ಎಸ್ಸಿ, ಎಸ್ಟಿ ಸಮುದಾಯಕ್ಕೆ 75 ಯೂನಿಟ್ ಉಚಿತ ವಿದ್ಯುತ್ ಭರವಸೆ
ಬಳ್ಳಾರಿ, ನವೆಂಬರ್, 13: ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ಕೊಟ್ಟವರು ಬಾಬಾ ಸಾಹೇಬರಾಗಿದ್ದಾರೆ. ಅವರ ಕಾರ್ಯಬದ್ಧತೆ, ಕಾರ್ಯಯೋಜನೆ ಸಿದ್ಧತೆ ಹಾಗೂ ಸಮರ್ಪಣ ಮನೋಭಾವ ಕೆಲಸದ ಮೂಲಕ ಎಲ್ಲಾ ವರ್ಗದ ಸಮುದಾಯದವರಿಗೆ ಶ್ರಮಿಸಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಳ್ಳಾರಿಯಲ್ಲಿ ಹೇಳಿದರು.
ಪ್ರಧಾನಮಂತ್ರಿಯವರ ಬೆಳಕು ಯೋಜನೆಯಡಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ಕರೆಂಟ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಸಿರುಗುಪ್ಪದ ಎ. ವಿ. ಎಸ್ ಕಲ್ಯಾಣ ಮಂಟಪದ ಹತ್ತಿರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಾಯಿತು.
ಈ ಸಂದರ್ಭಸಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿಯವರ ಬೆಳಕು ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ಕರೆಂಟ್ ಅನ್ನು ಉಚಿತವಾಗಿ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ 24 ಲಕ್ಷ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡಲಾಗುತ್ತದೆ. ಅಂದರೆ ವಾರ್ಷಿಕ 820 ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಿದರು.

ಸಂವಿಧಾನದಿಂದ ಸ್ವತಂತ್ರ್ಯವಾಗಿ ಬೆಳೆಯಬಹುದು
ನಂತರ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಮಾತನಾಡಿ, ಹಿಂದುಳಿದ ಅನೇಕ ಸಮುದಾಯಗಳಿಗೆ ಶಕ್ತಿ ಎಂದರೆ ಅದು ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರು. ಯಾವುದೇ ವ್ಯಕ್ತಿಯು ಸ್ವತಂತ್ರ್ಯವಾಗಿ ವಿವಿಧ ರಂಗಗಳಲ್ಲಿ ಬೆಳೆಯಬಹುದು ಎಂದರೆ ಅದು ಬಾಬಾ ಸಾಹೇಬರು ಬರೆದಂತಹ ಸಂವಿಧಾನದಿಂದ ಮಾತ್ರ ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳು ಅಂಬೇಡ್ಕರ್ ಅವರ ಎರಡು ಕಣ್ಣುಗಳಿದ್ದಂತೆ. ಅನೇಕ ವರ್ಷಗಳಿಂದ ನೆನೆಗುದಿ ಬಿದ್ದಿದ್ದ ಮೀಸಲಾತಿ ಹೋರಾಟಕ್ಕೆ ನಮ್ಮ ಸರ್ಕಾರವು ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಅದರಿಂದ ವಿವಿಧ ರಂಗಗಳಲ್ಲಿ ಹುದ್ದೆಗಳು, ಕಾಲೇಜು ಸೀಟುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಅನೂಕೂಲವಾದಂತಾಗಿದೆ ಎಂದರು.

ಬಿಜೆಪಿ ಸರ್ಕಾರದಿಂದ ಅನುದಾನ ಹೆಚ್ಚಳ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಸರ್ಕಾರದಿಂದ 28 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಹೆಚ್ಚಿಸಲಾಗಿದೆ. ಸಮುದಾಯದ ಅಭಿವೃದ್ಧಿ ನಿಗಮಗಳಿಗೆ ಸುಮಾರು 990 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಮಾಡಲಾಗುವುದು ಎಂದು ಮಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು.
ನಂತರ ಶಾಸಕ ಎಂ. ಎಸ್. ಸೋಮಲಿಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕಿನಲ್ಲಿ ಸುಮಾರು ಶೇಕಡಾ 35ರಿಂದ 40ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿದ್ದಾರೆ. ಹಲವು ವರ್ಷಗಳ ಪ್ರತಿಫಲವಾಗಿ ಇದೀಗ ಬಾಬಾ ಸಾಹೇಬರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.

