ಆರು ಶಾಸಕರು ಗೆದ್ದಿರುವ ಬಳ್ಳಾರಿಗೊಂದು ಸಚಿವ ಸ್ಥಾನ ಕೊಡಿ
ಬಳ್ಳಾರಿ, ಸೆಪ್ಟೆಂಬರ್ 19 : ಕರ್ನಾಟಕ ಕಾಗ್ರೆಸ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ 6 ಸಚಿವ ಸ್ಥಾನಗಳು ಖಾಲಿ ಇವೆ. ಆದರೆ, ಪಕ್ಷದ 20ಕ್ಕೂ ಹೆಚ್ಚು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
ಬಳ್ಳಾರಿ ಜಿಲ್ಲೆಗೊಂದು ಸಚಿವ ಸ್ಥಾನ ನೀಡಿ ಎಂಬ ಕೂಗು ಜೋರಾಗುತ್ತದೆ. ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು ಸಹ ಬಳ್ಳಾರಿ ಜಿಲ್ಲೆಗೊಂದು ಸಚಿವ ಸ್ಥಾನ ನೀಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದರು.
ಈಗ ಜಿಲ್ಲೆಯ ಕಾಂಗ್ರೆಸ್ ಶಾಸಕರೇ ಸಚಿವ ಸ್ಥಾನ ನೀಡಿ ಎಂದು ಬೇಡಿಕೆ ಮುಂದಿಟ್ಟಿದ್ದಾರೆ. ಅಕ್ಟೋಬರ್ ಅಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟಕ್ಕೆ ಬಳ್ಳಾರಿ ಜಿಲ್ಲೆಯ ಶಾಸಕರು ಸೇರುವರೇ? ಕಾದು ನೋಡಬೇಕು.
ಬಳ್ಳಾರಿ ಜಿಲ್ಲೆಯಲ್ಲಿ 9 ವಿಧಾನಸಭಾ ಕ್ಷೇತ್ರಗಳಿವೆ. ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ), ಆನಂದ್ ಸಿಂಗ್ (ವಿಜಯನಗರ), ಜೆ.ಎನ್.ಗಣೇಶ್ (ಕಂಪ್ಲಿ), ಇ.ತುಕಾರಂ (ಸಂಡೂರು), ಪಿ.ಟಿ.ಪರಮೇಶ್ವರ ನಾಯಕ್ (ಹೂವಿನಹಡಗಲಿ) ಸೇರಿ 6 ಕಾಂಗ್ರಸ್ ಶಾಸಕರು ಗೆದ್ದು ಬಂದಿದ್ದಾರೆ...

ಸಚಿವ ಸ್ಥಾನ ನೀಡದಿರುವುದ ಬೇಸರ ತಂದಿದೆ
ಸಂಡೂರು ಶಾಸಕ ಇ.ತುಕರಾಂ ಅವರು, 'ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡದಿರುವುದು ಬೇಸರ ತಂದಿದೆ. ಜಿಲ್ಲೆಯಲ್ಲಿ ಆರು ಶಾಸಕರು ಗೆದ್ದಿದ್ದೇವೆ. ಆದರೆ, ಬೇರೆ ಯಾರೋ ಬಂದು ಜಿಲ್ಲೆಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಸ್ಥಳೀಯರಿಗೆ ಮತ್ತು ಮೂಲ ಕಾಂಗ್ರೆಸ್ನವರಿಗೆ ಅವಕಾಶ ಕೊಡಿ. ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತು ಬೇರೆಯವರು ನಿರ್ಧಾರ ಮಾಡುವುದು ಸರಿಯಲ್ಲ' ಎಂದು ಹೇಳಿದರು.

ಬಂಜಾರ ಸಮುದಾಯಕ್ಕೊಂದು ಸಚಿವ ಸ್ಥಾನ
'ಬಳ್ಳಾರಿ ಜಿಲ್ಲೆಯಲ್ಲಿ ಆರು ಶಾಸಕರ ಪೈಕಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಒಂದು, ಬಂಜಾರ ಸಮುದಾಯಕ್ಕೆ ಒಂದು ಸಚಿವ ಸ್ಥಾನ ನೀಡಬೇಕು. ಬಂಜಾರ ಸಮುದಾಯದಿಂದ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಆದರೆ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ' ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ್ ಹೇಳಿದ್ದಾರೆ.

ಬಿ.ನಾಗೇಂದ್ರಗೆ ಸಚಿವ ಸ್ಥಾನ
ಬಳ್ಳಾರಿ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ಜಾರಕಿಹೊಳಿ ಸಹೋದರರು ಬೇಡಿಕೆ ಇಟ್ಟಿದ್ದಾರೆ. ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬದು ಜಾರಕಿಹೊಳಿ ಸಹೋದರರ ಬೇಡಿಕೆ. ಆದರೆ, ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕೆ?, ಬೇರೆ ಶಾಸಕರಿಗೆ ನೀಡಬೇಕೆ? ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ.

ಸಿದ್ದರಾಮಯ್ಯ ಭೇಟಿ
ಹೂವಿನಹಡಗಲಿ ಶಾಸಕಪಿ.ಟಿ.ಪರಮೇಶ್ವರ ನಾಯಕ್ ಅವರು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರು ಮಾತುಕತೆ ನಡೆಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗ ಪರಮೇಶ್ವರ ನಾಯಕ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದರು.












Click it and Unblock the Notifications