ಬಾಗಲಕೋಟೆಯಲ್ಲಿ ಮಳೆ ಹಾನಿಗೊಳಗಾದವರಿಗೆ ಶೀಘ್ರವೇ ಪರಿಹಾರ; ಸಚಿವ ಸಿ.ಸಿ.ಪಾಟೀಲ್
ಬಾಗಲಕೋಟೆ, ಸೆಪ್ಟೆಂಬರ್ 18: ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಪರಿಹಾರ ಒದಗಿಸುವ ಕಾರ್ಯ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನೆ ಹಾನಿ ಸಮೀಕ್ಷೆಗೆ ಇಂಜಿನಿಯರ್ಗಳ ಕೊರತೆ ಇದ್ದರೆ, ಬೇರೆ ಇಲಾಖೆಗಳ ಇಂಜಿನೀಯರ್ಗಳನ್ನು ನಿಯೋಜಿಸಿಕೊಳ್ಳಿ. ತಕ್ಷಣ ಪರಿಹಾರ ವಿತರಿಸುವ ಕಾರ್ಯ ಆಗಬೇಕು. ನಿರಂತರ ಮಳೆ ಮತ್ತು ಪ್ರವಾಹ ಸನೀವೇಶ ನೋಡಿಕೊಂಡು ಜನ ಸಂಬಂಧಿಕರ ಮನೆಗೆ ಹೋಗಿರಬಹುದು. ಮನೆಯಲ್ಲಿ ಯಾರು ವಾಸವಿಲ್ಲ ಅಂತ ತಿಳಿದು ಸಮೀಕ್ಷೆಯನ್ನು ಕೈಬಿಡಬಾರದು. ಬಡವರ ಮನೆಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮಳೆಗೆ ಹಾನಿ ಆಗಿವೆ. ಅವುಗಳನ್ನೆಲ್ಲ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು.
"ಬದಾಮಿ ತಾಲೂಕಿಗೆ ಸಂಬಂಧಿಸಿದಂತೆ 2 ಕೋಟಿಗಿಂತ ಹೆಚ್ಚಿನ ಅನುದಾನ ಈಗಾಗಲೇ ಬಿಡುಗಡೆ ಆಗಿದೆ. ಎ ಮತ್ತು ಬಿ-1, ಬಿ-2 ವರ್ಗದ ಮನೆಗಳಿಗೆ ಮೊದಲನೇ ಹಂತದ ಅನುದಾನವನ್ನು ತಕ್ಷಣ ವಿತರಿಸಬೇಕು. ಸಿ ಕೆಟಗರಿಯಲ್ಲಿರುವ ಮನೆಗಳಿಗೆ ಒಂದೇ ಬಾರಿಗೆ 50 ಸಾವಿರದಂತೆ ಬಿಡುಗಡೆ ಮಾಡಬೇಕು. ಅದೇ ರೀತಿ ಇತರೆ ತಾಲೂಕುಗಳಲ್ಲಿ ಆಗಿರುವ ಮನೆ ಹಾನಿಗೆ ಪರಿಹಾರ ವಿತರಣೆ ಆಗಬೇಕು.
"ಇದರ ಜೊತೆಗೆ ಬೆಳೆ ಹಾನಿ ಸಮೀಕ್ಷೆ ಮಾಡುವುದು ಕೂಡ ಅಷ್ಟೇ ಅವಶ್ಯವಿದೆ. ಭೂಮಿಯಲ್ಲಿ ನೀರಿನ ತೇವಾಂಶ ಕಡಿಮೆ ಆದ ತಕ್ಷಣ ಕೃಷಿ ಅಧಿಕಾರಿಗಳಿಂದ ಮುಂದಿನ 10-12 ದಿನಗಳಲ್ಲಿ ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವ ಕೆಲಸ ಆಗಬೇಕು ಎಂದರು.