1.60 ಹೆಕ್ಟೇರ್ನಲ್ಲಿ ಭವನ ನಿರ್ಮಾಣ
ಈ ಭವನವು 3.50 ಕೋಟಿ ರೂಪಾಯಿ ವೆಚ್ಚದಲ್ಲಿ 1.60 ಹೆಕ್ಟೇರ್ ವಿಸ್ತೀರ್ಣದಲ್ಲಿ ನಿರ್ಮಾಣ ಆಗುತ್ತಿದೆ. ಈಗಾಗಲೇ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಇನ್ನುಳಿದ ಎರಡು ಕೋಟಿ ರೂಪಾಯಿ ಅನುದಾನವನ್ನು ಜಿಲ್ಲಾ ಉಸ್ತವಾರಿ ಸಚಿವರು ನೀಡಲಿದ್ದಾರೆ. ಅದೇ ರೀತಿಯಾಗಿ ನಗರಸಭೆ ವ್ಯಾಪ್ತಿಯಲ್ಲಿ ಶೇಕಡಾ18ರಷ್ಟು ಅನುದಾನದಲ್ಲಿ 50 ಲಕ್ಷ ರೂಪಾಯಿ ನೀಡಲಾಗುವುದು. ಈಗಾಗಲೇ ತೆಕ್ಕಲಕೋಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ 3 ಕೋಟಿ ಅನುದಾನದಲ್ಲಿ ಪರಿಶಿಷ್ಟ ಪಂಗಡಗಳ ವಾಲ್ಮೀಕಿ ಭವನವನ್ನು ನಿರ್ಮಿಸಲಾಗಿದೆ. ಇನ್ನು ಮುದೇನೂರು-ಬಲಕುಂದಿ ಸೇತುವೆ ನಿರ್ಮಾಣಕ್ಕೆ 35 ರೂಪಾಯಿ ಕೋಟಿ ನೀಡಲಾಗುತ್ತಿದ್ದು, ಈ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿಗೆ ಮುಂದಿನ ತಿಂಗಳಲ್ಲಿಯೇ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ವಿವಿಧ ಕಾಮಗಾರಿಗೆ ತಗಲುವ ಒಟ್ಟು ವೆಚ್ಚ?
ಸಿರುಗುಪ್ಪದಲ್ಲಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಾಮಗಾರಿ, 50 ಕೋಟಿ ರೂಪಾಯಿ ವೆಚ್ಚದಲ್ಲಿ ರಾರಾವಿ ಬ್ರಿಡ್ಜ್, 4 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ನಿರ್ಮಾಣ ಮಾಡಲು ಮುಂದಾಗಿದ್ದೇವೆ. 25 ಕೋಟಿ ರೂಪಾಯಿಯಂತೆ ಒಂದೊಂದು ಕಟ್ಟಡ ನಿರ್ಮಾಣ ಮಾಡಲಾಗಿದೆ. ಅದೇ ರೀತಿಯಾಗಿ 24 ಕೋಟಿ ರೂಪಾಯಿ ವೆಚ್ಚದಲ್ಲಿ 8 ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಾಮಗಾರಿಯನ್ನು ಮುಖ್ಯಮಂತ್ರಿಗಳಿಂದ ಆರಂಭಿಸಲಾಗುವುದು. ಹಾಗೂ ಸಿರಿಗೇರಿ ಕ್ರಾಸ್ನಲ್ಲಿ ಪದವಿ ಪೂರ್ವ ಕಾಲೇಜು ನಿರ್ಮಾಣಕ್ಕೆ ಅನುಮತಿಯನ್ನು ಪಡೆಯಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ವೈ. ಎಂ. ಸತೀಶ್, ನಗರಸಭೆಯ ಅಧ್ಯಕ್ಷರಾದ ಕೆ.ಸುಶೀಲಮ್ಮ ವೆಂಕಟರಾಮರೆಡ್ಡಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ತಹಶೀಲ್ದಾರ್ ಎನ್.ಆರ್.ಮಂಜುನಾಥ ಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ದಮ್ಮೂರು ಸೋಮಪ್ಪ, ದೊಡ್ಡಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.












Click it and Unblock the Notifications