ಪ್ರಚಾರದ ಕೊನೆ ದಿನ : ಬಾದಾಮಿಯಲ್ಲಿ ಅಮಿತ್ ಶಾ ರೋಡ್ ಶೋ
ಬಾಗಲಕೋಟೆ, ಮೇ 10 : ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಪ್ರಚಾರಕ್ಕೆ ಗುರುವಾರ ಕೊನೆಯ ದಿನ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ.
ಕರ್ನಾಟಕದ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿರುವ ಕ್ಷೇತ್ರ ಬಾದಾಮಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿಯ ಬಿ.ಶ್ರೀರಾಮುಲು ಅವರು ಕ್ಷೇತ್ರದಲ್ಲಿ ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಇಂದು ಅಂತಿಮ ಹಂತದ ಪ್ರಚಾರ ನಡೆಯುತ್ತಿದೆ.
In Pics:ಕರ್ನಾಟಕದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ
ಅಮಿತ್ ಶಾ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಬಾದಾಮಿ ಕ್ಷೇತ್ರದ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಬಾದಾಮಿಯಲ್ಲಿ ಬಹೃತ್ ರೋಡ್ ಶೋ ನಡೆಸುತ್ತಿದ್ದಾರೆ.
ಬಾದಾಮಿಯ ಬಸವೇಶ್ವರ ವೃತ್ತದಿಂದ ರಾಮದುರ್ಗ ಕ್ರಾಸ್ ತನಕ ರೋಡ್ ಶೋ ನಡೆಯಲಿದ್ದು, ಶ್ರೀರಾಮುಲು ಅವರ ಪರವಾಗಿ ಅಮಿತ್ ಶಾ ಮತ ಯಾಚನೆ ಮಾಡುತ್ತಿದ್ದಾರೆ. ನೂರಾರು ಕಾರ್ಯಕರ್ತರು ರೋಡ್ ಶೋನಲ್ಲಿ ಪಾಲ್ಗೊಂಡಿದ್ದಾರೆ.
ಬಾದಾಮಿ ಕ್ಷೇತ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ನಾಯಕನ್ಯಾರು?
'ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸೋಲಲಿದ್ದಾರೆ. ಶ್ರೀರಾಮುಲು ಅವರು ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ' ಎಂದು ಅಮಿತ್ ಶಾ ಹೇಳಿದರು.
ಬಾದಾಮಿ ಕ್ಷೇತ್ರದಲ್ಲಿ 1,09,758 ಪುರುಷ, 1,07,947 ಮಹಿಳೆ, 16 ಇತರೆ ಸೇರಿದಂತೆ ಒಟ್ಟು 2,17,721 ಮತದಾರರು ಇದ್ದಾರೆ.
ಕ್ಷೇತ್ರದಲ್ಲಿ ಬಿಜೆಪಿಯಿಂದ ಶ್ರೀರಾಮುಲು, ಕಾಂಗ್ರೆಸ್ನಿಂದ ಸಿದ್ದರಾಮಯ್ಯ ಮತ್ತು ಜೆಡಿಎಸ್ನಿಂದ ಹನುಮಂತ ಮಾವಿನಮರದ್ ಅವರು ಕಣದಲ್ಲಿದ್ದಾರೆ.