ಲಸಿಕೆ ಬಂದರೆ ಮೊದಲು ಕೊರೊನಾ ವಾರಿಯರ್ಸ್ ಗಳಿಗೆ ಆದ್ಯತೆ
ಬಳ್ಳಾರಿ, ನವೆಂಬರ್ 3: ಕೊರೊನಾ ಸೋಂಕು ನಿಯಂತ್ರಣ ಲಸಿಕೆಯನ್ನು ಮೊದಲ ಆದ್ಯತೆಯಾಗಿ ಕೊರೊನಾ ವಾರಿಯರ್ಸ್ ಗಳಿಗೆ ಕಾರ್ಯದಲ್ಲಿರುವವರಿಗೆ ವಿತರಿಸಲಾಗುವುದು. ಅಂಥವರ ನಿಖರ ಮಾಹಿತಿಯನ್ನು ಕೂಡಲೇ ಸಂಗ್ರಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಧಿಕಾರಿಗಳಿಗೆ ಸೂಚಿಸಿದರು.
ಕೊರೊನಾ ಲಸಿಕೆ ಸಂಶೋಧನೆ ಕಾರ್ಯವು ಜಗತ್ತಿನಾದ್ಯಂತ ವೇಗದಿಂದ ನಡೆದಿದೆ. ಶೀಘ್ರ ಜನರಿಗೆ ಲಭ್ಯವಾಗುವ ನಿರೀಕ್ಷೆ ಇದ್ದು, ಹೀಗಾಗಿ ಮೊದಲಿಗೆ ಕೊರೊನಾ ಸೇನಾನಿಗಳಿಗೆ ನೀಡಲಾಗುವುದು ಎಂದು ಬಳ್ಳಾರಿ ನಗರದಲ್ಲಿ ಮಂಗಳವಾರ ಕೋವಿಡ್-19 ಲಸಿಕೆ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಹೇಳಿದರು.
ಈಗಾಗಲೇ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿವರಗಳನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳು ತಮ್ಮ ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಗಳ ವಿವರಗಳನ್ನು ಬುಧವಾರ ಸಂಜೆಯೊಳಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದು ಸೂಚಿಸಿದರು.

ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್ ಗಳಿಗೆ ರವಾನಿಸಬೇಕು.
ಜಿಲ್ಲೆಯ ಪ್ರಮುಖ ಆಸ್ಪತ್ರೆಯಾಗಿರುವ ವಿಮ್ಸ್ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಮಾಹಿತಿಯನ್ನು ಕೂಡಲೇ ಒದಗಿಸಬೇಕು. ಆಯುಷ್, ಆಯುರ್ವೇದ ಆಸ್ಪತ್ರೆ ಹಾಗೂ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರೂ ವೈದ್ಯರು ಹಾಗೂ ಸಿಬ್ಬಂದಿಯ ಮಾಹಿತಿಯನ್ನು ನೀಡಬೇಕು. ಕೊರೊನಾ ನಿಯಂತ್ರಣದಲ್ಲಿ ತೊಡಗಿರುವವರಿಗೆ ಮೊದಲ ಆದ್ಯತೆ ನೀಡಬೇಕು ಎಂದರು.
ಸರ್ಕಾರವು ಜನರ ಆರೋಗ್ಯಹಿತ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉತ್ತಮವಾದ ಯೋಜನೆಯೊಂದನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದ್ದು, ಅರ್ಹರೆಲ್ಲರೂ ಮಾಹಿತಿ ನೀಡಿ ಸಹಕರಿಸಬೇಕು. ಮಾಹಿತಿ ನೀಡುವುದು ವಿಳಂಬವಾದರೆ ಲಸಿಕೆ ವಿತರಣೆಗೆ ಅಡಚಣೆಯಾಗುತ್ತದೆ ಎಂಬ ಕಾರಣಕ್ಕೆ ಬಹಳಷ್ಟು ಮುಂಚಿತವಾಗಿಯೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಲಸಿಕೆ ವಿತರಣೆಯ ಕಾರ್ಯಕ್ಕಾಗಿ ನಿಯೋಜಿತ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾಹಿತಿ ಸಂಗ್ರಹಿಸಬೇಕು. ಮಾಹಿತಿಯ ನಿಖರತೆಯನ್ನು ಪರಿಶೀಲಿಸಬೇಕು. ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆ ಈಗ ನಡೆಸುತ್ತಿರುವ ತಪಾಸಣೆಗಳು ನಿರಾತಂಕವಾಗಿ ನಡೆಯಬೇಕು ಎಂದರು.
ಬಳ್ಳಾರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಲ್.ಜನಾರ್ಧನ್, ಜಿಲ್ಲಾ ಸರ್ಜನ್ ಡಾ.ಎನ್.ಬಸರೆಡ್ಡಿ ಉಪಸ್ಥಿತರಿದ್ದರು.












Click it and Unblock the Notifications