ಜಮಖಂಡಿಯಲ್ಲಿ ಕಾಂಗ್ರೆಸ್ ಗೆಲ್ಲಿಸಲು ಸಿದ್ದರಾಮಯ್ಯ ತಂತ್ರ
Recommended Video

ಬಾಗಲಕೋಟೆ, ಅಕ್ಟೋಬರ್ 10 : ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ಹೊಣೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿದೆ. ಬಾದಾಮಿ ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ ಪಕ್ಕದ ಕ್ಷೇತ್ರ 'ಕೈ' ತಪ್ಪದಂತೆ ತಂತ್ರ ರೂಪಿಸಲಿದ್ದಾರೆ.
2018ರ ಚುನಾವಣೆಯಲ್ಲಿ ಜಮಖಂಡಿ ಕ್ಷೇತ್ರದಿಂದ ಸಿದ್ದ ನ್ಯಾಮಗೌಡ ಆಯ್ಕೆಯಾಗಿದ್ದರು. ಆದರೆ, ಚುನಾವಣೆ ನಡೆದ ಕೆಲವೇ ದಿನಗಳಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ನಿಧನ ಹೊಂದಿದರು. ಆದ್ದರಿಂದ, ಈಗ ಉಪ ಚುನಾವಣೆ ಎದುರಾಗಿದೆ.
ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಸಿದ್ದು ನ್ಯಾಮಗೌಡ ಪುತ್ರ ಆನಂದ್ ಅವರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ. ಜೆಡಿಎಸ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಲಿದೆ.

ಸಿದ್ದು ನ್ಯಾಮಗೌಡ ಅವರು ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಅವರ ನಿಧನದಿಂದ ತೆರವಾದ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಹೊಣೆ ಸಿದ್ದರಾಮಯ್ಯ ಅವರ ಮೇಲಿದೆ. ಒಂದು ವಾರಗಳ ಕಾಲ ಜಮಖಂಡಿಯಲ್ಲಿ ಸಿದ್ದರಾಮಯ್ಯ ಅವರು ಉಪ ಚುನಾವಣೆ ಪ್ರಚಾರ ನಡೆಸಲಿದ್ದಾರೆ.
ನಾಮಪತ್ರ ಸಲ್ಲಿಕೆ ದಿನ ಜಮಖಂಡಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಬಳಿಕ ಮತ್ತೊಂದು ವಾರ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸದಂತೆ ಸಿದ್ದರಾಮಯ್ಯ ಅವರು ತಂತ್ರ ರೂಪಿಸಲಿದ್ದಾರೆ.
2018ರ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡ ಅವರು 49245 ಮತಗಳನ್ನು ಪಡೆದು ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ (46450) ಅವರನ್ನು ಸೋಲಿಸಿದ್ದರು. ಉಪ ಚುನಾವಣೆಯಲ್ಲಿಯೂ ಶ್ರೀಕಾಂತ್ ಕುಲಕರ್ಣಿ ಅವರು ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ.












Click it and Unblock the Notifications