ಗೆಲ್ಲಿಸಿದ ಬಾದಾಮಿ ಜನರಿಗೆ ಕೃತಜ್ಞತೆ ಹೇಳಲಿರುವ ಸಿದ್ದರಾಮಯ್ಯ
Recommended Video
ಬೆಂಗಳೂರು, ಜೂನ್ 7: ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಹೀನಾಯ ಸೋಲು ಅನುಭವಿಸಿದರೂ, ಗೆಲುವಿನ ಸಮಾಧಾನ ನೀಡಿದ ಬಾದಾಮಿ ಕ್ಷೇತ್ರದ ಜನರಿಗೆ ಕೃತಜ್ಞತೆ ಹೇಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಆರಂಭಿಸಿದ್ದಾರೆ.
ಚುನಾವಣೆ ಮುಗಿದು ಸುಮಾರು 20 ದಿನಗಳ ಬಳಿಕ ಸಿದ್ದರಾಮಯ್ಯ ಅವರು ತಮ್ಮನ್ನು ಗೆಲ್ಲಿಸಿದ ಬಾದಾಮಿಗೆ ತೆರಳುತ್ತಿದ್ದಾರೆ.
ಸಮ್ಮಿಶ್ರ ಸರ್ಕಾರ ರಚನೆ, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಗೊಂದಲಗಳು ಹೆಚ್ಚಿದ್ದರಿಂದ ಮತ್ತು ಅವುಗಳನ್ನು ಬಗೆಹರಿಸುವ ಪ್ರಯತ್ನದಲ್ಲಿ ಸಿದ್ದರಾಮಯ್ಯ ಅವರು ಮುಂಚೂಣಿಯಲ್ಲಿ ಇದ್ದಿದ್ದರಿಂದ ಅವರು ಬಾದಾಮಿ ಕ್ಷೇತ್ರಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ.
ಬಾದಾಮಿಯಲ್ಲಿ ಮನೆ ಹುಡುಕುತ್ತಿದ್ದಾರೆ ಸಿದ್ದರಾಮಯ್ಯ
ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಅವರು ಜನರನ್ನು ಭೇಟಿ ಮಾಡಿ ಕೃತಜ್ಞತೆ ಅರ್ಪಿಸಲಿದ್ದಾರೆ.
ಸಂಜೆ ಐದು ಗಂಟೆ ಸುಮಾರಿಗೆ ಕಾಳಿದಾಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಅವರು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಬಳಿಕ ಅಂಜುಮನ್ ಶಿಕ್ಷಣ ಸಂಸ್ಥೆಯಲ್ಲಿ ಇಫ್ತಾರ್ ಕೂಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ.
ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುವುದಾಗಿ ಹೇಳಿದ್ದರೂ, ಅಲ್ಲಿ ಜಿ.ಟಿ. ದೇವೇಗೌಡ ಅವರ ಎದುರು ಗೆಲ್ಲುವುದು ಕಷ್ಟವಾಗಲಿದೆ ಎಂಬ ಮಾಹಿತಿ ಬಂದಿದ್ದರಿಂದ ಆಪ್ತರ ಒತ್ತಾಯದ ಮೇರೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದರು.
ಬಿಜೆಪಿಯ ಶ್ರೀರಾಮುಲು ಅವರು ಸಿದ್ದರಾಮಯ್ಯ ಅವರಿಗೆ ಎದುರಾಳಿಯಾಗಿದ್ದರು. ಇಲ್ಲಿ ಸಿದ್ದರಾಮಯ್ಯ ಅವರು 1,696 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಆದರೆ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ನ ಜಿ.ಟಿ. ದೇವೇಗೌಡ ಎದುರು 36, 042 ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು.