ಸಿದ್ದರಾಮಯ್ಯ ಅವರ ಬಾದಾಮಿ ಕ್ಷೇತ್ರದಲ್ಲಿ ಒಂದೇ ದಿನ 13 ಕೇಸ್
ಬೆಂಗಳೂರು, ಮೇ 06: ಕೊರೊನಾ ವೈರಸ್ ಮಹಾಮಾರಿ ಇದೀಗ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ದಾಳಿ ಇಟ್ಟಿದೆ. ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ಬಾದಾಮಿ ತಾಲೂಕಿನ ಧಾಣಕಶಿರೂರ್ ಗ್ರಾಮದಲ್ಲಿ ಒಂದೇ ದಿನ 13 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ಕೊರೊನಾ ವೈರಸ್ ಸಮುದಾಯದಲ್ಲಿ ಹರಡುತ್ತಿದೆಯಾ ಎಂಬ ಸಂಶಯಕ್ಕೆ ಕಾರಣವಾಗಿದೆ.
ತಮ್ಮ ಕ್ಷೇತ್ರದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆಯೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರು ತಾಲೂಕು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 13 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಚ್ಚರ ವಹಿಸುವಂತೆ ಹಾಗೂ ಸೋಂಕು ಹರಡದಂತೆ ನೋಡಿಕೊಳ್ಳಲು ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಒಬ್ಬನಿಂದ 13 ಮಂದಿಗೆ ಕೊರೊನಾ ಪಾಸಿಟಿವ್!
ಬಾಗಲಕೋಟೆ ಜಿಲ್ಲಾಧಿಕಾರಿಗಳು, ಬಾದಾಮಿ ತಹಸೀಲ್ದಾರ್, ತಾಲೂಕು ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಮಾಸ್ಕ್, ಸ್ಯಾನಿಟೈಸರ್ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅವರು ಕ್ಷೇತ್ರದ ಜನರಲ್ಲಿಯೂ ಮನವಿ ಮಾಡಿದ್ದಾರೆ.