ವಿಜಯನಗರ ಜಿಲ್ಲೆಗೆ ಬಂಪರ್ ಕೊಡುಗೆ ಕೊಟ್ಟ ಸಿಎಂ
ಬಳ್ಳಾರಿ, ಸೆಪ್ಟೆಂಬರ್ 06; ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂಪರ್ ಕೊಡುಗೆ ನೀಡಿದ್ದಾರೆ. ಈ ಮೂಲಕ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಅಸಮಾಧಾನ ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ತೀರ್ಮಾನಿಸಲಾಯಿತು. ಹೊಸ ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಹುದ್ದೆಗಳನ್ನು ಸೃಜನೆ ಮಾಡಲಾಗುತ್ತದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರ ಜಿಲ್ಲೆ ರಚನೆಗೆ ಒಪ್ಪಿಗೆ ನೀಡಲಾಗಿತ್ತು.
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ವಿಜಯನಗರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ದುರಸ್ತಿ, ನವೀಕರಣ ಮತ್ತು ಕಛೇರಿ ಮೂಲ ಸೌಕರ್ಯಕ್ಕೆ 53 ಕೋಟಿ ರೂ. ಅನುದಾನ ಒದಗಿಸಲು ಮಂಜೂರಾತಿ ನೀಡಲಾಗಿದೆ. ಹೊಸ ಜಿಲ್ಲೆ ವಿಜಯನಗರಕ್ಕೆ ಹೊಸಪೇಟೆ ಕೇಂದ್ರ ಸ್ಥಾನ. ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ತಾಲೂಕುಗಳು ಜಿಲ್ಲೆಗೆ ಸೇರುತ್ತವೆ.
ಸಭೆಯಲ್ಲಿ ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ. ಎಸ್. ಎನ್. ಪ್ರಸಾದ್, ಲೋಕೋಪಯೋಗಿ ಮತ್ತು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ವಿಜಯನಗರ ಜಿಲ್ಲೆ ವಿಶೇಷಾಧಿಕಾರಿ ಅನಿರುದ್ಧ ಶ್ರವಣ್ ಪಿ. ಇತರರು ಪಾಲ್ಗೊಂಡಿದ್ದರು.

ಯಾವ-ಯಾವ ಕಚೇರಿಗಳು
ಮೊದಲ ಹಂತದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ಎಸ್ಪಿ ಕಚೇರಿ, ಜಿಲ್ಲಾ ಆರೋಗ್ಯಾಧಿಕಾರಿ, ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ, ನಗರ ಯೋಜನೆ ಹಾಗೂ ಅರಣ್ಯ ಇಲಾಖೆಗಳ ಕಚೇರಿಗಳನ್ನು ವಿಜಯನಗರ ಜಿಲ್ಲೆಯಲ್ಲಿ ಪ್ರಾರಂಭಿಸಲು ತೀರ್ಮಾನಿಸಲಾಯಿತು.

83 ಎಕರೆ ಭೂಮಿ ಗುರುತಿಸಲಾಗಿದೆ
ವಿಜಯನಗರ ಜಿಲ್ಲೆಯಲ್ಲಿ ಹಂತ ಹಂತವಾಗಿ ಎಲ್ಲಾ ಕಚೇರಿಗಳನ್ನು ಸ್ಥಾಪಿಸಲಾಗುತ್ತದೆ. ಇದರಲ್ಲಿ ಕೆಲವು ಹುದ್ದೆಗಳನ್ನು ಬಳ್ಳಾರಿಯಿಂದ ಸ್ಥಳಾಂತರ ಮಾಡುವ ಮೂಲಕ ಹಾಗೂ ಕೆಲವು ಹುದ್ದೆಗಳ ಸೃಜನೆಯ ಮೂಲಕ ಜಿಲ್ಲಾ ಮಟ್ಟದ ಕಚೇರಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಜಿಲ್ಲಾ ಕಚೇರಿಗಳ ನಿರ್ಮಾಣಕ್ಕೆ ಕರ್ನಾಟಕ ಗೃಹಮಂಡಳಿಯ 83 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಅನುದಾನವನ್ನು ಎರಡು ಹಂತದಲ್ಲಿ ವರ್ಗಾಯಿಸಲಾಗುತ್ತದೆ. ಅನಗತ್ಯ ಸ್ಥಳ ವ್ಯರ್ಥ ಮಾಡದೆ, ಕಾರ್ಯನಿರ್ವಹಣೆಗೆ ಪೂರಕವಾಗಿ ಸುಸಜ್ಜಿತ ಜಿಲ್ಲಾಡಳಿತ ಭವನದ ನಕ್ಷೆ ರೂಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಜಿಲ್ಲಾ ಖನಿಜ ನಿಧಿ ಹಂಚಿಕೆ
ಬಳ್ಳಾರಿ ಜಿಲ್ಲೆಯ ಜಿಲ್ಲಾ ಖನಿಜ ನಿಧಿಗೆ ಸಂಬಂಧಿಸಿದಂತೆ ಈಗಾಗಲೇ 2023-24ರ ವರೆಗೆ ಅನುಮೋದನೆಯಾಗಿರುವ ಕ್ರಿಯಾಯೋಜನೆಯನ್ನು ಜಾರಿಗೊಳಿಸಲಾಗುವುದು. ನಂತರ ಜಿಲ್ಲಾ ಖನಿಜ ನಿಧಿಯನ್ನು ಎರಡೂ ಜಿಲ್ಲೆಗಳ ನಡುವೆ ಹಂಚಿಕೆ ಮಾಡುವ ಕುರಿತು ಒಂದು ಸೂತ್ರ ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಅವಕಾಶವಿದ್ದು, ಹಂಪಿಯಲ್ಲಿ ಹಾಗೂ ಮತ್ತಿತರ ಪಾರಂಪರಿಕ ತಾಣಗಳಲ್ಲಿ ಪ್ರವಾಸಿಗರಿಗೆ ಮೂಲಸೌಕರ್ಯ ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

ಬಳ್ಳಾರಿ, ವಿಜಯನಗರ ಜಿಲ್ಲೆ ತಾಲೂಕುಗಳು
ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆನಂದ್ ಸಿಂಗ್ ಬೇಡಿಕೆಯಂತೆ ಬಳ್ಳಾರಿಯನ್ನು ವಿಭಜನೆ ಮಾಡಿ ಹೊಸದಾಗಿ ವಿಜಯನಗರ ಜಿಲ್ಲೆ ರಚನೆ ಮಾಡಲಾಗಿದೆ.
ಬಳ್ಳಾರಿ; ಈಗ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ ಕೇಂದ್ರ ಸ್ಥಾನವಾಗಿದೆ. ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ, ಸಂಡೂರು ತಾಲೂಕುಗಳು ಜಿಲ್ಲೆಯಲ್ಲಿವೆ.
ವಿಜಯನಗರ; ಹೊಸದಾಗಿ ರಚನೆಯಾದ ವಿಜಯನಗರಕ್ಕೆ ಹೊಸಪೇಟೆ ಕೇಂದ್ರ ಸ್ಥಾನವಾಗಿದೆ. ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ತಾಲೂಕುಗಳು ಜಿಲ್ಲೆಯಲ್ಲಿವೆ.












Click it and Unblock the Notifications