತು 31ರಂದು ಪ್ರಚಾರ ನಡೆಸಲಿದ್ದಾರೆ.

ಬಿಜೆಪಿ ಪ್ರಚಾರ ಹೇಗಿದೆ?
ಬಿಜೆಪಿ ಚುನಾವಣಾ ಪ್ರಚಾರದ ಹೊಣೆಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರಿಗೆ ನೀಡಲಾಗಿದೆ. ಲಿಂಗಾವಳಿ ಅವರು ಈಗಾಗಲೇ ಕ್ಷೇತ್ರದಲ್ಲಿ ಮುಖಂಡರ ಸಭೆಗಳನ್ನು ನಡೆಸುತ್ತಿದ್ದಾರೆ.

ಯಡಿಯೂರಪ್ಪ ಪ್ರಚಾರ
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅಕ್ಟೋಬರ್ 24ರಂದು, ಕೆ.ಎಸ್.ಈಶ್ವರಪ್ಪ ಅವರು ಅಕ್ಟೋಬರ್ 29 ಮತ್ತು 30ರಂದು ಜಮಖಂಡಿಯಲ್ಲಿ ಪ್ರಚಾರ ನಡೆಸಲಿದ್ದಾರೆ.
ರಾಷ್ಟ್ರೀಯ ನಾಯಕರು ಸಹ ಜಮಖಂಡಿಯಲ್ಲಿ ಪ್ರಚಾರ ನಡೆಸುವ ಸಾಧ್ಯತೆ ಇದೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಪ್ರಚಾರ ನಡೆಸಲು ಆಗಮಿಸುವ ಸಾಧ್ಯತೆ ಇದೆ.












Click it and Unblock the Notifications