ಸೆ.1ರಿಂದ ಇಲ್ಲಿಯವರೆಗೂ ಹಾನಿ ಪ್ರಮಾಣ
ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸಭೆಗೆ ಮಾಹಿತಿ ನೀಡಿದ್ದು, ಪ್ರಾಥಮಿಕ ವರದಿ ಪ್ರಕಾರ ಸೆಪ್ಟೆಂಬರ್ 1ರಿಂದ 16 ರವರೆಗೆ ಜಿಲ್ಲೆಯಲ್ಲಿ ಎ ಕೆಟಗರಿಯ 489 ಮನೆ ಹಾಗೂ ಬಿ ಮತ್ತು ಸಿ ಕೆಟಗರಿಯ 860 ಮನೆಗಳು ಅತಿವೃಷ್ಠಿಯಿಂದ ಹಾನಿಗೊಳಗಾಗಿವೆ. 326 ಹಳ್ಳಿಗಳ 18,929 ಹೇಕ್ಟೇರ್ ಪ್ರದೇಶ ಕೃಷಿ ಮತ್ತು 3,823 ಹೆಕ್ಟೇರ್ ಪ್ರದೇಶ ತೋಟಗಾರಿಕೆ ಬೆಳೆಗಳು ನಾಶವಾಗಿವೆ. 223 ಮನೆಗಳಿಗೆ ನೀರು ನುಗ್ಗಿದ್ದು, 22 ಲಕ್ಷ ಪರಿಹಾರ ಬಿಡುಗಡೆ ಆಗಿರುತ್ತದೆ. 4 ಜೀವ ಹಾನಿ ಆಗಿದ್ದು, ಈಗಾಗಲೇ ಪರಿಹಾರ ಧನ ವಿತರಿಸಲಾಗಿದೆ ಎಂದರು. ಸಭೆಗೆ ಮುನ್ನ ಮಳೆ ಮತ್ತು ಪ್ರವಾಹದಿಂದ ಜಿಲ್ಲೆಯಲ್ಲಿ ಉಂಟಾದ ಹಾನಿ ಕುರಿತಾದ ವಿಡಿಯೋ ಚಿತ್ರವನ್ನು ಸಚಿವರು ವೀಕ್ಷಿಸಿದರು.
ಸಭೆಯಲ್ಲಿ ಶಾಸಕ ವಿರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಹೆಚ್.ಪೂಜಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್ ಹಕ್ಕರಕಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಳೆಹಾನಿ ವೀಕ್ಷಿಸಿದ ಸಚಿವ ಸಿ.ಸಿ.ಪಾಟೀಲ್
ಬಾದಾಮಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾದಾಮಿ ತಾಲೂಕಿನ ಅಗಸನಕೊಪ್ಪಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂದಾಜು 50 ಹೆಕ್ಟೇರ್ ಪ್ರದೇಶ ಹಾನಿ ಆಗಿದ್ದು, ಇದರಿಂದ ಹೆಸರು, ಸೂರ್ಯಕ್ರಾಂತಿ, ಮೆಕ್ಕೆಜೋಳ, ಈರುಳ್ಳಿ ಬೆಳೆ ಹಾಳಾಗಿರುವದನ್ನು ಪರಿಶೀಲನೆ ನಡೆಸಿದರು. ಈಗಾಗಲೇ ಹೆಸರು ಬೆಳೆದ ರೈತ ಭರಮಪ್ಪ ನಾಗನ್ನವರಿಗೆ ಪರಿಹಾರ ಹಣ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಬಗ್ಗೆ ತಿಳಿಸಿದರು. ಉಳಿದ ಬೆಳೆ ಹಾನಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವ ಕಾರ್ಯ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಸಿ ವರ್ಗದ ಮನೆಗಳಿಗೆ ಶೀಘ್ರವೇ ಪರಿಹಾರ
ಕೆರೂರಿನ ವಿಜಯಲಕ್ಷ್ಮೀ ಕೆರೂರ ರೈತರ ಸರ್ವೇ ನಂಬರ್ 73ರಲ್ಲಿರುವ ಜಮೀನಿಗೆ ಭೇಟಿ ನೀಡಿ, ಹಾಳಾಗಿರುವ ಮೆಣಸಿಣಕಾಯಿ ಬೆಳೆಯನ್ನು ವೀಕ್ಷಿಸಿದರು. ನಂತರ ಚೊಳಚಗುಡ್ಡ, ಹೆಬ್ಬಾಳ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿ ಉಂಟಾದ ಮನೆ, ಬೆಳೆ ಹಾನಿಗಳನ್ನು ಪರಿಶೀಲಿಸಿದರು. ಸಿ ವರ್ಗದ ಮನೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಉಳಿದ ಕೆಟಗರಿ ಮನೆಗಳಿಗೆ ಮೊದಲ ಕಂತಿನ ಹಣ ಜಮೆಗೆ ಕ್ರಮವಹಿಸಲು ಸೂಚಿಸಿದರು.

ಪರಿಹಾರದ ಬಗ್ಗೆ ಸಿಸಿ ಪಾಟೀಲ್ ಹೇಳಿದ್ದೇನು?
ಜಿಲ್ಲೆಯಲ್ಲಿ ಉಂಟಾದ ಹಾನಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ 20 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಹಾನಿಗೊಳಗಾದ ಮನೆಗಳಿಗೆ ತಕ್ಷಣ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ. ಜಮೀನಿನಲ್ಲಿ ನೀರು ಕಡಿಮೆಯಾದ ತಕ್ಷಣ 10-12 ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು. ಮಳೆ ಹಾಗೂ ಪ್ರವಾಹದಿಂದ ಉಂಟಾದ ಬಾದಾಮಿ ತಾಲೂಕಿನ ಮಾಹಿತಿಯನ್ನು ಪಡೆದುಕೊಂಡರು. 26 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. 2 ಜಾನುವಾರುಗಳ ಜೀವ ಹಾನಿಯಾಗಿದೆ. ಪ್ರವಾಹದಿಂದ ನೀರು ನುಗ್ಗಿದ ಪರಿಣಾಮ 63 ಮನೆಗಳಲ್ಲಿರುವ ಗೃಹೋಪಯೋಗಿ ಮತ್ತು ಬಟ್ಟೆ ಬರೆ ಹಾನಿಗೆ ಒಟ್ಟು 6.30 ಲಕ್ಷ ರೂಪಾಯಿಗಳನ್ನು ಪಾವತಿಸಲಾಗಿದೆ.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲ್ಕುಮಾರ್ ಬಾವಿದಡ್ಡಿ, ತಹಶೀಲ್ದಾರ್ ಜೆ.ಬಿ.ಮಜ್ಜಗಿ, ತಾಲೂಕು ಪಂಚಾಯರ್ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಕಲಾದಗಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು











Click it and Unblock the Notifications