ಬಾದಾಮಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ?
ಬಾಗಲಕೋಟೆ, ಏಪ್ರಿಲ್ 10 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಈಗಾಗಲೇ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ದೆಹಲಿಯಲ್ಲಿ ಸರಣಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸಿದ್ದರಾಮಯ್ಯ ಅವರು ಬಾದಾಮಿಯಿಂದ ಸ್ಪರ್ಧಿಸುವ ಕುರಿತು ಚರ್ಚೆ ನಡೆದಿದೆ.
ಬಾದಾಮಿ ಕ್ಷೇತ್ರ ಪರಿಚಯ : ಸಿದ್ದರಾಮಯ್ಯ ಕ್ಷೇತ್ರದಿಂದ ಸ್ಪರ್ಧಿಸುವರೇ?
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರು ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ನ ಸಾಂಪ್ರದಾಯಿಕ ಮತಗಳು, ಕುರುಬ ಸಮುದಾಯದ ಮತಗಳು ಕ್ಷೇತ್ರದಲ್ಲಿ ಹೆಚ್ಚಿವೆ. ಆದ್ದರಿಂದ, ಸಿದ್ದರಾಮಯ್ಯ ಅವರಿಗೆ ಸಹಕಾರಿಯಾಗಲಿದೆ ಎಂಬುದು ಲೆಕ್ಕಾಚಾರ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ದೇವೇಗೌಡರು!
ಬಿ.ಬಿ.ಚಿಮ್ಮನಕಟ್ಟಿ ಅವರು ಬಾದಾಮಿ ಕ್ಷೇತ್ರದ ಹಾಲಿ ಶಾಸಕರು. ಈ ಬಾರಿಯೂ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡುವ ಬಗ್ಗೆ ಈಗ ಸುದ್ದಿಗಳು ಹಬ್ಬಿದ್ದು, ಚಿಮ್ಮನಕಟ್ಟಿ ಅವರಿಗೆ ಆರೋಗ್ಯದ ನೆಪವೊಡ್ಡಿ ಟಿಕೆಟ್ ನಿರಾಕರಿಸುವ ಸಾಧ್ಯತೆ ಇದೆ.
ಬಾದಾಮಿ ಕ್ಷೇತ್ರದ ಟಿಕೆಟ್ಗೆ ಹಲವಾರು ಆಕಾಂಕ್ಷಿಗಳಿದ್ದಾರೆ. ಡಾ.ದೇವರಾಜ್ ಪಾಟೀಲ್, ಮಾಜಿ ಶಾಸಕ ಎಸ್.ಜಿ.ನಂಜಯ್ಯ ಮಠ ಸೇರಿದಂತೆ ಹಲವರು ಟಿಕೆಟ್ ಬಯಸಿದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಿದರೆ ಎಲ್ಲರೂ ಒಪ್ಪಿಗೆ ನೀಡಬೇಕಾಗುತ್ತದೆ.
ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಜೆಡಿಎಸ್ ಪಕ್ಷದ ಜಿ.ಟಿ.ದೇವೇಗೌಡ ಅವರು ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ಅವರು ಸೋಲು ಅನುಭವಿಸುತ್ತಾರೆ ಎಂದು ದೇವೇಗೌಡರು ಈಗಾಗಲೇ ಘೋಷಣೆ ಮಾಡಿದ್ದಾರೆ.