ಗಣಿ ಜಿಲ್ಲೆ ಬಳ್ಳಾರಿಯಲ್ಲಿ 8 ಬಾಲ್ಯ ವಿವಾಹಗಳಿಗೆ ಬ್ರೇಕ್!
ಬಳ್ಳಾರಿ, ಮೇ 25: ಗಣಿ ಜಿಲ್ಲೆ ಬಳ್ಳಾರಿಯ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ನಡೆಯಬೇಕಿದ್ದ ಎಂಟು ಬಾಲ್ಯ ವಿವಾಹಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ತಡೆ ಹಿಡಿದಿದ್ದಾರೆ.
ಜಿಲ್ಲಾ ಮಕ್ಕಳ ಸಹಾಯವಾಣಿಗೆ ಬಂದ ಖಚಿತ ಮಾಹಿತಿ ಮೇರೆಗೆ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ದಾಳಿ ನಡೆಸಿ ಬಾಲ್ಯ ವಿವಾಹಗಳನ್ನು ತಡೆದಿದ್ದಾರೆ.
ಬ್ರೇಕಿಂಗ್ ನ್ಯೂಸ್: ಬಳ್ಳಾರಿಯಲ್ಲಿ 21 ಕೊರೊನಾ ವಾರಿಯರ್ಸ್ ಗೆ ಕ್ವಾರೆಂಟೈನ್!
ಬಳ್ಳಾರಿ ತಾಲ್ಲೂಕಿನ ರೂಪನಗುಡಿಯಲ್ಲಿ 2, ಕಪ್ಪಗಲ್ಲು, ಸಿರವಾರ, ವದ್ದಟ್ಟಿ, ಕೊಳಗಲ್ಲು ಗ್ರಾಮಗಳಲ್ಲಿ ತಲಾ ಒಂದೊಂದು ಹಾಗೂ ಸಿರುಗುಪ್ಪ ತಾಲ್ಲೂಕಿನ ತೊಂಡೆಹಾಳ್ ಗ್ರಾಮದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹಗಳನ್ನು ತಡೆದ ಅಧಿಕಾರಿಗಳ ತಂಡ, ಪೋಷಕರಿಂದ ಮುಚ್ಚಳಿಕೆ ಪತ್ರಗಳನ್ನು ಬರೆಸಿಕೊಂಡಿದ್ದಾರೆ. ಪೋಷಕರ ವಿರುದ್ಧ ಪ್ರತ್ಯೇಕವಾಗಿ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ.
ಬಳ್ಳಾರಿ ಗ್ರಾಮಾಂತರ ಸಿಡಿಪಿಒ ಉಷಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೈಯದ್ ಚಾಂದ್ ಪಾಷಾ, ಸಿಬ್ಬಂದಿಗಳಾದ ರಾಜಾನಾಯ್ಕ, ಈಶ್ವರ್ ರಾವ್, ಉಮೇಶ್, ಜ್ಯೋತಿ, ನಾಗುಭಾಯಿ ನೇತೃತ್ವದ ಪೊಲೀಸ್ ಅಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳ ತಂಡವು ಈ ದಾಳಿ ಕಾರ್ಯಚರಣೆಯಲಿ ಪಾಲ್ಗೊಂಡಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಆರ್.ನಾಗರಾಜ ತಿಳಿಸಿದ್ದಾರೆ.