ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಬಂದ್: ಸರ್ಕಾರದ ವಿರುದ್ಧ ಘೋಷಣೆ
ಬಳ್ಳಾರಿ, ನವೆಂಬರ್ 26: ವಿಜಯನಗರ ಜಿಲ್ಲೆ ರಚನೆಗೆ ತಾತ್ವಿಕ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯಿಂದ ಬಂದ್ಗೆ ಕರೆ ನೀಡಿದೆ.
ಬಳ್ಳಾರಿ ಜಿಲ್ಲೆ ವಿಭಜನೆ ಹಾಗೂ ವಿಜಯನಗರ ಜಿಲ್ಲೆ ರಚನೆ ಖಂಡಿಸಿ ನ.೨೬ರ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ.
ಬಳ್ಳಾರಿ ಬಂದ್ ಹಿನ್ನಲೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಪೊಲೀಸ್ ಇಲಾಖೆ, ಶಾಂತಿ ಸುವ್ಯವಸ್ಥೆ ಕಾಪಾಡಲು 3 ಡಿಎಸ್ಪಿ, 10 ಸಿಪಿಐ, ಪಿಐ, 18 ಪಿಎಸ್ಐ, 40 ಎಎಸ್ಐ, 200 ಹೆಚ್.ಸಿ, ಪಿಸಿ, 3 ಡಿಎಎರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ಗುರವಾರ ಬೆಳಿಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿದ್ದು, ಬಳ್ಳಾರಿಯ ರಾಯಲ್ ಸರಗಕಲ್ ಬಳಿ ಹೋರಾಟಗಾರರಿಂದ ಪ್ರತಿಭಟನೆ ನಡೆಸಲಾಯಿತು. ಟೈರ್ ಗೆ ಬೆಂಕಿ ಹಚ್ಚಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು.
ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಬಳ್ಳಾರಿ ಬಂದ್ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ಸಿಎಂ ಬಿ.ಎಸ್ ಯಡಿಯೂರಪ್ಪ ಭಾವಚಿತ್ರ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದ ಬಳಿ ಗುರುವಾರ ಬೆಳಿಗ್ಗೆ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ಹತ್ತಾರು ಮುಖಂಡರು ಬೆಳ್ಳಂಬೆಳಿಗ್ಗೆ ಟೈಯರ್ ಗೆ ಬೆಂಕಿ ಹಚ್ಚುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications